ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳ ನಿರ್ಬಂಧ ಸಂಬಂಧ ಮುಂದಿನ ದಿನದಲ್ಲಿ ಸೂಕ್ತ ಕಾನೂನು ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. 

ಸುವರ್ಣ ವಿಧಾನಸಭೆ (ಡಿ.18): ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳ ನಿರ್ಬಂಧ ಸಂಬಂಧ ಮುಂದಿನ ದಿನದಲ್ಲಿ ಸೂಕ್ತ ಕಾನೂನು ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಬಿಜೆಪಿ ಸದಸ್ಯ ಎಸ್‌.ಟಿ.ಸೋಮಶೇಖರ್‌ ಪ್ರಶ್ನೆಗೆ ಉತ್ತರಿಸಿದ ಅವರು, ಆನ್‌ಲೈನ್‌ ಬೆಟ್ಟಿಂಗ್‌ ಗೇಮ್‌ಗಳ ಸಂಸ್ಥೆಗಳಿಗೆ ಸರ್ಕಾರ ಪರವಾನಗಿ ನೀಡುವುದಿಲ್ಲ. ಆದರೂ, ಇವುಗಳಿಗೆ ಕಡಿವಾಣ ಹಾಕಲು ಸೂಕ್ತ ಕಾನೂನು ಜಾರಿಗೆ ಕ್ರಮ ಕೈಗೊಳ್ಳಲಾಗುವುದು. ಆದರೆ, ನಿರ್ಬಂಧ ವಿಧಿಸಲು ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ನೀಡಿದೆ ಎಂದು ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಪ್ರಮಾಣದಲ್ಲಿ ಯುವ ಪೀಳಿಗೆ ಆನ್‌ಲೈನ್ ಗೇಮ್‌ಗಳ ವ್ಯಸನಕ್ಕೆ ತುತ್ತಾಗುತ್ತಿದ್ದಾರೆ. ಆನ್‌ಲೈನ್ ಗೇಮ್ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಇದರ ತಡೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕಠಿಣ ಕಾನೂನು ಜಾರಿ ಮಾಡಬೇಕಿದೆ. ಬೆಂಗಳೂರು ನಗರದಲ್ಲಿ 5 ಹಾಗೂ ವಿಜಯನಗರದಲ್ಲಿ ಒಬ್ಬರು ಆನ್‌ಲೈನ್ ಬೆಟ್ಟಿಂಗ್ ಆಟದ ದಂಧೆಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಫ್ಟ್‌ವೇರ್ ಉದ್ಯೋಗಿಗಳು ಇದರ ಚಟಕ್ಕೆ ಬಲಿಯಾಗುತ್ತಿರುವುದು ದುರದೃಷ್ಟಕರ ಎಂದು ತಿಳಿಸಿದರು.

ಬೆಳಗಾವಿ ವಿಭಜನೆ ಸದ್ಯಕ್ಕಿಲ್ಲ: ಸಚಿವ ಕೃಷ್ಣ ಬೈರೇಗೌಡ

ಪಂಚಮಸಾಲಿ ಲಾಠಿ ಚಾರ್ಜ್‌: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಲಾಠಿ ಚಾರ್ಜ್‌ ಸಂಬಂಧ ನ್ಯಾಯಾಂಗ ತನಿಖೆ ಸೇರಿ ಯಾವುದೇ ತನಿಖೆ ನಡೆಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸರ್ಕಾರದ ನಿಲುವನ್ನು ಪುನರುಚ್ಚರಿಸಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ-ಜೆಡಿಎಸ್‌ ಸದಸ್ಯರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಸಭಾತ್ಯಾಗ ನಡೆಸಿದರು.

ಕಲಾಪ ಆರಂಭದಲ್ಲಿ ಬಿಜೆಪಿ ಸದಸ್ಯರು ಲಾಠಿ ಚಾರ್ಜ್‌ ಘಟನೆ ಪ್ರಸ್ತಾಪಿಸಿ ನ್ಯಾಯಾಂಗ ತನಿಖೆ ಮತ್ತು ರಾಜ್ಯ ಸರ್ಕಾರದ ಕ್ಷಮೆಗೆ ಆಗ್ರಹಿಸಿದರು. ಇದಕ್ಕೆ ಮಧ್ಯಾಹ್ನದ ಭೋಜನ ವಿರಾಮದ ಬಳಿಕ ಆರಂಭವಾದ ಕಲಾಪದಲ್ಲಿ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಈಗಾಗಲೇ ಲಾಠಿ ಚಾರ್ಜ್‌ ಘಟನೆ ಬಗ್ಗೆ ಸದನದಲ್ಲಿ ಮಾತನಾಡಿದ್ದೇನೆ. ಆದರೂ ವಿಪಕ್ಷ ನಾಯಕರು ಲಾಠಿ ಜಾರ್ಜ್ ವೇಳೆ ಹಲವು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ, ಗಾಯಾಳುಗಳು ಎಲ್ಲಿಗೆ ಹೋಗಿದ್ದಾರೆ ಎಂಬುದೇ ಗೊತ್ತಿಲ್ಲ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಎಲ್ಲ ಗಾಯಾಳುಗಳು ಚಿಕಿತ್ಸೆ ಪಡೆದು ಅವರವರ ಮನೆಗೆ ತೆರಳಿದ್ದಾರೆ ಎಂದರು.

‘ಒಂದು ರಾಷ್ಟ್ರ, ಒಂದು ಚುನಾವಣೆ’.. ಪ್ರಜಾಪ್ರಭುತ್ವವನ್ನು ಬಲಪಡಿಸುವ ದಾರಿ: ರವಿಶಂಕರ್ ಗುರೂಜಿ

ಕೂಡಲೇ ಕ್ಷಮೆ ಕೇಳಿ: ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಹಕ್ಕುಗಳನ್ನು ಕೇಳುವಾಗ ಹೋರಾಟ ಮಾಡುವುದು ತಪ್ಪಾ? ನಮ್ಮ ಹಕ್ಕು ಕೇಳಿದ್ದಕ್ಕೆ ಲಾಠಿ ಚಾರ್ಜ್‌ ಮಾಡಿದ್ದಾರೆ. ಪ್ರತಿಭಟನಾಕಾರರ ಮೇಲೆ ಗೋಲಿಬಾರ್ ಮಾಡಲು ಸಹ ಸರ್ಕಾರ ಸಿದ್ಧವಿತ್ತು ಎಂದು ಸ್ವಾಮೀಜಿ ಹೇಳಿದ್ದಾರೆ. ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್‌ ಮಾಡಿದ್ದು ತಪ್ಪು ಮತ್ತು ಖಂಡನೀಯ. ರಾಜ್ಯ ಸರ್ಕಾರ ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.