ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿಗೆ ಸಚಿವ ಮಧು ಬಂಗಾರಪ್ಪ ಪ್ರಶ್ನಿಸಿದ್ದಾರೆ.

ಬೆಂಗಳೂರು (ಜೂ.8): ಆರ್‌ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಮುಖ್ಯಮಂತ್ರಿ ಅವರ ರಾಜೀನಾಮೆ ಕೇಳುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಹಲ್ಗಾಂ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಯಾರ ರಾಜೀನಾಮೆ ಕೇಳುತ್ತಾರೆ ಎನ್ನುವುದನ್ನೂ ಹೇಳಲಿ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗ್ರಹಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಲ್ಲದೆ, ಆರ್‌ಸಿಬಿ ತಂಡದ ಅಭಿನಂದನಾ ಸಮಾರಂಭದಲ್ಲಿ ರಾಜ್ಯಪಾಲರೂ ಭಾಗಿಯಾಗಿದ್ದರು, ಬಿಜೆಪಿಯವರು ಅವರ ರಾಜೀನಾಮೆ ಕೇಳಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷದವರು ಕಾಲ್ತುಳಿತ ದುರಂತ ಸಂಬಂಧ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ದುರಂತ ಆಗಬಾರದಿತ್ತು, ಆಗಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಗುಪ್ತಚರ ವೈಫಲ್ಯದ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಚರ್ಚಿಸಿ ವಿವಿಧ ಪೊಲೀಸ್‌ ಅಧಿಕಾರಿಗಳ ಅಮಾನತು ಮಾಡಿದೆ. ಆದರೂ, ಬಿಜೆಪಿಯವರು ಮುಖ್ಯಮಂತ್ರಿ ರಾಜೀನಾಮೆ ಕೇಳುತ್ತಾರಲ್ವಾ? ಪಹಲ್ಗಾಂ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಯಾರ ರಾಜೀನಾಮೆ ಕೇಳುತ್ತಾರೆ? ಅಥವಾ ಯಾರು ರಾಜೀನಾಮೆ ಕೊಟ್ಟಿದ್ದಾರೆ.

ಕೇಂದ್ರದ ಗುಪ್ತಚರ ಇಲಾಖೆ ವೈಫಲ್ಯ ಸಂಬಂಧ ಯಾವ ಕ್ರಮ ಆಯ್ತು? ಪಾಕ್‌ ಮೇಲಿನ ಯುದ್ಧ ಯಾಕೆ ನಿಲ್ಲಿಸಿದರು? ಇದೆಲ್ಲದಕ್ಕೂ ಉತ್ತರ ಕೊಡಲಿ ಎಂದರು.