ಕರ್ನಾಟಕ ಆರೋಗ್ಯ ಇಲಾಖೆಯು 40 ವರ್ಷ ಮೇಲ್ಪಟ್ಟವರಿಗೆ ಉಚಿತ ದೃಷ್ಟಿ ತಪಾಸಣೆ ಮತ್ತು ಓದುವ ಕನ್ನಡಕ ನೀಡಲು 'ರಿಸ್ಟೋರಿಂಗ್ ವಿಷನ್' ಸಂಸ್ಥೆಯೊಂದಿಗೆ ಒಪ್ಪಂದ. ಮೊದಲ ಹಂತದಲ್ಲಿ ಯಾದಗಿರಿ ಜಿಲ್ಲೆ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದ್ದು, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ತಪಾಸಣೆ ನಡೆಸಲಿದ್ದಾರೆ.

ಬೆಂಗಳೂರು (ಏ4): ಆರೋಗ್ಯ ಇಲಾಖೆಯು ರಾಜ್ಯದಲ್ಲಿ 40 ವರ್ಷ ವಯಸ್ಸು ದಾಟಿದವರಿಗೆ ಉಚಿತ ದೃಷ್ಟಿ ತಪಾಸಣೆ ಮತ್ತು ಓದುವ ಕನ್ನಡಕಗಳನ್ನು ಒದಗಿಸುವ ಕಾರ್ಯಕ್ರಮ ಜಾರಿಗೆ ಮುಂದಾಗಿದ್ದು, ಇದಕ್ಕಾಗಿ ರಿಸ್ಟೋರಿಂಗ್ ವಿಷನ್ ಜೊತೆ ಒಡಂಬಡಿಕೆ ಮಾಡಿಕೊಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಕಾರ್ಯಕ್ರಮವನ್ನು ಆಯುಷ್ಮಾನ್ ಆರೋಗ್ಯ ಮಂದಿರ ಉಪ ಕೇಂದ್ರಗಳ ಮೂಲಕ ಜಾರಿಗೆ ತರಲು ಉದ್ದೇಶಿಸಿದ್ದು, ಮೊದಲ ಹಂತದಲ್ಲಿ ಯಾದಗಿರಿ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.

ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಉಪ ಕೇಂದ್ರಗಳು ಒಳಗೊಂಡಂತೆ ಜಿಲ್ಲೆಯಲ್ಲಿ ಸುಮಾರು ಒಂದು ಲಕ್ಷ ಓದುವ ಕನ್ನಡಕಗಳನ್ನು ಉಚಿತವಾಗಿ ವಿತರಿಸುವ ಗುರಿ ಹೊಂದಲಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ಸುಮಾರು ಶೇ.28 ಜನ ದೂರದೃಷ್ಟಿ ಹಾಗೂ ಸಮೀಪ ದೃಷ್ಟಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಅಂದಾಜಿಸಿದ್ದು, ಇದನ್ನು ಸರಳ ಓದುವ ಕನ್ನಡಕಗಳಿಂದ ಸರಿಪಡಿಸಬಹುದಾಗಿದೆ ಎಂದು ಎಂದ ಅಧಿಕಾರಿಗಳು ತಿಳಿಸಿದ್ದಾರೆ.

ಆಶಾ ಕಿರಣ ಕಾರ್ಯಕ್ರಮದ ಫಲ:

ಕರ್ನಾಟಕದಲ್ಲಿ 2025 ರ ಅಕ್ಟೋಬರ್‌ನಲ್ಲಿ ಆರಂಭಿಸಿದ ‘ಆಶಾ ಕಿರಾಣ’ ಯೋಜನೆ ಅಡಿ ಕ್ಷೇತ್ರ ಮೌಲ್ಯಮಾಪನ ಮಾಡಲಾಗಿತ್ತು. ಈ ವೇಳೆ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಒಳಗೊಂಡ ಜಂಟಿ ತಂಡವು ಮಾಡಿದ ಶಿಫಾರಸುಗಳನ್ನು ಆಧರಿಸಿ ಕಾರ್ಯಕ್ರಮ ರೂಪಿಸಲಾಗಿದೆ.

ಆಶಾ ಸಿಬ್ಬಂದಿ ಸೇರಿ ಆರೋಗ್ಯ ಕಾರ್ಯಕರ್ತರು ಸಹ ಈ ಸಂಪರ್ಕ ಕಾರ್ಯಕ್ರಮದ ಭಾಗವಾಗಿ ಮನೆ ಮನೆಗೆ ತೆರಳಿ ತಪಾಸಣೆ ನಡೆಸಲಿದ್ದಾರೆ.ಮುಂದಿನ ಹಂತಗಳಲ್ಲಿ ರಾಜ್ಯಾದ್ಯಂತ ಯೋಜನೆ ವಿಸ್ತರಿಸುವ ಉದ್ದೇಶವಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.