ಕ್ರಿಸ್‌ಮಸ್‌ ಹಬ್ಬದ ಪ್ರಯುಕ್ತ, ಕೆಎಸ್‌ಆರ್‌ಟಿಸಿ ಸಾರ್ವಜನಿಕರ ಅನುಕೂಲಕ್ಕಾಗಿ ಡಿಸೆಂಬರ್‌ 22 ರಿಂದ 24ರ ವರೆಗೆ 1000 ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಿದೆ. ಬೆಂಗಳೂರಿನ ಪ್ರಮುಖ ಬಸ್ ನಿಲ್ದಾಣಗಳಿಂದ ರಾಜ್ಯದ ಹಾಗೂ ಅಂತರರಾಜ್ಯದ ವಿವಿಧ ಸ್ಥಳಗಳಿಗೆ ಈ ವಿಶೇಷ ಸಾರಿಗೆಗಳು ಸಂಚರಿಸಲಿದೆ.

ಬೆಂಗಳೂರು (ಡಿ.22): ಕ್ರಿಸ್‌ಮಸ್‌ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಸಾರಿಗೆ ಇಲಾಖೆ ಗುಡ್‌ನ್ಯೂಸ್‌ ನೀಡಿದೆ. ಕ್ರೈಸ್ತರ ಪವಿತ್ರ ಹಬ್ಬದ ಹಿನ್ನಲೆಯಲ್ಲಿ 1 ಸಾವಿರ ಹೆಚ್ಚುವರಿ ಬಸ್‌ಗಳನ್ನು ರಾಜ್ಯದ ಮೂಲೆ ಮೂಲೆಗೂ ಕಲ್ಪಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಡಿಸೆಂಬರ್‌ 22 ರಿಂದ 24ರವರೆಗೆ ವಿಶೇಷ ಬಸ್ ವ್ಯವಸ್ಥೆ ಇರಲಿದೆ. ನಗರದಿಂದ ರಾಜ್ಯದ ಮೂಲೆಮೂಲೆಗೆ ತೆರಳಲು 1000 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ರಾಜ್ಯ, ಅಂತರರಾಜ್ಯದ ವಿವಿದೆಡೆಯಿಂದ ಡಿ 26 ಹಾಗೂ 28ರಂದು ವಿಶೇಷ ಬಸ್ ಕಾರ್ಯಾಚರಣೆ ನಡೆಯಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಪ್ರಯಾಣ ಮಾಡಲಿದೆ.

ಇನ್ನೊಂದೆಡೆ, ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ವಿಶೇಷ ಪ್ರಯಾಣ ಬೆಳೆಸಲಿದೆ.

ಶಾಂತಿನಗರದಿಂದಲೂ ಬಸ್‌

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಐಷಾರಾಮಿ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಿದ್ದು, ಪ್ರಯಾಣಿಕರು ಮುಂಗಡ ಆಸನ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮೂಲಕ ಮಾಡಬಹುದು ಎಂದು ತಿಳಿಸಲಾಗಿದೆ.