ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್‍ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಸ್ಫೋಟಕ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾರೆ. 

ಶಿವಮೊಗ್ಗ, (ಆಗಸ್ಟ್.05): ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಿದವರು ದಕ್ಷಿಣ ಕನ್ನಡ ಜಿಲ್ಲೆಯವರೇ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಫೋಟಕ ಅಂಶವನ್ನು ಬಿಚ್ಚಿಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಿವಮೊಗ್ಗದಲ್ಲಿ ಇಂದು(ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆಯ ಹಂತಕರು ಕೇರಳದವರಲ್ಲ. ಸ್ಥಳೀಯರೇ ಆಗಿದ್ದಾರೆ. ಇವರ ಹಿನ್ನೆಲೆ ಏನು ಯಾವ ಸಂಘಟನೆಗೆ ಸೇರಿದವರು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ಶೀಘ್ರದಲ್ಲೇ ಆರೋಪಿಗಳನ್ನು ಹಿಡಿದು ತರುವ ಪ್ರಯತ್ನದಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ತನಿಖೆ ಕೈಗೆತ್ತಿಕೊಳ್ಳಲು NIAಗೆ ಕೇಂದ್ರ ಗೃಹ ಇಲಾಖೆ ಆದೇಶ

ಪ್ರವೀಣ್‌ ಹತ್ಯೆ ಹಿಂದೆ ಪಕ್ಕದ ಕೇರಳ ಹಂತಕ ಕೈವಾಡವಿದೆ ಎಂದು ಹೇಳಲಾಗಿತ್ತು. ಆದ್ರೆ, ಇದೀಗ ಸ್ವತಃ ಗೃಹ ಸಚಿವರೇ ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಿ ನ್ಯಾಯಾಂಗಕ್ಕೆ ಒಪ್ಪಿಸಲಾಗಿದೆ.

ಎನ್‌ಐಎ ತನಿಖೆಗೆ 
 ರಾಜ್ಯಾದ್ಯಂತ ಸಂಚಲನ ಮೂಡಿಸಿದ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಯುವ ಮೋರ್ಛಾದ ಪದಾಧಿಕಾರಿ ಬೆಳ್ಳಾರೆ ನಿವಾಸಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳುವಂತೆ ರಾಷ್ಟ್ರೀಯ ತನಿಖಾ ದಳಕ್ಕೆ ಕೇಂದ್ರ ಗೃಹ ಸಚಿವಾಲಯ ಲಿಖಿತ ಆದೇಶ ನೀಡಿದೆ.

ಕೇಂದ್ರ ಗೃಹ ಇಲಾಖೆಯ ಅಧೀನ ಕಾರ್ಯದರ್ಶಿ ವಿಪುಲ್ ಅಲೋಕ್ ಅ .3 ರಂದು ಈ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾನಿರ್ದೇಶಕರಿಗೆ ಪತ್ರ ಬರೆದು ಆದೇಶಿಸಿದ್ದಾರೆ. ಭಾರತ ಸರಕಾರದ ಗೃಹ ಸಚಿವಾಲಯವು ಈ ಅದೇಶವನ್ನು ಹೊರಡಿಸಿದ್ದು, ಅದರ ಪ್ರತಿಯನ್ನು ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೂ ರವಾನಿಸಲಾಗಿದೆ.

ಏನಿದು ಪ್ರಕರಣ?
ಪ್ರವೀಣ್ ನೆಟ್ಟಾರ್ ಅವರು ಬೆಳ್ಳಾರೆಯಲ್ಲಿ ಅಕ್ಷಯ ಪ್ರೆಶ್ ಚಿಕನ್ ಫಾರ್ಮ್ ಎಂಬ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು. ಜು 26 ರಂದು ರಾತ್ರಿ ಎಂಟು ಗಂಟೆ ಸುಮಾರಿಗೆ ಪ್ರವೀಣ್ ತನ್ನ ಬೈಕ್ ನಲ್ಲಿ ಮನೆಗೆ ಹೊರಡಲು ಸಿದ್ದರಾಗಿದ್ದಾಗ ಬೈಕ್ ವೊಂದರಲ್ಲಿ ಬಂದ ಮೂವರು ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅವರ ಮೇಲೆ ದಾಳಿ ಮಾಡಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಬದುಕಿ ಉಳಿಯಲಿಲ್ಲ. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಪ್ರವೀಣ್ ಅವರ ಅಂಗಡಿಯಲ್ಲಿ ಕೋಳಿ ಕ್ಲೀನಿಂಗ್ ಕೆಲಸ ಮಾಡುತ್ತಿದ್ದ ಮಧು ಕುಮಾರ್ ರಾಯನ್ ಎಂಬವರು ದೂರು ನೀಡಿದ್ದರು.