ಉದ್ಯಮಿಗಳ ಮನೆ ಬಾಗಿಲಿಗೆ ಸರ್ಕಾರ, ಜನಸ್ನೇಹಿ ಇಲಾಖೆಗೆ ಮೊದಲ ಆದ್ಯತೆ ಎಂದು ಸಚಿವ ಮುರುಗೇಶ್ ನಿರಾಣಿ ಘೋಷಣೆ ಮಾಡಿದ್ದಾರೆ.

ಬೆಂಗಳೂರು, (ಫೆ.18) : ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುವ ಉದ್ಯಮಿಗಳ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ‘ ಮನೆಬಾಗಿಲಿಗೆ’ ರಾಜ್ಯ ಸರ್ಕಾರ ಹೋಗುವ ವಿನೂತನ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್. ನಿರಾಣಿ ಅವರು ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗುರುವಾರ ವಿಕಾಸಸೌಧದಲ್ಲಿ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ಸ್ ನಿಯೋಗ ಭೇಟಿ ಮಾಡಿ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರಿಗೆ ಮನವಿ ಸಲ್ಲಿಸಿದರು. 

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ನಿರಾಣಿ ಅವರು, ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುವ ಉದ್ಯಮಿಗಳಿಗೆ ಅಗತ್ಯ ನೆರವು ನೀಡಲಿದ್ದೇವೆ. ‘ಉದ್ಯಮಸ್ನೇಹಿ’ ಮಾಡುವುದು ತಮ್ಮ ಮುಂದಿರುವ‌ ಮೊದಲ ಸವಾಲು ಎಂದು ತಿಳಿಸಿದರು.

ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಬದ್ಧನಾಗಿದ್ದೇನೆ. ಮರಳು, ಕಲ್ಲು ಕ್ವಾರಿ ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

2021- 2026ನೇ ಸಾಲಿನ ಹೊಸ ಮರಳು ನೀತಿ ಜಾರಿಗೆ ಬರಲಿದೆ. ಇದರಲ್ಲಿ ಅನೇಕ ಹೊಸ ಹೊಸ ಸುಧಾರಣೆಗಳನ್ನು ಜಾರಿಗೆ ಮಾಡುತ್ತಿದ್ದೇವೆ. ಕಟ್ಟಕಡೆಯ ಮನುಷ್ಯನಿಗೂ ಸುಲಭವಾಗಿ ಮರಳು ಸಿಗಬೇಕು ಎಂಬುವುದೇ ನಮ್ಮ ಮುಖ್ಯ ಉದ್ದೇಶ ಎಂದರು.

ಬಜೆಟ್‍ನಲ್ಲಿ ಕ್ವಾರಿ ಮತ್ತು ಸ್ಟೋರ್ ಕ್ರಷರ್ಸ್ ಓನರ್ಸ್ ಅಸೋಸಿಯೇಷನ್ ಮುಂದಿಟ್ಟಿರುವ ಬೇಡಿಕೆಗಳನ್ನು ಸೇರ್ಪಡೆ ಮಾಡಲಾಗುವುದು. ಯಾವುದೇ ಆತಂಕಪಡಬೇಕಾಗಿಲ್ಲ ಎಂದು ಅಭಯ ನೀಡಿದರು.