* ಗಡಿಯಲ್ಲಿ ಸಾಧ್ಯವಾದಷ್ಟು ರ‌್ಯಾಂಡಮ್‌ ಟೆಸ್ಟ್‌ * ನೆರೆ ರಾಜ್ಯದಿಂದ ಬರುವ ಎಲ್ಲರ ಪರೀಕ್ಷೆ ಅಸಾಧ್ಯ* ಮಹಾರಾಷ್ಟ್ರದಲ್ಲಿರುವಷ್ಟು ಆತಂಕ ನಮ್ಮಲ್ಲಿಲ್ಲ 

ಬೆಂಗಳೂರು(ಜೂ.28): ಮಹಾರಾಷ್ಟ್ರ, ಮಧ್ಯಪ್ರದೇಶ ರಾಜ್ಯಗಳಲ್ಲಿ ಇರುವಂತಹ ಕೊರೊನಾ ಆತಂಕ ನಮ್ಮಲ್ಲಿ ಇನ್ನೂ ಬಂದಿಲ್ಲ. ಆದರೆ ಮಹಾರಾಷ್ಟ್ರ ಮತ್ತು ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ವಿಶೇಷ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿದೆ. ರಾಜ್ಯಕ್ಕೆ ಪ್ರವೇಶಿಸುವವರಿಗೆ ರ‌್ಯಾಂಡಮ್‌ ಆಗಿ ಪರೀಕ್ಷೆ ಮಾಡಲು ಈಗಾಗಲೇ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್‌, ಬೇರೆ ರಾಜ್ಯಗಳಿಂದ ಬರುವ ಎಲ್ಲರನ್ನೂ ವೈದ್ಯಕೀಯ ತಪಾಸಣೆ ಮಾಡಲು ಸಾಧ್ಯವಾಗುತ್ತಿಲ್ಲ. ಆದರೂ ಸಾಧ್ಯವಾದಷ್ಟು ಜನರಿಗೆ ಕೋವಿಡ್‌ ಪರೀಕ್ಷೆ ಮಾಡಲಾಗುತ್ತಿದೆ. ಕೇರಳ ಒಂದರಿಂದಲೇ ಕೆಲವು ಲಕ್ಷ ಜನರು ರಾಜ್ಯದೊಳಗೆ ಬರುತ್ತಿದ್ದಾರೆ. ಆದರೂ ಇದನ್ನು ಗಂಭೀರವಾಗಿ ಪರಿಗಣಿಸಿ ಸಾಧ್ಯವಾದಷ್ಟು ಜನರಿಗೆ ಪರೀಕ್ಷೆ ಮಾಡಲಾಗುತ್ತಿದೆ ಎಂದು ಹೇಳಿದರು.

ಕೋವಿಡ್‌ ಹೊಸ ವೈರಾಣು ನಿಯಂತ್ರಣಕ್ಕೆ ಜೀನೋಮ್‌ ಸೀಕ್ವೆನ್ಸ್‌ ಮಾಡುತ್ತಿದ್ದು, 600 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಕೈಸೇರಬೇಕಿದೆ. ಈವರೆಗೆ ರಾಜ್ಯದಲ್ಲಿ ಇಬ್ಬರಲ್ಲಿ ಡೆಲ್ಟಾಪ್ಲಸ್‌ ಸೋಂಕು ಇರುವುದು ಖಚಿತವಾಗಿದೆ. ಕೋವಿಡ್‌ ಸೋಂಕು ನಿಯಂತ್ರಿಸಲು ಜನರು ಲಸಿಕೆ ಪಡೆಯಲೇಬೇಕು. ಪಡೆದ ನಂತರವೂ ಶೇ.70 ಮಂದಿ ಲಸಿಕೆ ಪಡೆಯುವವರೆಗೆ ಮಾಸ್ಕ್‌ ಕಡ್ಡಾಯವಾಗಿ ಧರಿಸಬೇಕು ಎಂದು ಮನವಿ ಮಾಡಿದರು.

