ಕರ್ನಾಟಕಕ್ಕೆ ಸೇರುತ್ತೇವೆ: ಮರಾಠಿ ಹಳ್ಳಿಗಳ ಪಟ್ಟು..!
ಮಹಾರಾಷ್ಟ್ರ ಸರ್ಕಾರಕ್ಕೆ ಜತ್ತ ತಾಲೂಕಿನ 42 ಹಳ್ಳಿಗಳ ಸಡ್ಡು, ನೀರಿನ ಸಮಸ್ಯೆ ಬಗೆಹರಿಸಲು 8 ದಿನ ಗಡುವು ನೀಡಿದ ಜನ, ಮಹಾರಾಷ್ಟ್ರದ ಮೀರಜ್ನಲ್ಲಿ ಕರ್ನಾಟಕದ ಬಸ್ಸಿಗೆ ಕಲ್ಲು
![Marathi villagers Says Join to Karnataka grg Marathi villagers Says Join to Karnataka grg](https://static-gi.asianetnews.com/images/01gjrz97hc2kx206hew7c9h8jf/12511kp--kp-photo-1_363x203xt.jpg)
ಬೆಳಗಾವಿ(ನ.27): ಬೆಳಗಾವಿ, ಕಾರವಾರ ಮತ್ತಿತರ ಗಡಿ ಪ್ರದೇಶಗಳ ವಿಚಾರದಲ್ಲಿ ಕರ್ನಾಟಕದ ಜತೆಗೆ ಪದೇ ಪದೆ ಕಾಲು ಕೆರೆದು ಜಗಳಕ್ಕೆ ನಿಲ್ಲುತ್ತಿರುವ ಮಹಾರಾಷ್ಟ್ರ ಸರ್ಕಾರಕ್ಕೆ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಜನ ಶಾಕ್ ನೀಡಿದ್ದಾರೆ. ನಮಗೆ ನೀರು ಕೊಡಿ, ಇಲ್ಲಾಂದ್ರೆ ನಾವು ಕರ್ನಾಟಕಕ್ಕೆ ಸೇರಲು ರೆಡಿ ಎಂಬ ಕೂಗೆಬ್ಬಿಸಿದ್ದಾರೆ. ಈ ಸಂಬಂಧ ಮಹಾರಾಷ್ಟ್ರ ಸರ್ಕಾರಕ್ಕೆ ಎಂಟು ದಿನಗಳ ಗಡುವನ್ನೂ ನೀಡಿರುವ ಗ್ರಾಮಸ್ಥರು, ಈ ಗಡುವಿನೊಳಗೆ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ತಾಲೂಕಿಗೆ ಆಹ್ವಾನಿಸುತ್ತೇವೆ, ಕರ್ನಾಟಕ ಸೇರುವ ನಿರ್ಧಾರ ಘೋಷಿಸುತ್ತೇವೆ ಎಂದು ತಿಳಿಸಿದ್ದಾರೆ.
ಜತ್ತ ತಾಲೂಕು ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ 42 ಹಳ್ಳಿಗಳ ಜನ ಉಮದಿ ಗ್ರಾಮದಲ್ಲಿ ಶುಕ್ರವಾರ ಸಭೆ ನಡೆಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಮಹಾರಾಷ್ಟ್ರದ ಜತ್ತ, ಅಕ್ಕಲಕೋಟ, ಸೊಲ್ಲಾಪುರ ಕರ್ನಾಟಕಕ್ಕೆ ಸೇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ಮಹಾರಾಷ್ಟ್ರದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಅಲ್ಲದೆ ಅಲ್ಲಿನ ಸರ್ಕಾರಕ್ಕೆ ತೀವ್ರ ಮುಜುಗರವನ್ನೂ ತಂದಿಟ್ಟಿದೆ. ಈ ಹಿಂದೆಯೂ ಜತ್ತ ತಾಲೂಕಿನ ಜನ ನೀರಿನ ಸಮಸ್ಯೆಯಿಂದ ಬೇಸತ್ತು ಕರ್ನಾಟಕ ಸೇರುವ ಠರಾವು ಪಾಸ್ ಮಾಡಿ ಸುದ್ದಿಯಾಗಿದ್ದರು.
ಮರಾಠಿಗರ ಪುಂಡಾಟ: ಮಹಾರಾಷ್ಟ್ರಕ್ಕೆ NWKRTC ಬಸ್ ಸಂಚಾರ ಸ್ಥಗಿತ
ತಡರಾತ್ರಿವರೆಗೂ ಸಭೆ:
ಕನ್ನಡಗಿರು ಹೆಚ್ಚಿನ ಸಂಖ್ಯೆಯಲ್ಲಿರುವ ಜತ್ತ ತಾಲೂಕು 6 ದಶಕಗಳಿಂದಲೂ ನೀರಿನ ಸಮಸ್ಯೆಯಿಂದ ಬಳಲುತ್ತಿದೆ. ಇದೀಗ ಕರ್ನಾಟಕ-ಮಹಾರಾಷ್ಟ್ರದ ಗಡಿ ವಿವಾದ ಹಾಗೂ ತಾಲೂಕಿನ ನೀರಿನ ಸಮಸ್ಯೆ ಮತ್ತೆ ಮುನ್ನೆಲೆಗೆ ಬಂದ ಸಂದರ್ಭದಲ್ಲೇ ಉಮದಿ ಗ್ರಾಮದಲ್ಲಿ ಶುಕ್ರವಾರ ಜತ್ತ ತಾಲೂಕು ನೀರಾವರಿ ಸಂಘರ್ಷ ಸಮಿತಿ ಸಭೆ ನಡೆದಿದೆ. ತಾಲೂಕಿನ 42 ಹಳ್ಳಿಗಳ ಪ್ರಮುಖರು ಈ ಸಭೆಯಲ್ಲಿ ಭಾಗಿಯಾಗಿದ್ದರು. ತಡಡರಾತ್ರಿವರೆಗೂ ನಡೆದ ಈ ಸಭೆಯಲ್ಲಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆದಿದ್ದು, ಅಂತಿಮವಾಗಿ ಎಂಟು ದಿನಗಳೊಳಗೆ ಮಹಾರಾಷ್ಟ್ರ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವರು ತಾಲೂಕಿಗೆ ಬರಬೇಕು. ತಾಲೂಕಿನ ನೀರಿನ ಸಮಸ್ಯೆ ಕುರಿತು ಪರಿಹಾರ ಕಲ್ಪಿಸಬೇಕು. 8 ದಿನಗಳೊಳಗೆ ನಿರ್ಧಾರ ಕೈಗೊಳ್ಳದಿದ್ದರೆ ಕರ್ನಾಟಕದ ಮುಖ್ಯಮಂತ್ರಿಯನ್ನು ಜತ್ತ ತಾಲೂಕಿಗೆ ಆಹ್ವಾನಿಸಿ ಕರ್ನಾಟಕ ಸೇರಲು ನಿರ್ಧಾರ ಪ್ರಕಟಿಸುತ್ತೇವೆ ಎಂಬ ನಿರ್ಣಯ ಕೈಗೊಳ್ಳಲಾಗಿದೆ.
ಕರ್ನಾಟಕ ಸಿಎಂ ಆಹ್ವಾನಿಸುತ್ತೇವೆ:
ಈ ವಿಚಾರವಾಗಿ ನಂತರ ಮಾತನಾಡಿದ ಜಲ ಸಂಘರ್ಷ ಸಮಿತಿ ಮುಖಂಡ ಸುನೀಲ್ ಪೋತದಾರ್, ಮಹಾರಾಷ್ಟ್ರ ಸಿಎಂ, ಡಿಸಿಎಂ, ಜಲಸಂಪನ್ಮೂಲ ಸಚಿವರು ಉಮದಿ ಗ್ರಾಮಕ್ಕೆ ಬಂದು ನೀರಿನ ಸಮಸ್ಯೆ ಪರಿಹಾರಕ್ಕೆ ಕೈಗೊಳ್ಳುವ ಕ್ರಮ, ಬಜೆಟ್ನಲ್ಲಿ ಇದಕ್ಕಾಗಿ ಮೀಸಲಿಡುವ ಹಣದ ಕುರಿತು ಮಾಹಿತಿ ನೀಡಬೇಕು. ಇಲ್ಲವಾದರೆ ಕರ್ನಾಟಕ ಸಿಎಂರನ್ನು ಉಮದಿಗೆ ಆಹ್ವಾನಿಸುತ್ತೇವೆ. ಕರ್ನಾಟಕ ಸೇರುವ ನಿರ್ಣಯ ಕೈಗೊಳ್ಳುತ್ತೇವೆ. 2012ರಲ್ಲೇ ನಾವು ಕರ್ನಾಟಕ ಸೇರುವ ಠರಾವು ಪ್ರಕಟಿಸಿದ್ದೆವು ಎಂದರು.
