ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ಮರುವಿಂಗಡಿಸಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯನ್ವಯ 5 ಪ್ರವರ್ಗಗಳ ಬದಲಾಗಿ 3 ಪ್ರವರ್ಗಗಳಾಗಿ ವಿಂಗಡಿಸಿ, ಮೀಸಲಾತಿ ಪ್ರಮಾಣ ನಿಗದಿಪಡಿಸಲಾಗಿದೆ. 101 ಜಾತಿಗಳ ಪೈಕಿ ಯಾರಿ ಯಾವ ವರ್ಗಕ್ಕೆ ಬರುತ್ತೀರಿ ಈ ಆದೇಶ ಪಟ್ಟಿ ನೋಡಿ..

ಬೆಂಗಳೂರು (ಆ.25): ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ ಒಳಮೀಸಲಾತಿ (ವರ್ಗೀಕರಣ) ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಆಯೋಗ ವಿಚಾರಣಾ ಕಾಯ್ದೆ 1952 ರಂತೆ ನಿವೃತ್ತ ನ್ಯಾಯಮೂರ್ತಿ ಹೆಚ್‌.ಎನ್‌. ನಾಗಮೋಹನ್ ದಾಸ್ ಇವರ ನೇತೃತ್ವದ ಏಕ ಸದಸ್ಯ ಆಯೋಗ ವರದಿ ಅನ್ವಯ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ ಎ, ಬಿ, ಸಿ, ಡಿ ಮತ್ತು ಇ ಎಂದು 5 ಗುಂಪುಗಳಾಗಿ ವರ್ಗೀಕರಿಸಿದೆ. ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ/ವರ್ಗೀಕರಣದ ಬಗ್ಗೆ ಸರ್ಕಾರ ಚರ್ಚಿಸಿ, ಕೆಲವು ಮಾರ್ಪಾಡುಗಳೊಂದಿಗೆ ಸದರಿ ವರದಿಯನ್ನು ಸಚಿವ ಸಂಪುಟವು ಒಪ್ಪಿರುತ್ತದೆ. ಈ ಹಿನ್ನೆಲೆಯಲ್ಲಿ ಈ ಕೆಳಕಂಡಂತೆ ಆದೇಶಿಸಿದೆ.

ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ- ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಳಾಗಿ ವರ್ಗೀಕರಿಸಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇ.17% ಮೀಸಲಾತಿಯನ್ನು ಪ್ರವರ್ಗ- ಎ ರಲ್ಲಿನ ಸಮುದಾಯಗಳಿಗೆ ಶೇ.6%, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇ. 6% ಮತ್ತು ಪ್ರವರ್ಗ -ಸಿ ರಲ್ಲಿನ ಸಮುದಾಯಗಳಿಗೆ ಶೇ.5% ರಷ್ಟು ನಿಗಧಿಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದೆ.

ಆಯೋಗದ ವರದಿಯಲ್ಲಿನ ಪ್ರವರ್ಗ- ಇ ರಲ್ಲಿನ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಈ 3 ಸಮುದಾಯಗಳು ತಮ್ಮ ಮೂಲ ಜಾತಿಯನ್ನು ತಿಳಿಸದೇ ಇರುವುದರಿಂದ ಸದರಿ 3 ಜಾತಿಗಳು ಅನುಬಂಧಗಳಲ್ಲಿರುವ ಪ್ರವರ್ಗ-ಎ ಅಥವಾ ಪ್ರವರ್ಗ-ಬಿ ಗಳಲ್ಲಿ ಮೀಸಲಾತಿ ಸೌಲಭ್ಯವನ್ನು ಪಡೆಯಬಹುದು. ರಾಜ್ಯ ಸಿವಿಲ್ ಸೇವೆಗಳ ಹುದ್ದೆಗಳಿಗೆ ಒಳಮೀಸಲಾತಿ ಹಿನ್ನೆಲೆಯಲ್ಲಿ ತಡೆಹಿಡಿಯಲಾದ ನೇರ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಕ್ರಮವಹಿಸುವುದು. ಎಲ್ಲಾ ಇಲಾಖೆಗಳು ಮತ್ತು ಅವುಗಳ ಅಧೀನದ ಎಲ್ಲಾ ನಿಗಮ/ಮಂಡಳಿ/ಸಂಸ್ಥೆಗಳಲ್ಲಿ ಮುಂಬಡ್ತಿ ಪ್ರಕ್ರಿಯೆಯನ್ನೂ ಸಹ ಮುಂದುವರೆಸಬಹುದಾಗಿದೆ.

ಉದ್ಯೋಗಳ ನೇಮಕಾತಿಯಲ್ಲಿ ಹಾಜರಾಗುವ ಎಲ್ಲಾ ಅಭ್ಯರ್ಥಿಗಳಿಗೆ ಆಯಾ ನೇಮಕಾತಿಗಳಿಗೆ ನಿಗದಿಪಡಿಸಿರುವ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ನೀಡಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಪ್ರತ್ಯೇಕವಾಗಿ ಆದೇಶ ಹೊರಡಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಅಗತ್ಯ ಕ್ರಮವಹಿಸುವುದು. ಹೊಸ ದತ್ತಾಂಶ ಅಥವಾ ಮಾಹಿತಿ ಬಂದಾಗ ಅಗತ್ಯ ಮಾರ್ಪಾಡುಗಳನ್ನು ಮಾಡಲು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗಕ್ಕೆ ಅಧಿಕಾರ ನೀಡುವ ಬಗ್ಗೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಅಧಿನಿಯಮ, 2002ಕ್ಕೆ ಸೂಕ್ತ ತಿದ್ದುಪಡಿ ಮಾಡಲಾಗುವುದು.

ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆಯನ್ನು ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿಕೊಂಡು, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ, ವರದಿ ನೀಡಲು ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗವನ್ನು ರಚಿಸಲಾಗುವುದು. ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದ್ದು, ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳ ಕುರಿತು ಪರಿಶೀಲಿಸಿ ತುರ್ತಾಗಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಬಗ್ಗೆ ಸದರಿ ವಿಷಯಕ್ಕೆ ಸಂಬಂಧಿಸಿದ ಸಚಿವ ಸಂಪುಟ ಉಪಸಮಿತಿಯು ಕ್ರಮವಹಿಸುವುದು.