ಪಾರದರ್ಶಕ ಆಡಳಿತದ ದೃಷ್ಟಿಯಿಂದ, ಲೋಕಾಯುಕ್ತರು, ಉಪಲೋಕಾಯುಕ್ತರು ಸೇರಿದಂತೆ ಸಂಸ್ಥೆಯ ಎಲ್ಲಾ ಅಧಿಕಾರಿಗಳು, ನೌಕರರು ತಮ್ಮ ವಾರ್ಷಿಕ ಆಸ್ತಿ ವಿವರ ಪ್ರಕಟಿಸುವುದನ್ನು ಕಡ್ಡಾಯಗೊಳಿಸಲು ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರಬೇಕೆಂದು ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಸರ್ಕಾರಕ್ಕೆ ಮನವಿ
ಬೆಂಗಳೂರು(ನ.10): ಪಾರದರ್ಶಕ ಆಡಳಿತದ ದೃಷ್ಟಿಯಿಂದ ಲೋಕಾಯುಕ್ತರು, ಉಪಲೋಕಾಯುಕ್ತರು ಸೇರಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು, ನೌಕರರು ಪ್ರತೀ ವರ್ಷ ತಮ್ಮ ಆಸ್ತಿ ವಿವರ ಪ್ರಕಟಿಸುವಂತೆ ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರಬೇಕೆಂದು ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳೂ ಆಸ್ತಿ ವಿವರ ಸಲ್ಲಿಸಬೇಕು:
ಈ ಸಂಬಂಧ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಪತ್ರ ಬರೆದಿರುವ ಅವರು, ಶಾಸಕರು, ಪರಿಷತ್ ಸದಸ್ಯರು ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಕೆ ಮಾಡಬೇಕಾಗಿರುತ್ತದೆ. ಸಾರ್ವಜನಿಕ ಹಿತದೃಷ್ಟಿಯಿಂದ ಇದು ಅವಶ್ಯಕ. ಅದೇ ರೀತಿ ಲೋಕಾಯುಕ್ತ ಸಂಸ್ಥೆ ಪಾರದರ್ಶಕವಾಗಿ ನಡೆದುಕೊಳ್ಳಬೇಕಾಗಿರುವುದು ಸಾರ್ವಜನಿಕ ಹಿತದೃಷ್ಟಿಯಂದ ಪ್ರಮುಖವಾಗಿರುತ್ತದೆ. ಹೀಗಾಗಿ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಕೋರಿದ್ದಾರೆ.
ಹಾಗಾಗಿ ಲೋಕಾಯುಕ್ತರು, ಉಪಲೋಕಾಯುಕ್ತರು ಸೇರಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಅಧಿಕಾರಿ, ನೌಕರರು ಪ್ರತೀ ವರ್ಷ ತಮ್ಮ ಆಸ್ತಿ ವಿವರ ಪ್ರಕಟಿಸುವಂತೆ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಕೋರಿದ್ದಾರೆ.
ಹೈಕೋರ್ಟ್ ನ್ಯಾಯಮೂರ್ತಿಗಳು ಸ್ವಯಂ ಪ್ರೇರಿತವಾಗಿ ಆಸ್ತಿ ವಿವರ ಪ್ರಕಟ:
ಹೈಕೋರ್ಟ್ ನ್ಯಾಯಮೂರ್ತಿಗಳು ಸ್ವಯಂ ಪ್ರೇರಿತವಾಗಿ ತಮ್ಮ ಆಸ್ತಿ ವಿವರಗಳನ್ನು ಪ್ರಕಟಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಲೋಕಾಯುಕ್ತ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ನ್ಯಾಯಮೂರ್ತಿಗಳೂ ಮತ್ತು ಸರ್ಕಾರಿ ನೌಕರರು ತಮ್ಮ ಆಸ್ತಿ ವಿವರ ಬಹಿರಂಗಪಡಿಸುವುದು ಆರೋಗ್ಯಕರ ಮತ್ತು ಅವಶ್ಯಕ ಕ್ರಮವಾಗಿರುತ್ತದೆ. ಹಾಗಾಗಿ ನಾನು 2021ರಲ್ಲೂ ಈ ಸಂಬಂಧ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರಕ್ಕೆ ಪತ್ರ ಬರೆದಿದ್ದೆ. ನನ್ನ ಪತ್ರದ ಹಿನ್ನೆಲೆಯಲ್ಲಿ ಸರ್ಕಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಪತ್ರ ಬರೆದು ಲೋಕಾಯುಕ್ತ ಕಾಯ್ದೆ ತಿದ್ದುಪಡಿಗೆ ಮುಂದಿನ ಕ್ರಮ ಕೈಗೊಳ್ಳಲು ಸೂಚಿಸಿತ್ತು. ಆದರೆ, ಇಲಾಖೆಯು ಲೋಕಾಯುಕ್ತಕ್ಕೆ ಪತ್ರ ಬರೆದು ಕಾಯ್ದೆ ತಿದ್ದುಪಡಿ ಸಂಬಂಧ ಅಭಿಪ್ರಾಯ ಕೇಳಿತ್ತು. ಇದುವರೆಗೆ ಯಾವುದೇ ಉತ್ತರ, ಮಾಹಿತಿಯನ್ನು ನೀಡಿಲ್ಲ ಎಂಬುದನ್ನು ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
