Karnataka next chief minister debate: ರಾಜ್ಯದ ಮುಂದಿನ ಮುಖ್ಯಮಂತ್ರಿ ಚರ್ಚೆಗೆ ಡಿಸಿಎಂ ಡಿ.ಕೆ.ಶಿವಕುಮಾರ ತೆರೆ ಎಳೆದಿದ್ದಾರೆ. ನಮಗೆ ವ್ಯಕ್ತಿಗಿಂತ ಪಕ್ಷ ಮುಖ್ಯ, ಆದ್ದರಿಂದ ಯಾರೂ ಈ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆ ಮಾಡಿ ಎಂದರು.

ರಾಯಚೂರು (ಅ.24): ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಯಾರೂ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ನಮಗೆ ವ್ಯಕ್ತಿಗಿಂತ ಪಕ್ಷ ಮುಖ್ಯ, ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆ ಮಾಡಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿದ್ದರಾಮಯ್ಯ ಬಳಿಕ ಜಾರಕಿಹೊಳಿ ಸಿಎಂ?

ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಸಿದ್ದು ಬಳಿಕ ಸತೀಶ್‌ ಜಾರಕಿಹೊಳಿ ಲೀಡ್‌ ಮಾಡಬೇಕು ಎಂಬ ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಏನು ಹೇಳಿದ್ದಾರೆಯೋ ಆ ಬಗ್ಗೆ ಅವರನ್ನೇ ಕೇಳಿ ಎಂದರು. ಸಿದ್ದರಾಮಯ್ಯನವರಾಗಲಿ, ನಾನಾಗಲಿ ಈ ಬಗ್ಗೆ ಏನಾದರೂ ಹೇಳಿದ್ದೇವೆಯೇ? ಪಕ್ಷ ಹೇಳಿದ ಕೆಲಸವನ್ನು ನಾವು ಒಟ್ಟಿಗೆ ಸೇರಿ ಮಾಡಿಕೊಂಡು ಹೋಗುತ್ತಿದ್ದೇವೆ. ಪಕ್ಷ ಹೇಳಿದ ಕೆಲಸಕ್ಕೆ ನಾನು ಬದ್ಧನಾಗಿದ್ದೇನೆ ಎಂದರು.

ಪಕ್ಷ ಏನು ಮಾಡಲು ಹೇಳುತ್ತೋ ಅದನ್ನು ಮಾಡುತ್ತೇನೆ:

ಪಕ್ಷ ನನಗೆ ರಾಜ್ಯಾಧ್ಯಕ್ಷ ಸ್ಥಾನದ ಹೊಣೆ ನೀಡಿದೆ, ಡಿಸಿಎಂ ಸ್ಥಾನ ಕೊಟ್ಟಿದೆ. ನನಗೆ ವಹಿಸಿದ ದೊಡ್ಡ, ದೊಡ್ಡ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಪಕ್ಷ ನನಗೆ ಏನು ಮಾಡಲು ಹೇಳಿದೆಯೋ ಅದನ್ನು ಮಾಡಿದ್ದೇನೆ ಎಂದು ತಿಳಿಸಿದರು.

ಬಳಿಕ, ತಾಲೂಕಿನ ಗಾಣಧಾಳ ಪಂಚಮುಖಿಯಲ್ಲಿ ಬ್ಲಾಕ್ ಕಾಂಗ್ರೆಸ್ ಮತ್ತು ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿ, ವ್ಯಕ್ತಿಗಿಂತ ಪಕ್ಷ ಮುಖ್ಯ. ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆ ಮಾಡಬೇಕು. ನಾನು ಎಂದಿಗೂ ಗುಂಪು ರಾಜಕಾರಣ ಮಾಡಿಲ್ಲ. ಮಾಡಿದ್ದರೆ ಏನೇನೋ ಮಾಡಬಹುದಿತ್ತು. ಕಾಂಗ್ರೆಸ್ ಪಕ್ಷ ಇದ್ದರೆ, ನಾವು, ನೀವು ಇರುತ್ತೇವೆ ಎಂದರು.