ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತವಾಗಿದ್ದು, ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಶಸ್ವಿ ಸ್ಟಂಟ್ ಅಳವಡಿಕೆ ನಂತರ ಶ್ರೀಗಳು ಚೇತರಿಸಿಕೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಆರೋಗ್ಯ ವಿಚಾರಿಸಿದ್ದಾರೆ.

ದಾವಣಗೆರೆ/ರಾಯಚೂರು (ಫೆ.19): ದಾವಣಗೆರೆಯ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ ಸಂಭವಿಸಿದೆ. ಸದ್ಯ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯಲ್ಲಿ ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೋನ್ ಕರೆ ಮಾಡುವ ಮೂಲಕ ಶ್ರೀಗಳ ಆರೋಗ್ಯದ ಸ್ಥಿತಿಗತಿಯನ್ನು ವಿಚಾರಿಸಿದ್ದಾರೆ.

ಘಟನೆಯ ವಿವರ:

ವಾಲ್ಮೀಕಿ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಶ್ರೀಗಳು ರಾಯಚೂರು ಜಿಲ್ಲೆಗೆ ಆಗಮಿಸಿದ್ದರು. ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ನಿನ್ನೆ ವಾಸ್ತವ್ಯ ಹೂಡಿದ್ದ ವೇಳೆ ಅವರಿಗೆ ದಿಢೀರ್ ಎದೆಯೊಲುವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ರಾಯಚೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ ಕಾರಣ, ತಡರಾತ್ರಿಯೇ ಅವರನ್ನು ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಚಿಕಿತ್ಸೆಗೆ ಸ್ಪಂದಿಸುತ್ತಿರುವ ಶ್ರೀಗಳು:

ಅಪೋಲೋ ಆಸ್ಪತ್ರೆಯ ವೈದ್ಯರು ಶ್ರೀಗಳಿಗೆ ತಪಾಸಣೆ ನಡೆಸಿ, ಹೃದಯದ ರಕ್ತನಾಳದಲ್ಲಿನ ಬ್ಲಾಕೇಜ್ ಹಿನ್ನೆಲೆಯಲ್ಲಿ ಯಶಸ್ವಿಯಾಗಿ 'ಸ್ಟಂಟ್' ಅಳವಡಿಸಿದ್ದಾರೆ. ಸದ್ಯ ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಆರೋಗ್ಯ ವಿಚಾರಿಸಿದ ಸಿಎಂ:

ಹೈದರಾಬಾದ್‌ನ ಆಸ್ಪತ್ರೆಗೆ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹಾಗೂ ಮಡಿವಾಳ ಮಾಚಿದೇವ ಸ್ವಾಮೀಜಿ ಅವರು ಭೇಟಿ ನೀಡಿ ಪ್ರಸನ್ನಾನಂದ ಶ್ರೀಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳ ಮೊಬೈಲ್‌ಗೆ ಕರೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಸನ್ನಾನಂದ ಶ್ರೀಗಳ ಆರೋಗ್ಯದ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು. 'ಯಾವುದೇ ಕಾರಣಕ್ಕೂ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ, ಧೈರ್ಯವಾಗಿರಿ' ಎಂದು ಸಿಎಂ ಶ್ರೀಗಳಿಗೆ ಸಾಂತ್ವನ ಹೇಳಿದರು.

ಶ್ರೀಗಳ ಆರೋಗ್ಯದ ವಿಚಾರ ತಿಳಿಯುತ್ತಿದ್ದಂತೆಯೇ ರಾಜ್ಯದಾದ್ಯಂತ ಇರುವ ಅವರ ಭಕ್ತವೃಂದ ಆತಂಕಕ್ಕೊಳಗಾಗಿದ್ದು, ಶ್ರೀಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ವಾಲ್ಮೀಕಿ ಸಮುದಾಯದ ಪ್ರಮುಖ ನಾಯಕರು ಹಾಗೂ ರಾಜಕೀಯ ಗಣ್ಯರು ಹೈದರಾಬಾದ್‌ನತ್ತ ತೆರಳಿ ಶ್ರೀಗಳ ದರ್ಶನ ಪಡೆಯುತ್ತಿದ್ದಾರೆ.