ಜಿಲ್ಲೆಯ ಜೀವನದಿ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ 84 ಅಡಿಗೆ ಕುಸಿದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜಲಾಶಯದ ನೀರಿನ ಮಟ್ಟದಲ್ಲಿ 22 ಅಡಿಗಳಷ್ಟು ಕಡಿಮೆ ನೀರು ಸಂಗ್ರಹವಾಗಿದೆ. 

ಮಂಡ್ಯ (ಮೇ.24): ಜಿಲ್ಲೆಯ ಜೀವನದಿ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ 84 ಅಡಿಗೆ ಕುಸಿದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜಲಾಶಯದ ನೀರಿನ ಮಟ್ಟದಲ್ಲಿ 22 ಅಡಿಗಳಷ್ಟು ಕಡಿಮೆ ನೀರು ಸಂಗ್ರಹವಾಗಿದೆ. ಮುಂಗಾರು ತಡವಾದ್ರೆ ರಾಜಧಾನಿಗೆ ಕಾದಿದೆ ಜೀವಜಲದ ಹಾಹಾಕಾರ ಉಂಟಾಗಲಿದೆ. ಅಲ್ಲದೇ ಬೆಂಗಳೂರಿನಲ್ಲಿ ಮಳೆ ಬೀಳುತ್ತಿದ್ರೂ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಭೀತಿಯಿದೆ. 

Add Asianetnews Kannada as a Preferred SourcegooglePreferred

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಇಲ್ಲದಿರೋದ್ರಿಂದ ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ ಕುಸಿತ ಉಂಟಾಗಿದೆ. ಐದು ವರ್ಷದಲ್ಲೇ ಅತ್ಯಂತ ಕಡಿಮೆ ಮಟ್ಟಕ್ಕೆ ನೀರಿನ ಮಟ್ಟ ಕುಸಿದಿದೆ. ಬೆಂಗಳೂರು ಮಾತ್ರವಲ್ಲದೆ ಕಾವೇರಿ ನೀರು ಅವಲಂಬಿಸಿರುವ ನಗರಗಳಲ್ಲೂ ನೀರಿನ ಹಾಹಾಕಾರ ಎದುರಾಗುವ ಸಾಧ್ಯತೆಯಿದ್ದು, ಮತ್ತೊಂದೆಡೆ ಬೆಳೆ ನಷ್ಟದ ಆತಂಕದಲ್ಲಿ ಕೆಆರ್‌ಎಸ್‌ ಡ್ಯಾಂ ಅಚ್ಚುಕಟ್ಟು ವ್ಯಾಪ್ತಿಯ ರೈತರು ಇದ್ದಾರೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್‌ನಲ್ಲಿ ಸದ್ಯ 82.30 ಅಡಿಯಷ್ಟೇ ನೀರು ಸಂಗ್ರಹವಾಗಿದೆ. 

ಸಿಎಂ ಆದ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜಾ!

ಕಳೆದ ವರ್ಷ ಇದೇ ದಿನ 104.07 ಅಡಿ ನೀರು ಸಂಗ್ರಹವಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ 22 ಅಡಿಯಷ್ಟು ನೀರು ಪ್ರಮಾಣ ಕುಸಿತವಾಗಿದೆ. 49.452 ಟಿಎಂಸಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿರುವ ಡ್ಯಾಂನಲ್ಲಿ ಸದ್ಯ 11.837 ಟಿಎಂಸಿಯಷ್ಟು ನೀರು ಸಂಗ್ರಹ ಇದೆ. 11 ಟಿಎಂಸಿಯಲ್ಲಿ 4 ಟಿಎಂಸಿಯಷ್ಟು ಮಾತ್ರ ನೀರನ್ನ ಬೆಳೆಗೆ ಹಾಗೂ ಕುಡಿಯಲು ಬಳಸಿಕೊಳ್ಳಲು ಸಾಧ್ಯವಿದ್ದು.ಕಳೆದ ವರ್ಷ ಈ ವೇಳೆಗೆ ಡ್ಯಾಂ‌ನಲ್ಲಿ 104.73 ಅಡಿಯಷ್ಟು ನೀರು ಸಂಗ್ರಹವಾಗಿತ್ತು. ಅಂದರೆ 26.750 ಟಿಎಂಸಿ ನೀರಿದೆ.