ನಾಯಕತ್ವ ಬದಲಾವಣೆ: ಯಡಿಯೂರಪ್ಪ ಬಗ್ಗೆ ಸುಧಾಕರ್‌ ಹೇಳಿದ್ದಿಷ್ಟು

ಹುಟ್ಟುಹಬ್ಬದಂದು 9 ಮಕ್ಕಳನ್ನು ದತ್ತು ಪಡೆದ ಸಚಿವ

ಭಾನುವಾರ ತಮ್ಮ ಹುಟ್ಟುಹಬ್ಬದ ದಿನದಂದು ಕೊರೋನಾ ಸಂಕಷ್ಟದಲ್ಲಿ ಪೋಷಕರನ್ನು ಕಳೆದಕೊಂಡು ಅನಾಥರಾದ ಚಿಕ್ಕಬಳ್ಳಾಪುರ ಜಿಲ್ಲೆಯ 9 ಮಕ್ಕಳಿಗೆ ಸಚಿವ ಸುಧಾಕರ್‌ ತಲಾ 1 ಲಕ್ಷ ರು., ಅವರ ಬ್ಯಾಂಕ್‌ ಖಾತೆಯಲ್ಲಿ ಜಮೆ ಮಾಡಿದರು. ಅಲ್ಲದೆ ಮಕ್ಕಳ ಸಂಪೂರ್ಣ ವಿದ್ಯಾಭ್ಯಾಸದ ಖರ್ಚನ್ನು ತಾವೇ ವಹಿಸಿಕೊಳ್ಳುವುದಾಗಿ ಘೋಷಿಸಿದರು. ಪ್ರಗತಿಪರ ರೈತರು, ಕೊರೋನಾ ಯೋಧರಾಗಿ ಸೇವೆ ಸಲ್ಲಿಸಿದ ವೈದ್ಯರನ್ನು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಿ ಚಿಕ್ಕಬಳ್ಳಾಪುರ ನಗರದ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್‌ ವಿತರಿಸಿದರು.

ಸುಧಾಕರ್‌ ಅವರಿಗೆ ಹೂಗುಚ್ಛ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದ ಸಿಎಂ ಯಡಿಯೂರಪ್ಪ. ಬೆಂಗಳೂರಿನಲ್ಲಿ 50 ಲಕ್ಷಕ್ಕೂ ಅಧಿಕ ಜನರಿಗೆ ಕೋವಿಡ್‌ ಲಸಿಕೆ ನೀಡಲಾಗಿದೆ. ದೇಶದ ಯಾವುದೇ ನಗರದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಲಸಿಕೆ ನೀಡಿಲ್ಲ. ಹೀಗಾಗಿ ಇದೊಂದು ದಾಖಲೆಯಾಗಿದೆ. ರಾಜ್ಯದಲ್ಲಿ ಮೊದಲನೇ ಡೋಸ್‌ ಪಡೆದವರ ಪ್ರಮಾಣ ಶೇ.40ರಷ್ಟಿದೆ (1.85 ಕೋಟಿ). 35 ಲಕ್ಷಕ್ಕೂ ಹೆಚ್ಚು ಜನರು ಎರಡೂ ಡೋಸ್‌ ಪಡೆದಿದ್ದಾರೆ. ಲಸಿಕೆ ನೀಡಲು ಆದ್ಯತೆಯಲ್ಲಿ ಕೆಲ ಗುಂಪುಗಳನ್ನು ರಚಿಸಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯಡಿ ವಿದ್ಯಾರ್ಥಿಗಳು, ಆರೋಗ್ಯ ಸಿಬ್ಬಂದಿಯ ಕುಟುಂಬದವರು, ಪೊಲೀಸರ ಕುಟುಂಬದವರು, ಮಾಧ್ಯಮದವರು ಹೀಗೆ ಜನಸಂಪರ್ಕ ಹೆಚ್ಚು ಇರುವವರನ್ನು ರಕ್ಷಣೆ ಮಾಡಲು ಆದ್ಯತೆ ನೀಡಲಾಗಿದೆ. 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಪಾಲಕರಿಗೆ ಪ್ರಾಶಸ್ತ್ಯದ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.

ಕಳೆದ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ 47 ಮಂದಿ ವಿದ್ಯಾರ್ಥಿಗಳಿಗೆ ತಮ್ಮ ಸಾಹಿಕೃಷ್ಣ ಚಾರಿಟಬಲ್‌ ಟ್ರಸ್ಟ್‌ ಮೂಲಕ ಉಚಿತವಾಗಿ ಲ್ಯಾಪ್‌ಟಾಪ್‌ ವಿತರಿಸಿ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಿದರು.