ಸಚಿವ ಪ್ರಿಯಾಂಕ್ ಖರ್ಗೆಯವರು ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದು ಖರ್ಗೆಯವರ 'ಬೌದ್ಧಿಕ ದಾರಿದ್ರ್ಯತನ' ಪ್ರದರ್ಶನ ಎಂದು ಕಿಡಿಕಾರಿದ್ದಾರೆ.
ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ದ ಶಾಖೆ, ಪಥಸಂಚಲನ ಮತ್ತು ಬೈಠಕ್ಗಳನ್ನು ನಿಷೇಧಿಸಬೇಕೆಂದು ಕೋರಿ ಸಚಿವರಾದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಜಗತ್ತಿನ ಅತಿ ದೊಡ್ಡ ಸ್ವಯಂಸೇವಕರ ಪಡೆಯನ್ನು ಹೊಂದಿರುವ ಆರ್ಎಸ್ಎಸ್ನ ನಿಷೇಧಕ್ಕೆ ಕರೆ ನೀಡಿರುವುದು ಸಚಿವರ 'ಬೌದ್ಧಿಕ ದಾರಿದ್ರ್ಯತನ'ವನ್ನು ತೋರಿಸುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ ಅವರು, ಸರ್ಕಾರಿ ಸ್ಥಳಗಳಲ್ಲಿ ನಡೆಸುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಾಖೆಗಳನ್ನು, ಪಥಸಂಚಲನ, ಬೈಠಕ್ ಗಳನ್ನು ನಿಷೇಧಿಸಬೇಕೆಂದು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮುಖ್ಯ ಮಂತ್ರಿಗಳಿಗೆ ಬರೆದಿದ್ದಾರೆ. ಜಗತ್ತಿನ ಅತ್ಯಂತ ದೊಡ್ಡ ಸ್ವಯಂಸೇವಕರ ಪಡೆ ಹೊಂದಿರುವ ಆರ್.ಎಸ್.ಎಸ್. ನ ನಿಷೇಧಕ್ಕೆ ಕರೆ ಕೊಟ್ಟಿರುವುದು ಇವರ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ.
ನಿಸ್ವಾರ್ಥ ಸೇವೆ ನೀಡುವ ಪ್ರಪಂಚದ ಏಕೈಕ ಸಂಘಟನೆ ಆರ್ಎಸ್ಎಸ್:
ಪ್ರಕೃತಿ ವಿಕೋಪ, ರೈಲು ದುರಂತ, ಕೋವಿಡ್, ಅಪಘಾತಗಳು, ಭೂಕಂಪ, ನೆರೆಯಾದಾಗ ನೊಂದವರಿಗೆ ಮೊದಲು ಆಸರೆಯಾಗುವುದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರು. ಸೇವಾತತ್ಪರತೆ, ಸಮಾಜ ಸೇವೆ, ರಾಷ್ಟ್ರ ಪ್ರೇಮದ ಬಗ್ಗೆ ಜಾಗೃತಿ, ಶಿಸ್ತಿಗೆ ಮತ್ತೊಂದು ಹೆಸರೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಹಗಲು ರಾತ್ರಿ ಎನ್ನದೇ ನಿಸ್ವಾರ್ಥ ಸೇವೆ ನೀಡುವ ಪ್ರಪಂಚದ ಏಕೈಕ ಸಂಘಟನೆಯಾಗಿದೆ. ಮನ ಮನೆಗಳನ್ನು ಬೆಸೆದುಕೊಳ್ಳುತ್ತಿರುವ ಸಂಘ ಚಿಂತನೆ ವ್ಯಾಪಿಸಿದ ಮತ್ತು ವ್ಯಾಪಿಸುತ್ತಿರುವ ರೀತಿ ಅನನ್ಯ.
ರಾಜಕೀಯ ಪ್ರೇರಿಯ ಹೇಳಿಕೆ ಬಿಟ್ಟು ಕ್ಷೇತ್ರದ ಅಭಿವೃದ್ಧಿ ಮಾಡಲಿ:
ಸಂಘವನ್ನು ನಿಷೇದ ಮಾಡಲು ಯಾರಿಂದಲೂ ಸಾಧ್ಯವಾಗಿಲ್ಲ. ವಿರೋಧಿಗಳು ಪ್ರೀತಿಸುವ, ಗೌರವಿಸುವ ಜಗತ್ತಿನ ಏಕೈಕ ಸಂಘಟನೆಯೇ ಆರ್.ಎಸ್.ಎಸ್. ರಾಜಕೀಯ ಪ್ರೇರಿತ ಹೇಳಿಕೆಗಳನ್ನು ಕೊಡುವುದನ್ನು ಬಿಟ್ಟು ಸ್ವಕ್ಷೇತ್ರವನ್ನು ಅಭಿವೃದ್ಧಿಗೊಳಿಸಲು ಪ್ರಿಯಾಂಕ್ ಖರ್ಗೆ ಅವರು ಶ್ರಮಿಸಲಿ. ಅಷ್ಟಕ್ಕೂ, ನಿಷೇಧಗೊಳಿಸಬೇಕಾಗಿದ್ದರೆ ಕೂಡಲೇ ಎಸ್.ಡಿ.ಪಿ.ಐ ನಂತ ದೇಶ ವಿರೋಧಿ ಸಂಘಟನೆಗಳನ್ನು ನಿಷೇದ ಮಾಡಲಿ. ಅನ್ಯ ಕೋಮಿನ ಹಬ್ಬಗಳಂದು ತಲ್ವಾರ್ ತೋರಿಸಿ ಬೀದಿಗಳಲ್ಲಿ ಹೆಲ್ಮೆಟ್ ಧರಿಸದೇ ಓಡಾಡುವ ಪುಂಡರ ಹೆಡೆಮುರಿಕಟ್ಟಲಿ .
ಬಕ್ರೀದ್ ಸೇರಿದಂತೆ ಇತರ ಹಬ್ಬಗಳಲ್ಲಿ ಆಗುವ ಪ್ರಾಣಿಬಲಿಯನ್ನು ನಿಷೇಧಿಸಲಿ. ಆಂಗ್ಲ, ವಿಜ್ಞಾನ, ಗಣಿತ, ಸಮಾಜ ಹೇಳಿಕೊಡದೆ ದ್ವೇಷ, ಬೇರೆ ಧರ್ಮಗಳ ಬಗ್ಗೆ ತಪ್ಪು ವಿಚಾರಗಳನ್ನು ಕಲಿಸುವ ಮದರಸಗಳನ್ನು ನಿಷೇದ ಮಾಡಲಿ. ಸ್ವಾತಂತ್ರ್ಯ ಬಂದು ಏಳು ದಶಕಗಳಾದರೂ ಅತ್ಯಂತ ಹಿಂದುಳಿದ ಜಿಲ್ಲೆ ಎಂದು ಕರೆಸಿಕೊಳ್ಳುವ ಹಾಗೂ ಅವರೇ ಪ್ರತಿನಿಧಿಸುವ ಕಲ್ಬುರ್ಗಿಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲಿ. ಸಂಘದ ನಿಷೇದ ಕನಸಿನ ಮಾತು' ಎಂದು ತಿರುಗೇಟು ಕೊಟ್ಟಿದ್ದಾರೆ.
ಪ್ರಿಯಾಂಕ ಖರ್ಗೆ ಬರೆದ ಪತ್ರದಲ್ಲೇನಿದೆ?
ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ತ್ವಗಳನ್ನೊಳಗೊಂಡ ಸಂವಿಧಾನವು ನಮಗ ಅಧಿಕಾರವನ್ನು ನೀಡುತ್ತದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ ಎಂಬ ಹೆಸರಿನ ಸಂಘಟನೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆ ನಡೆಸುತ್ತಾ ಘೋಷಣೆಗಳನ್ನು ಕೂಗುತ್ತಾ ಮಕ್ಕಳು ಮತ್ತು ಯುವ ಸಮುದಾಯದ ಮನಸಿನಲ್ಲಿ ಭಾರತದ ಏಕತೆಯ ವಿರುದ್ಧವಾಗಿ, ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬಲಾಗುತ್ತಿದೆ. ಪೊಲೀಸ್ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ನಡೆಸುವ ಮೂಲಕ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ.
ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ.
