ಕಲಬುರಗಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯದಲ್ಲಿನ ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಹೈಕಮಾಂಡ್ ಸೂಕ್ತ ಸಮಯದಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಿದ್ದು, ಅಲ್ಲಿಯವರೆಗೆ ಗೊಂದಲ ಸೃಷ್ಟಿಸಬಾರದು ಎಂದಿದ್ದಾರೆ.
ಕಲಬುರಗಿ (ಮೇ.1): ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ನಾಯಕತ್ವ ಬದಲಾವಣೆಯ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಯಾವುದೇ ಊಹಾಪೋಹಗಳಿಗೆ ಅವಕಾಶ ನೀಡಬೇಡಿ ಎಂದು ಮನವಿ ಮಾಡಿದ್ದಾರಲ್ಲದೆ, ಅಂತಿಮ ನಿರ್ಧಾರ ಹೈಕಮಾಂಡ್ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
"ಸಿಎಂ ಬದಲಾವಣೆ ಬಗ್ಗೆ ಪದೇ ಪದೇ ಪ್ರಶ್ನಿಸಿದರೆ ನಾನೇನು ಹೇಳಲಿ? ಹೈಕಮಾಂಡ್ ಅಂದ್ರೆ ಕೇವಲ ಒಬ್ಬ ವ್ಯಕ್ತಿಯಲ್ಲ. ನಾನು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ನಾವೆಲ್ಲರೂ ಕುಳಿತು ಒಮ್ಮತದ ನಿರ್ಧಾರ ತೆಗೆದುಕೊಳ್ಳುತ್ತೇವೆ. ನಾನೊಂದು ಹೇಳಿದರೆ ನೀವು ಇನ್ನೊಂದನ್ನು ಅರ್ಥೈಸಬೇಡಿ" ಎಂದು ಮಾಧ್ಯಮಗಳಿಗೆ ಖರ್ಗೆ ಕಿವಿಮಾತು ಹೇಳಿದರು.
ಸಮಯ ನಿಗದಿಯಾದ ಮೇಲೆ ನಿರ್ಧಾರ
ನಾಯಕತ್ವ ಬದಲಾವಣೆಯ ದಿನಾಂಕದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, "ಬದಲಾವಣೆಯ ಬಗ್ಗೆ ಇನ್ನೂ ಯಾವುದೇ ದಿನಾಂಕ ನಿಗದಿಯಾಗಿಲ್ಲ. ಸಮಯ ನಿಗದಿಯಾಗದ ಹೊರತು ಬದಲಾವಣೆ ಆಗುತ್ತದೋ ಇಲ್ಲವೋ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಸೂಕ್ತ ಸಮಯ ಬಂದಾಗ ಪಕ್ಷದ ಹಿತದೃಷ್ಟಿಯಿಂದ ಮತ್ತು ರಾಜ್ಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ಏನು ನಿರ್ಧಾರ ತೆಗೆದುಕೊಳ್ಳಬೇಕೋ ಅದನ್ನು ಖಂಡಿತ ತೆಗೆದುಕೊಳ್ಳುತ್ತೇವೆ" ಎಂದರು.
ಪಕ್ಷದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು
ಯಾವುದೇ ನಿರ್ಣಯ ಕೈಗೊಂಡರೂ ಅದರ ಸಾಧಕ-ಬಾಧಕಗಳನ್ನು ಚರ್ಚಿಸಿ ಮುಂದುವರಿಯುತ್ತೇವೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬೆಂಬಲ ನೀಡಬೇಕು. ಸುಮ್ಮನೆ ತಪ್ಪು ಸಂದೇಶಗಳನ್ನು ರವಾನಿಸುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸಬೇಡಿ ಎಂದು ಅವರು ಇದೇ ವೇಳೆ ವಿನಂತಿಸಿದರು.