ಗಡಿ ವಿವಾದ: ಮರಾಠಿಗರ ಪುಂಡಾಟಕ್ಕೆ ಕನ್ನಡಿಗರ ಆಕ್ರೋಶ..!
ಮಹಾ ನೆಲದಲ್ಲಿ ಕನ್ನಡ ಬಾವುಟ, ಸಿಎಂ ಬೊಮ್ಮಾಯಿ ಪರ ಬ್ಯಾನರ್
ವಿಜಯಪುರ: ಶಿವಸೇನೆ ಪುಂಡರು ಕರ್ನಾಟಕ ಸಾರಿಗೆ ಸಂಸ್ಥೆಗಳಿಗೆ ಮಸಿ ಬಳೆದು, ಕಲ್ಲೆಸೆದು ಪುಂಡಾಟ ನಡೆಸುತ್ತಿರುವ ನಡುವೆಯೇ ಮಹಾರಾಷ್ಟ್ರದ ಗಡಿಯ ಸಾಂಗ್ಲಿ, ಸೊಲ್ಲಾಪುರ ಜಿಲ್ಲೆಗಳ ಕನ್ನಡ ಭಾಷಿಕರು ಕನ್ನಡ ಬಾವುಟ ಹಾರಿಸುವ ಮೂಲಕ ಮಹಾರಾಷ್ಟ್ರ ಸರ್ಕಾರಕ್ಕೆ ಸಡ್ಡು ಹೊಡೆದಿದ್ದಾರೆ. ಮಹಾರಾಷ್ಟ್ರ ಸರ್ಕಾರ ಕನ್ನಡ ಭಾಷಿಕ ಮರಾಠಿಗರ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿ ಕನ್ನಡ ಭಾಷಿಕರು ಮರಾಠಿ ನೆಲದಲ್ಲೇ ಕನ್ನಡ ಬಾವುಟ ಹಾರಿಸಿದ್ದಾರೆ. ನೀವು ನಮ್ಮ ಬಗ್ಗೆ ಇದೇ ಅಸಡ್ಡೆ ಭಾವನೆ ಮುಂದುರಿಸಿದರೆ ನಾವು ಇಂದಲ್ಲ, ನಾಳೆ ಕರ್ನಾಟಕಕ್ಕೆ ಸೇರುತ್ತೇವೆ ಎಂಬ ಸಂದೇಶ ರವಾನಿಸಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ತಿಕ್ಕುಂಡಿಯಲ್ಲಂತು ಗ್ರಾಮಸ್ಥರು ಕನ್ನಡ ಬಾವುಟ ಹಾರಿಸಿದ್ದಷ್ಟೇ ಅಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ ಬ್ಯಾನರ್ ಹಾಕಿ ಜೈಕಾರ ಕೂಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತೆರಳಿ ಬ್ಯಾನರ್ ತೆರವುಗೊಳಿಸಿದ್ದಾರೆ.
ಕರ್ನಾಟಕದವರು ಜತ್ತ ತಾಲೂಕಿನ ವಿಚಾರ ಪ್ರಸ್ತಾಪಿಸಿದಾಗ ಬೆಳಗಾವಿ, ಕಾರವಾರ ನೀವು ನಮಗೆ ಕೊಡುತ್ತೀರಾ ಎಂದು ಎನ್ಸಿಪಿ ನಾಯಕ ಶರದ್ ಪವಾರ್ ಕೇಳಿದ್ದಾರೆ. ಇದರರ್ಥ ಜತ್ತ ತಾಲೂಕು ಕರ್ನಾಟಕಕ್ಕೆ ಬಿಟ್ಟುಕೊಡಲು ಸಿದ್ಧ ಎಂಬುದೇ ಆಗಿದೆ. ಮಹಾಜನ ವರದಿ ಪ್ರಕಾರ ಜತ್ತ ತಾಲೂಕಿನ ಹಳ್ಳಿಗಳು ಕರ್ನಾಟಕಕ್ಕೆ ಸೇರಬೇಕು. ಇದೇ ಕಾರಣಕ್ಕೆ ಇಲ್ಲಿ ಯಾವುದೇ ಸೌಲಭ್ಯ ಕಲ್ಪಿಸಿಲ್ಲ ಅಂತ ಜಲ ಸಂಘರ್ಷ ಸಮಿತಿ ಮುಖಂಡ ಸುನೀಲ್ ಪೋತದಾರ್ ತಿಳಿಸಿದ್ದಾರೆ.