ಪ್ರಕರಣವೊಂದರ ಸಂಬಂಧ ಆರೋಪಿಗಳಿಗೆ ಒಮ್ಮೆ ಮಂಜೂರಾದ ನಿರೀಕ್ಷಣಾ ಜಾಮೀನು ಮಂಜೂರಾದ ನಂತರ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ ಮತ್ತು ಕೋರ್ಟ್ ಸಮನ್ಸ್ ಜಾರಿ ಮಾಡಿದೆ ಎಂಬ ಕಾರಣಕ್ಕೆ ರದ್ದಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಬೆಂಗಳೂರು (ಜು.2): ಪ್ರಕರಣವೊಂದರ ಸಂಬಂಧ ಆರೋಪಿಗಳಿಗೆ ಒಮ್ಮೆ ಮಂಜೂರಾದ ನಿರೀಕ್ಷಣಾ ಜಾಮೀನು ಮಂಜೂರಾದ ನಂತರ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ ಮತ್ತು ಕೋರ್ಟ್ ಸಮನ್ಸ್ ಜಾರಿ ಮಾಡಿದೆ ಎಂಬ ಕಾರಣಕ್ಕೆ ರದ್ದಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ನಿರೀಕ್ಷಣಾ ಜಾಮೀನು ಪಡೆದಿದ್ದರೂ, ಮತ್ತೆ ಸಾಮಾನ್ಯ (ರೆಗ್ಯೂಲರ್) ಜಾಮೀನು ಪಡೆಯುವಂತೆ ಸೂಚನೆ ನೀಡಿದ್ದ ವಿಚಾರಣಾ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಆಂಧ್ರದ ಗುಂಟೂರು ಮೂಲದ ಬಾಲಕೀರ್ತಿ ಪುಣ್ಯಕೋಟಿ ಮತ್ತವರ ಪೋಷಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಈ ಆದೇಶ ನೀಡಿದೆ.
ನಿರೀಕ್ಷಣಾ ಜಾಮೀನಿಗೆ ಯಾವುದೇ ನಿರ್ದಿಷ್ಟ ಕಾಲಮಿತಿ ಇರುವುದಿಲ್ಲ. ವಿಶೇಷ ಸಂದರ್ಭಗಳನ್ನು ಹೊರತುಪಡಿಸಿ, ನಿರೀಕ್ಷಣಾ ಜಾಮೀನಿನ ರಕ್ಷಣೆ ಇಡೀ ವಿಚಾರಣೆ ಮುಗಿಯುವವರೆಗೂ ಮುಂದುವರಿಯುತ್ತದೆ. ನಿರೀಕ್ಷಣಾ ಜಾಮೀನು ದೊರೆತ ಬಳಿಕ, ಆರೋಪಪಟ್ಟಿ ಸಲ್ಲಿಕೆಯಾದ ತಕ್ಷಣ ಆರೋಪಿಯ ಸ್ವಾತಂತ್ರ್ಯ ಕಸಿದುಕೊಳ್ಳಲು ಬರುವುದಿಲ್ಲ ಎಂದು ಪೀಠ ಆದೇಶದಲ್ಲಿ ತಿಳಿಸಿದೆ.
ಅಲ್ಲದೇ, ಪ್ರಕರಣ ಸಂಬಂಧ ತನಿಖೆಗೆ ಆರೋಪಿಗಳು ಸಂಪೂರ್ಣ ಸಹಕಾರ ನೀಡಿದ್ದಾರೆ ಎಂಬುದಾಗಿ ತಿಳಿಯಲಿದೆ. ಹಾಗಾಗಿ ಕಡ್ಡಾಯವಾಗಿ ಸಾಮಾನ್ಯ ಜಾಮೀನು (ರೆಗ್ಯೂಲರ್ ಬೇಲ್) ಪಡೆಯಬೇಕು ಎಂದು ಒತ್ತಾಯಿಸುವಂತಿಲ್ಲ ಎಂದು ತಿಳಿಸಿದೆ. ಇದೇ ವೇಳೆ ಸಾಮಾನ್ಯ ಜಾಮೀನು ಪಡೆಯುವಂತೆ ಅರ್ಜಿದಾರರಿಗೆ ಸೂಚಿಸಿದ ಹಾಗೂ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ತಲಾ 100 ರು. ದಂಡ ವಿಧಿಸಿ ವಜಾಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಅದೇಶವನ್ನು ರದ್ದುಗೊಳಿಸಿದೆ.
ಪ್ರಕರಣದ ವಿವರ:
ಬಾಲಕೀರ್ತಿ ಪುಣ್ಯಕೋಟಿ ಮತ್ತು ಅವರ ಕುಟುಂಬದವರ ವಿರುದ್ಧ ಬೆಂಗಳೂರು ದಕ್ಷಿಣ ಮಹಿಳಾ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಸೇರಿದಂತೆ ಭಾರತೀಯ ನ್ಯಾಯ ಸಂಹಿತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾದ ಬಳಿಕ ಅರ್ಜಿದಾರ ಬಾಲಿಕೀರ್ತಿ ಪುಣ್ಯಕೋಟಿ, ತಂದೆ ರಾಮಲಿಂಗಂ ಪುಣ್ಯಕೋಟಿ, ತಾಯಿ ಪದ್ಮಾವತಿ ಪುಣ್ಯಕೋಟಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ಈ ನಡುವೆ ಎಲ್ಲ ಆರೋಪಿಗಳು ಸಂಬಂಧಪಟ್ಟ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು.
ತನಿಖೆ ಪೂರ್ಣಗೊಳಿಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದರೆ, ಬೆಂಗಳೂರಿನ 37ನೇ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆರೋಪಿಗಳು ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರೂ, ದೋಷಾರೋಪ ಪಟ್ಟಿ ಸಲ್ಲಿಕೆಯಾಗಿರುವುದರಿಂದ ಮತ್ತೊಮ್ಮೆ ಸಾಮಾನ್ಯ ಜಾಮೀನು ಕೋರಿ ಅರ್ಜಿ ಸಲ್ಲಿಸಬೇಕು. ಮುಂದಿನ ವಿಚಾರಣೆ ವೇಳೆ ಖುದ್ದು ಹಾಜರಿರಬೇಕು ಎಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.


