ಸಾರಾಯಿ ನಿಷೇಧ ಸಂದರ್ಭದಲ್ಲಿ ಉದ್ಯೋಗ ಕಳೆದುಕೊಂಡವರ ಆವಲಂಬಿತ ಮಕ್ಕಳಿಗೆ ಎಂಎಸ್‌ಐಎಲ್‌ ಘಟಕಗಳ ಹಂಚಿಕೆಯಲ್ಲಿ ಆದ್ಯತೆ ನೀಡುವ ಕುರಿತು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ತಿಳಿಸಿದರು.

ವಿಧಾನ ಪರಿಷತ್ತು (ಫೆ.25): ಸಾರಾಯಿ ನಿಷೇಧ ಸಂದರ್ಭದಲ್ಲಿ ಉದ್ಯೋಗ ಕಳೆದುಕೊಂಡವರ ಆವಲಂಬಿತ ಮಕ್ಕಳಿಗೆ ಎಂಎಸ್‌ಐಎಲ್‌ ಘಟಕಗಳ ಹಂಚಿಕೆಯಲ್ಲಿ ಆದ್ಯತೆ ನೀಡುವ ಕುರಿತು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ತಿಳಿಸಿದರು. ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್‌ ಪ್ರಶ್ನೆಗೆ ಉತ್ತರಿಸಿದ ಅವರು, ಸಾರಾಯಿ ನಿಷೇಧ ಸಂದರ್ಭದಲ್ಲಿ 45 ಸಾವಿರಕ್ಕೂ ಹೆಚ್ಚು ಜನರು ನಿರುದ್ಯೋಗಿಗಳಾದರು. ಸುವರ್ಣ ಕಾಯಕ ಯೋಜನೆಯಡಿಯಲ್ಲಿ ಆಗ ಪುನರ್ವಸತಿ ಕಲ್ಪಿಸುವ ಯೋಜನೆ ರೂಪಿಸಿದರೂ ಪ್ರಯೋಜನವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಅವಲಂಬಿತ ಮಕ್ಕಳಿಗಾದರೂ ಎಂಎಸ್‌ಐಎಲ್ ಘಟಕಗಳ ಹಂಚಿಕೆಯಲ್ಲಿ ಆದ್ಯತೆ ನೀಡುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸುವೆ ಎಂದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

1946-47ರಿಂದ 2023ರ ಮಾರ್ಚ್‌ 31ರವರೆಗೆ 608 ಕೋಟಿ ರು. ಅಬಕಾರಿ ಕಂದಾಯ ಬಾಕಿ ಇದೆ. ಇದರಲ್ಲಿ ಅಸಲು 169.53 ಕೋಟಿ ರು., ಬಡ್ಡಿ 438.35 ಕೋಟಿ ರು. ಬಾಕಿ ಇದೆ. ಬಾಕಿದಾರರು ಮತ್ತು ಅವರ ವಾರಸುದಾರರ ಚರ ಮತ್ತು ಸ್ಥಿರಾಸ್ತಿಗಳನ್ನು ಪತ್ತೆ ಹಚ್ಚಿ ಭೂ ಕಂದಾಯ ಕಾಯ್ದೆಯಂತೆ ಕ್ರಮಕೈಗೊಳ್ಳಲಾಗಿದೆ. ಇದನ್ನು ಪ್ರಶ್ನಿಸಿ ಕೆಲವು ಬಾಕಿದಾರರು ಮತ್ತು ಅವರ ವಾರಸುದಾರರು ನ್ಯಾಯಾಲಯಕ್ಕೆ ಮೊರೆ ಹೋಗಿದ್ದು, ಸದರಿ ಪ್ರಕರಣಗಳಲ್ಲಿ ಬಾಕಿ ವಸೂಲಾತಿಯು ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಿದೆ. ಸರ್ಕಾರ ಈ ಹಿಂದೆ ನಾಲ್ಕು ಬಾರಿ ಕರಸಮಾಧಾನ ಯೋಜನೆ ಜಾರಿಗೆ ತಂದಿದ್ದು, ಈ ಅವಧಿಯಲ್ಲಿ 107.05 ಕೋಟಿ ರು. ವಸೂಲಾಗಿದೆ ಎಂದು ಸಚಿವರು ವಿವರಿಸಿದರು.

ಕಾಂಗ್ರೆಸ್ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ: ಸಚಿವ ಸಂತೋಷ್ ಲಾಡ್‌

ತಿಮ್ಮಾಪುರ ವಿರುದ್ಧ ದೂರು: ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಅವರಿಗೆ ಸಂಕಷ್ಟ ಎದುರಾಗಿದ್ದು, ಇಲಾಖೆಯಲ್ಲಿ ವರ್ಗಾವಣೆಗಾಗಿ ಲಂಚ ಪಡೆದುಕೊಳ್ಳಲಾಗಿದೆ ಎಂದು ಆರೋಪಿಸಿ ಸಚಿವ ಆರ್‌.ಬಿ.ತಿಮ್ಮಾಪುರ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ.) ದೂರು ನೀಡಲಾಗಿದೆ. ಅಕ್ರಮ ಹಣ ವರ್ಗಾವಣೆ ಆರೋಪ ಮಾಡಿ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಇ.ಡಿ.ಗೆ ದೂರು ನೀಡಿದ್ದು, ಈ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ. ಲೋಕಸಭಾ ಚುನಾವಣೆಗೆ ಹಣ ಹೊಂದಿಸಲು ಅಕ್ರಮವಾಗಿ ವರ್ಗಾವಣೆ ಮಾಡಲಾಗುತ್ತಿದೆ. ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಹಣ ಹೊಂದಿಸಲು ವರ್ಗಾವಣೆಗಾಗಿ ಲಂಚ ಪಡೆದುಕೊಳ್ಳುತ್ತಿದ್ದಾರೆ. 

ಕಾನೂನು ತಿದ್ದುಪಡಿ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಚಳವಳಿ: ಪ್ರಲ್ಹಾದ್‌ ಜೋಶಿ ಎಚ್ಚರಿಕೆ

ಇದರಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳು ಶಾಮೀಲಾಗಿದ್ದಾರೆ. ಹೀಗಾಗಿ ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ತಿಮ್ಮಾಪುರ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ, ಇ.ಡಿ. ಅಧಿಕಾರಿಗಳು ತನಿಖೆ ನಡೆಸಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಮೂರು ಡಿಸಿಗಳು, 9 ಸೂಪರಿಟೆಂಡೆಂಟ್, 13 ಡಿವೈಎಸ್ಸಿ, 20 ಇನ್ಸೆಪೆಕ್ಟರ್ ವರ್ಗಾವಣೆ ವಿಚಾರವಾಗಿ ಲಂಚ ಪಡೆಯಲಾಗಿದೆ. ಪ್ರತಿ ಅಧಿಕಾರಿಯಿಂದ 30ರಿಂದ 40 ಲಕ್ಷ ರು. ಲಂಚ ಪಡೆಯಲಾಗಿದ್ದು, ಸುಮಾರು 16 ಕೋಟಿ ರು. ಲಂಚ ಸಂಗ್ರಹಿಸಲಾಗಿದೆ ಎಂದು ಆರೋಪಿಸಲಾಗಿದೆ.