ಕೆ.ಎನ್. ರಾಜಣ್ಣ ಅವರ ಸಚಿವ ಸ್ಥಾನದಿಂದ ವಜಾಗೊಳಿಸುವಿಕೆಯನ್ನು ಪ್ರಸನ್ನಾನಂದ ಸ್ವಾಮೀಜಿ ಖಂಡಿಸಿದ್ದಾರೆ. ಎಸ್ಟಿ ಸಮುದಾಯದ ಜನಪ್ರತಿನಿಧಿಗಳನ್ನು ಉದ್ದೇಶಪೂರ್ವಕವಾಗಿ ಮೂಲೆಗುಂಪು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ವಜಾ ಹಿಂದೆ ವ್ಯವಸ್ಥಿತ ಪಿತೂರಿ ಇದೆ ಎಂದು ಸ್ವಾಮೀಜಿ ಹೇಳಿದ್ದಾರೆ.
ಯಾದಗಿರಿ (ಆ.13): ಕರ್ನಾಟಕ ಸರ್ಕಾರದ ಸಚಿವ ಸಂಪುಟದಿಂದ ಕೆ.ಎನ್. ರಾಜಣ್ಣ ಅವರನ್ನು ವಜಾಗೊಳಿಸಿದ ಕ್ರಮವನ್ನು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ತೀವ್ರವಾಗಿ ಖಂಡಿಸಿದರು. ಈ ವಜಾದ ಹಿಂದೆ ವ್ಯವಸ್ಥಿತ ಪಿತೂರಿ ಮತ್ತು ಷಡ್ಯಂತ್ರವಿದೆ ಎಂದು ಆರೋಪಿಸಿದರು.
ಯಾದಗಿರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸ್ವಾಮೀಜಿ, ಎಸ್ಟಿ ಸಮುದಾಯದ ಜನಪ್ರತಿನಿಧಿಗಳನ್ನು ಉದ್ದೇಶಪೂರ್ವಕವಾಗಿ ಮೂಲೆಗುಂಪು ಮಾಡಲಾಗುತ್ತಿದೆ. ಕೆ.ಎನ್. ರಾಜಣ್ಣ ಅವರು ಶೋಷಿತ ಸಮುದಾಯದ ಧ್ವನಿಯಾಗಿ, ಕಾಂಗ್ರೆಸ್ ಪಕ್ಷದ ಕಟ್ಟಾಳು ಕಾರ್ಯಕರ್ತರಾಗಿ ಹಾಗೂ ಜನನಾಯಕರಾಗಿ ಗುರುತಿಸಿಕೊಂಡವರು. ನೇರ ಮಾತಿಗೆ ಹೆಸರಾದ ರಾಜಣ್ಣ, ನ್ಯಾಯ ಮತ್ತು ನಿಷ್ಠೆಯ ಶರಣರಾಗಿ ಯಾರಿಗೂ ಭಯಪಡದ ಧೀಮಂತಿಕೆಯನ್ನು ಹೊಂದಿದ್ದಾರೆ ಎಂದು ಸ್ವಾಮೀಜಿ ಹೇಳಿದ್ದಾರೆ.
ರಾಜಣ್ಣ ಅವರು ಹೋರಾಟದ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ಸಾಕಷ್ಟು ಕೆಲಸ ಮಾಡಿದ್ದು, ರಾಜ್ಯದ ಪ್ರಶ್ನಾತೀತ ನಾಯಕರಾಗಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ನ ಈ ನಿರ್ಧಾರವು ಎಸ್ಟಿ ಸಮುದಾಯವನ್ನ ತುಳಿತದ ಪ್ರಯತ್ನವೆಂದು ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬಹುತೇಕ ಸರ್ಕಾರಗಳಲ್ಲಿ ಎಸ್ಟಿ ಸಮುದಾಯದ ಜನಪ್ರತಿನಿಧಿಗಳನ್ನು ತುಳಿಯುವ ಕೆಲಸ ನಡೆಯುತ್ತಿದೆ. ರಾಜಣ್ಣ ಅವರ ವಜಾವು ಈ ವ್ಯವಸ್ಥಿತ ಪಿತೂರಿಯ ಮುಂದುವರಿದ ಭಾಗವಾಗಿದೆ ಎಂದು ಸ್ವಾಮೀಜಿ ಆರೋಪಿಸಿದ್ದಾರೆ.
ರಾಜಣ್ಣ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಕಾಂಗ್ರೆಸ್ ಹೈಕಮಾಂಡ್ಗೆ ಒತ್ತಾಯಿಸಿರುವ ಸ್ವಾಮೀಜಿ, ಈ ಪಿತೂರಿಯ ಹಿಂದಿರುವವರ ಮಾತಿಗೆ ಕಿವಿಗೊಡದೆ, ನಿಷ್ಠಾವಂತ ಕಾರ್ಯಕರ್ತನಿಗೆ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದ್ದಾರೆ.
ಎಸ್ಟಿ ಸಮುದಾಯದಿಂದ ಈ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ಗೆ ತೀವ್ರ ಒತ್ತಡ ಹೇರಲಾಗುವುದು. ರಾಜಣ್ಣ ಅವರ ವಜಾದಿಂದ ಯಾದಗಿರಿಯ ಜನತೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದ ನಾಯಕನಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಲಾಗಿದೆ.