ಮುಂಗಾರು ಪೂರ್ವ ಮಳೆ ಈ ಬಾರಿ ಕೈ ಕೊಟ್ಟಿದೆ. ಕಳೆದ ವರ್ಷ ಮಾಚ್‌ರ್‍ ಹಾಗೂ ಏಪ್ರಿಲ್‌ ತಿಂಗಳಿನಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿತ್ತು. ಇದರ ಪರಿಣಾಮ ಬೇಸಿಗೆ ಅವಧಿಯಲ್ಲೇ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳ ಕಂಡುಬಂದಿತ್ತು. ಈ ಬಾರಿ ಮಳೆಯ ಕೊರತೆಯಿಂದ ದಿನೇ ದಿನೇ ಜಲಾಶಯದ ನೀರಿನ ಮಟ್ಟಕುಸಿಯತೊಡಗಿದೆ. ಪ್ರಸ್ತುತ ಜಲಾಶಯದಲ್ಲಿ ಕುಡಿಯುವ ನೀರಿಗೆ ಅಗತ್ಯವಿರುವಷ್ಟುನೀರು ಮಾತ್ರ ಸಂಗ್ರಹವಾಗಿದೆ. ಬೇಸಿಗೆ ಮುಗಿಯುವವರೆಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉದ್ಭವವಾಗುವುದಿಲ್ಲ. ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗಮನವಾದರೆ ರೈತರು ನಿರಾಳರಾಗಲಿದ್ದಾರೆ. 

ಕೃಷಿ ಚಟುವಟಿಕೆ ಆರಂಭಕ್ಕೆ ಸಿದ್ಧರಾಗಿರುವ ರೈತರು ಈಗ ಮುಂಗಾರು ಮಳೆಯತ್ತ ದೃಷ್ಟಿಹರಿಸಿದ್ದಾರೆ. 2018 ರಿಂದ ಇಲ್ಲಿಯವರೆಗೂ ನಿರೀಕ್ಷೆಯಂತೆ ಒಂದೆರಡು ವರ್ಷ ದಾಖಲೆಯ ಮಳೆಯಾಗಿದೆ. ನಾಲ್ಕು ವರ್ಷದಲ್ಲಿ ನೂರಾರು ಟಿಎಂಸಿ ಅಡಿಯಷ್ಟುನೀರು ಹರಿದು ಸಮುದ್ರ ಪಾಲಾಗಿದೆ. ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳದಿರುವ ಕಾರಣ ಏಪ್ರಿಲ್‌ ತಿಂಗಳು ಮುಗಿಯಲಾರಂಭಿಸುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದಲ್ಲಿ ನೀರು ಎಷ್ಟಿದೆ ಎನ್ನುವುದರ ಮೇಲೆ ಎಲ್ಲರ ಗಮನ ಹರಿಯುತ್ತದೆ.

ಜೆಡಿಎಸ್‌ ಯುವಘಟಕ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಬದಲಾವಣೆ?

ಉತ್ತಮ ಮಳೆ ಬಂದಾಗ ನೀರನ್ನು ಸಂರಕ್ಷಿಸಿಡಲು ಕೆರೆಗಳಿಗೆ ನಾಲಾ ಸಂಪರ್ಕ ಜಾಲ, ಹಲವೆಡೆ ಹೊಸ ಕೆರೆಗಳ ನಿರ್ಮಾಣ ಮಾಡುವ, ಕೆರೆಗಳಲ್ಲಿ ತುಂಬಿರುವ ಹೂಳೆತ್ತಿಸಿ ನೀರು ಸಂಗ್ರಹ ಸಾಮರ್ಥ್ಯ ಹೆಚ್ಚಿಸುವ , ಅಂತರ್ಜಲ ವೃದ್ಧಿಗೆ ವೈಜ್ಞಾನಿಕ ಕ್ರಮಗಳನ್ನು ಅನುಸರಿಸದಿರುವುದರಿಂದ ಬೇಸಿಗೆಯಲ್ಲಿ ನೀರಿನ ಕೊರತೆಯನ್ನು ಎದುರಿಸುತ್ತಲೇ ಇರುವಂತಾಗಿದೆ.