ಕೆಎಎಸ್ ನೇಮಕಾತಿಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗಿದೆಯೆಂದು ಕರ್ನಾಟಕ ರಕ್ಷಣಾ ವೇದಿಕೆ ಕೆಪಿಎಸ್‌ಸಿ ಕಚೇರಿಗೆ ಮುತ್ತಿಗೆ ಹಾಕಿದೆ. ಕೆಪಿಎಸ್‌ಸಿ ವಿಳಂಬ ನೀತಿ ಮತ್ತು ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.

ಬೆಂಗಳೂರು (ಫೆ.25): ಕೆಎಎಸ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು ಮತ್ತು ಕೆಪಿಎಸ್‌ಸಿಯ ಸಮಗ್ರ ಸುಧಾರಣೆಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಸೋಮವಾರ ಕೆಪಿಎಸ್‌ಸಿ ಕಚೇರಿಗೆ ಮುತ್ತಿಗೆ ಹಾಕಿದರು.

ಕೆಪಿಎಸ್‌ಸಿಯ ವಿಳಂಬ ನೀತಿ, ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ರಸ್ತೆಯಲ್ಲಿ ಕುಳಿತು ಘೋಷಣೆಗಳನ್ನು ಕೂಗಿ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು. ಕೆಪಿಎಸ್‌ಸಿ ಕಚೇರಿ ಎದುರಿನ ರಸ್ತೆಯನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದ ನಗರ ಪೊಲೀಸರು, ಪ್ರತಿಭಟನಕಾರರು ಕಚೇರಿಯೊಳಗೆ ಪ್ರವೇಶಿಸದಂತೆ ತಡೆದರು. ಆದರೂ, ಪಟ್ಟು ಬಿಡದೆ ಬ್ಯಾರಿಕೇಡ್ ದಾಟಿ ಒಳ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ಎಳೆದುಕೊಂಡು ಪೊಲೀಸ್ ವಾಹನಕ್ಕೆ ಹತ್ತಿಸಿದರು.

ಇದನ್ನೂ ಓದಿ: KPSC ಪರೀಕ್ಷೆ ಲೋಪ ಖಂಡಿಸಿ ಪ್ರತಿಭಟನೆ, ಕಚೇರಿಗೆ ಮುತ್ತಿಗೆ ಯತ್ನ! Suvarna 30 News | Kannada Suvarna News

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರವೇ ಮುಖಂಡರಾದ ಸಣ್ಣೀರಪ್ಪ ಮಾತನಾಡಿ, ಕನ್ನಡ ನಾಡಿನ ಬಡ ಮಕ್ಕಳ ಭವಿಷ್ಯದ ವಿಚಾರದಲ್ಲಿ ಕೆಪಿಎಸ್‌ಸಿ ಚೆಲ್ಲಾಟ ಆಡುತ್ತಿದೆ. ಕೆಎಎಸ್ ಪ್ರಶ್ನೆಪತ್ರಿಕೆಯ ಅನುವಾದದಲ್ಲಿ ಪದೇ ಪದೇ ತಪ್ಪುಗಳನ್ನು ಮಾಡುತ್ತಿದೆ. ಇದರಿಂದ ಕನ್ನಡದ ಅಭ್ಯರ್ಥಿಗಳು ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಸಾಧ್ಯವಾಗಿಲ್ಲ. ಮುಖ್ಯ ಪರೀಕ್ಷೆಗೆ ಅರ್ಹತೆ ಗಿಟ್ಟಿಸಿಕೊಳ್ಳಲು ಸಾಧ್ಯವಾಗದೇ ರಾಜ್ಯದ ಕೆಎಎಸ್ ಹುದ್ದೆಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಲವು ದಿನಗಳ ಹಿಂದೆ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದಾಗ ಕನ್ನಡ ಮಕ್ಕಳಿಗೆ ನ್ಯಾಯ ಒದಗಿಸುವುದಾಗಿ ಸರ್ಕಾರದಿಂದ ಭರವಸೆ ಸಿಕ್ಕಿತ್ತು. ಆದರೆ, ಈವರೆಗೆ ಯಾವುದೇ ಕ್ರಮವನ್ನು ಸರ್ಕಾರ ಕೈಗೊಂಡಿಲ್ಲ. ಮತ್ತೊಂದೆಡೆ ಮರುಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿ, ಮುಖ್ಯಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿರುವ ಕೆಪಿಎಸ್‌ಸಿ ಪರೀಕ್ಷೆಗೂ ಸಿದ್ಧತೆ ನಡೆಸಿದೆ. ಕನ್ನಡ ಮಕ್ಕಳ ಬೇಡಿಕೆಗಳಿಗೆ ಯಾವುದೇ ಮನ್ನಣೆ ಇಲ್ಲದಂತಾಗಿದೆ. ಹೀಗಾಗಿ, ಮುತ್ತಿಗೆ ಹಾಕಿದ್ದೇವೆ. ಮುಂದಿನ ದಿನಗಳಲ್ಲಿ ಸರ್ಕಾರ, ಕೆಪಿಎಸ್‌ಸಿ ಕನ್ನಡ ಮಕ್ಕಳಿಗೆ ನ್ಯಾಯ ಕೊಡಿಸದಿದ್ದರೆ ಹೋರಾಟವನ್ನು ಮುಂದುವರೆಸುತ್ತೇವೆ ಎಂದು ತಿಳಿಸಿದರು.