ಸಿಎಂಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ರಿಂದ ‘ಬಿಸಿ ಪತ್ರ’
ಕಾಂಗ್ರೆಸ್ ನಲ್ಲಿ ಅಳಲು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಈ ಕುರಿತು ನೇರವಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು : ಸ್ಥಳೀಯ ಪ್ರಾಧಿಕಾರಗಳಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂಬ ಅಳಲು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಈ ಕುರಿತು ನೇರವಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದು, ಸ್ಥಳೀಯ ಪ್ರಾಧಿಕಾರಗಳಲ್ಲಿ ಜೆಡಿಎಸ್ನ ಜತೆಗೆ ಕಾಂಗ್ರೆಸ್ ಕಾರ್ಯಕರ್ತರಿಗೂ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಸಮ್ಮಿಶ್ರ ಸರ್ಕಾರ ಬಂದ ನಂತರ ಇದೇ ಮೊದಲ ಬಾರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದು, ಹೊಸದಾಗಿ ರಚಿಸುವ ಅಕ್ರಮ-ಸಕ್ರಮ ಸಮಿತಿ, ಭೂ ನ್ಯಾಯಮಂಡಳಿ ಸೇರಿದಂತೆ ತಾಲೂಕು, ಜಿಲ್ಲಾ ಮಟ್ಟದ ಎಲ್ಲಾ ಸಮಿತಿಗಳಲ್ಲೂ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರಿಗೆ ಸಮಾನ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಸಮಿತಿಗಳ ಸದಸ್ಯರ ನೇಮಕದ ವೇಳೆ ಕಾಂಗ್ರೆಸ್ ಪಕ್ಷ ಹಾಗೂ ಜೆಡಿಎಸ್ ಪಕ್ಷದ ಸದಸ್ಯರಿಗೆ ಹೆಚ್ಚು ಅವಕಾಶ ನೀಡಬೇಕು. ಕಾಂಗ್ರೆಸ್ ಪಕ್ಷದ ಶಾಸಕರು ಇರುವಂತಹ ಕ್ಷೇತ್ರ, ತಾಲೂಕುಗಳಲ್ಲಿ ಸಮಿತಿ ರಚಿಸುವಾಗ 2:1 ಅನುಪಾತದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರನ್ನು ನೇಮಿಸಬೇಕು. ಜೆಡಿಎಸ್ ಶಾಸಕರು ಇರುವ ಕ್ಷೇತ್ರಗಳಲ್ಲಿ 2:1 ಅನುಪಾತದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಸದಸ್ಯರನ್ನು ನೇಮಿಸಬೇಕು. ಈ ಬಗ್ಗೆ ತಮ್ಮ ಮಂತ್ರಿಮಂಡಲದ ಎಲ್ಲಾ ಸಚಿವರಿಗೆ ನಿರ್ದೇಶನ ನೀಡಬೇಕು ಎಂದು ಪತ್ರದ ಮೂಲಕ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ.
ಆಯಾ ಸಚಿವರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ರಚನೆಯಾಗುವ ತಾಲೂಕು, ಜಿಲ್ಲಾ ಮಟ್ಟದ ಸಮಿತಿಗಳಲ್ಲಿ ಎರಡೂ ಪಕ್ಷಗಳಿಗೆ ಪ್ರಾಧ್ಯಾನ್ಯತೆ ದೊರೆಯುವಂತೆ ಮಾಡಬೇಕು. ಸ್ಥಳೀಯವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡುವುದರಿಂದ ಎರಡೂ ಪಕ್ಷಗಳಿಗೂ ಒಳ್ಳೆಯದಾಗಲಿದೆ. ಈ ಮೂಲಕ ಕಾರ್ಯಕರ್ತರನ್ನು ಪ್ರೋತ್ಸಾಹಿಸಿದಂತಾಗುತ್ತದೆ. ಹೀಗಾಗಿ ಇದನ್ನು ಆದ್ಯತೆ ವಿಷಯವಾಗಿ ಗಮನ ಹರಿಸಿ ಪಕ್ಷದ ಸದಸ್ಯರಿಗೆ ಅವಕಾಶ ಮಾಡಿಕೊಡಬೇಕು ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರವು ಜಿಲ್ಲಾ ಮಟ್ಟದ ಪ್ರಾಧಿಕಾರಗಳ ನೇಮಕಾತಿ ವೇಳೆ ಕಾಂಗ್ರೆಸ್ ಕಾರ್ಯಕರ್ತರನ್ನು ನಿರ್ಲಕ್ಷಿಸಿ ಕೇವಲ ಜೆಡಿಎಸ್ನ ಕಾರ್ಯಕರ್ತರನ್ನು ಮಾತ್ರ ನೇಮಕ ಮಾಡುತ್ತಿದೆ ಎಂಬ ಬಗ್ಗೆ ಕಾಂಗ್ರೆಸ್ ಶಾಸಕರಿಂದ ವ್ಯಾಪಕ ದೂರುಗಳಿದ್ದವು. ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರಿಗೂ ಕಾಂಗ್ರೆಸ್ ನಾಯಕರು ಈ ಬಗ್ಗೆ ದೂರು ನೀಡಿದ್ದರು. ಇದಕ್ಕೆ ಪ್ರತಿಯಾಗಿ ವೇಣುಗೋಪಾಲ್ ಅವರು ಜೆಡಿಎಸ್ ಮೈತ್ರಿ ಧರ್ಮ ಪಾಲಿಸದಿದ್ದರೆ, ಕಾಂಗ್ರೆಸ್ ಕೂಡ ಪಾಲಿಸುವುದು ಬೇಡ ಎಂದು ಹೇಳುವ ಮೂಲಕ ಕಾಂಗ್ರೆಸ್ ಸಚಿವರು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಜೆಡಿಎಸ್ ಕಾರ್ಯಕರ್ತರಿಗೆ ಪ್ರಾತಿನಿಧ್ಯ ನೀಡಬಾರದು ಎಂದು ಸೂಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು.