ಕಾಂಗ್ರೆಸ್ ಶಾಸಕರೋರ್ವರಿಗೆ ಕಾಂಗ್ರೆಸ್ ಮುಖಂಡರಿಂದಲೇ ರಾಜೀನಾಮೆ ನೀಡುವಂತೆ ಬೆದರಿಕೆ ಒಡ್ಡಲಾಗಿತ್ತು. ಅಲ್ಲದೇ ಅಪಹರಿಸಿ ಹೋಗುವ ಬೆದರಿಕೆಯನ್ನು ಒಡ್ಡಲಾಗಿದ್ದು ಇದೀಗ ಈಓ ಕಾಂಗ್ರೆಸ್ ಶಾಸಕ ನಾಪತ್ತೆಯಾಗಿದ್ದಾರೆ. ಅವರನ್ನು ಪತ್ತೆ ಹಚ್ಚಲು ರಾಜ್ಯ ಗೃಹ ಇಲಾಖೆಗೆ ಹೈ ಕೋರ್ಟ್ ನೋಟಿಸ್ ಜಾರಿ ಮಾಡಿದೆ. 

ಬೆಂಗಳೂರು : ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಂದ ಅಕ್ರಮ ಬಂಧನಕ್ಕೆ ಗುರಿಯಾಗಿರುವ ಅಥಣಿ ಶಾಸಕ ಮಹೇಶ ಕುಮಟಳ್ಳಿ ಅವರನ್ನು ಪತ್ತೆಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಪೊಲೀಸರಿಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ಸಂಬಂಧ ರಾಜ್ಯ ಗೃಹ ಇಲಾಖೆಗೆ ಹೈಕೋರ್ಟ್‌ ಸೋಮವಾರ ನೋಟಿಸ್‌ ಜಾರಿಗೊಳಿಸಿದೆ.

Add Asianetnews Kannada as a Preferred SourcegooglePreferred

ಬೆಳಗಾವಿ ಜಿಲ್ಲೆಯ ಅಥಣಿಯ ವಕೀಲ ಹಾಗೂ ಯುವ ಕಾಂಗ್ರೆಸ್‌ ಕಾರ್ಯದರ್ಶಿ ಪ್ರಮೋದ ದಯಾನಂದ ಹಿರೇಮನಿ ಸಲ್ಲಿಸಿದ್ದ ಹೇಬಿಯಸ್‌ ಕಾಪರ್ಸ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎನ್‌. ಫಣೀಂದ್ರ ಹಾಗೂ ನ್ಯಾಯಮೂರ್ತಿ ಕೆ. ನಟರಾಜನ್‌ ಅವರಿದ್ದ ವಿಭಾಗೀಯ ಪೀಠ, ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ, ಗೃಹ ಇಲಾಖೆ ಹಾಗೂ ಅಥಣಿ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಿತು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ರಮೇಶ ಜಾರಕಿಹೊಳಿ ತಮ್ಮ ಮೇಲೆ ತುಂಬಾ ಒತ್ತಡ ಹಾಕುತ್ತಿದ್ದಾರೆ ಹಾಗೂ ಅಪಹರಿಸಿಕೊಂಡು ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹೇಶ ಕುಮಟಳ್ಳಿ ಈಚೆಗೆ ತಮ್ಮ ಮುಂದೆ ಹೇಳಿಕೊಂಡಿದ್ದರು. ಈ ಮಧ್ಯೆ ಒಂದು ತಿಂಗಳಿಂದ ಶಾಸಕರು ತಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ. ಅಥಣಿಯಲ್ಲೂ ಕಾಣಿಸಿಕೊಂಡಿಲ್ಲ. ಈ ಬಗ್ಗೆ ಶಾಸಕ ಕುಮಟಹಳ್ಳಿ ಅವರ ಕುಟುಂಬದವರು, ಸಂಬಂಧಿಕರು, ಆಪ್ತರ ಬಳಿ ಕೇಳಿದರೂ ಸ್ಪಷ್ಟಉತ್ತರ ಕೊಡುತ್ತಿಲ್ಲ. ಮತ್ತೊಂದೆಡೆ ರಮೇಶ ಜಾರಕಿಹೊಳಿಯವರ ಬಗ್ಗೆ ಮಹೇಶ ಕುಮಟಳ್ಳಿ ಕೆಲ ಸಂಶಯದ ಹೇಳಿಕೆ ನೀಡಿದ್ದಾರೆ. ಅದನ್ನು ಗಮನಿಸಿದರೆ ಅವರೇ ಶಾಸಕ ಮಹೇಶ್‌ರನ್ನು ಬಲವಂತವಾಗಿ ಕರೆದುಕೊಂಡು ಹೋಗಿ, ಅಕ್ರಮ ಬಂಧನದಲ್ಲಿಟ್ಟಿದ್ದಾರೆ ಎಂಬ ಸಂಶಯ ಕಾಡುತ್ತಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.