ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಿಂದ ನಿಮ್ಮ ನಿಮ್ಮ ಊರುಗಳಿಗೆ ತೆರಳುತ್ತಿದ್ದೀರಾ. ನಿಮಗಿಲ್ಲಿದೆ ಗುಡ್ ನ್ಯೂಸ್

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಸಾರ್ಟಿಸಿ) ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ಜ.11 ಮತ್ತು 12ರಂದು ನಗರದಿಂದ ರಾಜ್ಯ ಹಾಗೂ ಹೊರರಾಜ್ಯದ ಹಲವು ಸ್ಥಳಗಳಿಗೆ 500ಕ್ಕೂ ಹೆಚ್ಚುವರಿ ಬಸ್‌ ಕಾರ್ಯಾಚರಣೆ ಮಾಡುವುದಾಗಿ ತಿಳಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ ಮೊದಲಾದ ಸ್ಥಳಗಳಿಗೆ ಹೆಚ್ಚುವರಿ ಬಸ್‌ ಸೇವೆ ಲಭ್ಯವಿದೆ. ಮೈಸೂರು ರಸ್ತೆಯ ಸ್ಯಾಟಲೆಟ್‌ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಮಾಡಲಾಗುವುದು.

ಶಾಂತಿನಗರದ ಕೇಂದ್ರೀಯ ವಿಭಾಗದ ಘಟಕ 2 ಮತ್ತು 4ರ ಮುಂಭಾಗದಿಂದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಮದುರೈ, ಕುಂಭಕೋಣಂ, ತಿರುಚ್ಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್‌ ಮೊದಲಾದ ಸ್ಥಳಗಳಿಗೆ ಕಾರ್ಯಾಚರಣೆ ಮಾಡಲಾಗುವುದು. ಅಲ್ಲದೆ, ಪೀಣ್ಯದ ಬಸವೇಶ್ವರ ಬಸ್‌ ನಿಲ್ದಾಣ, ಜಯನಗರ, ಜಾಲಹಳ್ಳಿ ಕ್ರಾಸ್‌, ನವರಂಗ್‌, ಮಲ್ಲೇಶ್ವರ 18ನೇ ಕ್ರಾಸ್‌, ಬನಶಂಕರಿ, ಜೀವನ್‌ ಬಿಮಾನಗರ, ಐಟಿಐ ಗೇಟ್‌, ಗಂಗಾನಗರ, ಕೆಂಗೇರಿ ಉಪನಗರ ಮೊದಲಾದ ಸ್ಥಳಗಳಲ್ಲಿ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಮಣ್ಯ, ಧರ್ಮಸ್ಥಳ ಮೊದಲಾದ ಮಾರ್ಗಗಳಿಗೆ ಬಸ್‌ ಕಾರ್ಯಾಚರಣೆ ಮಾಡಲಾಗುವುದು. ಬಳಿಕ ಜ.15ರಂದು ರಾಜ್ಯ ಹಾಗೂ ಹೊರರಾಜ್ಯದಿಂದ ಬೆಂಗಳೂರಿಗೆ ಹೆಚ್ಚುವರಿ ಬಸ್‌ ಸೇವೆ ಲಭ್ಯವಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.