ಮಾ. 27ಕ್ಕೆ 81,000 ಕುರುಬರ ಹಟ್ಟಿ, ಗೊಲ್ಲರ ಹಟ್ಟಿ ಕುಟುಂಬಗಳಿಗೆ ಹಕ್ಕುಪತ್ರ ಭಾಗ್ಯ: ಆರ್.ಅಶೋಕ್
ಮಾ.27ರಂದು ಮುಖ್ಯಮಂತ್ರಿಗಳು ಚಿಕ್ಕಬಳ್ಳಾಪುರದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಹಕ್ಕು ಪತ್ರ ನೀಡಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಂಸದರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ: ಸಚಿವ ಆರ್.ಅಶೋಕ್
ಬೆಂಗಳೂರು(ಮಾ.24): ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಜಾಗದಲ್ಲಿ ಹಲವಾರು ವರ್ಷಗಳಿಂದ ವಾಸಿಸುತ್ತಿರುವ ಕುರುಬರ ಹಟ್ಟಿ, ಗೊಲ್ಲರ ಹಟ್ಟಿಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸಿ ಅಲ್ಲಿನ 81 ಸಾವಿರ ಕುಟುಂಬಗಳಿಗೆ ಮಾ.27ರಂದು ಹಕ್ಕು ಪತ್ರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಕಲಬುರಗಿಯಲ್ಲಿ ಲಂಬಾಣಿ ತಾಂಡಾಗಳಲ್ಲಿ ವಾಸಿಸುವ ಸುಮಾರು 52072 ಕುಟುಂಬಗಳಿಗೆ ಹಕ್ಕುಪತ್ರ ನೀಡುವ ಮೂಲಕ ದಾಖಲೆ ಸ್ಥಾಪಿಸಲಾಗಿತ್ತು. ಈಗ ಕುರುಬರ ಹಟ್ಟಿಹಾಗೂ ಗೊಲ್ಲರ ಹಟ್ಟಿಯಲ್ಲಿ ವಾಸಿಸುವ ಕುಟುಂಬಗಳಿಗೆ 23 ಜಿಲ್ಲೆಗಳಲ್ಲಿ ಮಾ.27ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳು ಹಕ್ಕುಪತ್ರ ನೀಡಲಿದ್ದಾರೆ ಎಂದರು.
ದಾವಣಗೆರೆ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸಲು ಒತ್ತಾಯ, ಪ್ರತಿಭಟನೆ
ಮಾ.27ರಂದು ಮುಖ್ಯಮಂತ್ರಿಗಳು ಚಿಕ್ಕಬಳ್ಳಾಪುರದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಹಕ್ಕು ಪತ್ರ ನೀಡಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಂಸದರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರಮುಖವಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ 12,076, ಬೆಳಗಾವಿ ಜಿಲ್ಲೆಯಲ್ಲಿ 11 ಸಾವಿರ, ತುಮಕೂರು 10 ಸಾವಿರ, ವಿಜಯನಗರ 5 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಈವರೆಗೆ 1672 ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮ ಎಂದು ಆದೇಶಿಸಲಾಗಿದೆ. 2488 ಪ್ರದೇಶಗಳ ಸಂಬಂಧ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ.