ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಹಾವೇರಿಯಲ್ಲಿ ನಿಲುಗಡೆಗೆ ಆದೇಶಿಸಲಾಗಿದೆ. ಇದು ಹಾವೇರಿ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಇದರಿಂದ ಜಿಲ್ಲೆಯ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಉತ್ತೇಜನ ಸಿಗಲಿದೆ.

(ಹಾವೇರಿ ಏ.2): ಧಾರವಾಡ-ಬೆಂಗಳೂರು ಮಧ್ಯೆ ಸಂಚರಿಸುವ ವಂದೇ ಭಾರತ ರೈಲು ಹಾವೇರಿಯಲ್ಲಿ ನಿಲುಗಡೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಮಾಜಿ ಮುಖ್ಯಮಂತ್ರಿ ಹಾಗೂ ಪ್ರಸ್ತುತ ಸಂಸದರಾಗಿರುವ ಬಸವರಾಜ ಬೊಮ್ಮಾಯಿ ಅವರು ತಮ್ಮ ಎಕ್ಸ್ ಖಾತೆಯ ಮೂಲಕ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಭಾರತದಲ್ಲಿ ರೈಲ್ವೇ ಕ್ರಾಂತಿ

ಕಳೆದ ಹತ್ತು ವರ್ಷಗಳಲ್ಲಿ ಭಾರತದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ, ವಿಶೇಷವಾಗಿ ರೈಲ್ವೇ ಸಂಪರ್ಕ, ಡಿಜಿಟಲ್, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ದೊಡ್ಡ ಕ್ರಾಂತಿಯಾಗಿದೆ. ಜಗತ್ತಿನ ಅತಿ ದೊಡ್ಡ ರೈಲ್ವೇ ಜಾಲವನ್ನು ಹೊಂದಿರುವ ಭಾರತದಲ್ಲಿ, ಕರ್ನಾಟಕವು ರೈಲ್ವೇ ಲೈನ್‌ಗಳಲ್ಲಿ ಗಣನೀಯ ಪ್ರಗತಿ ಕಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಕೇಂದ್ರ ಸರ್ಕಾರವು ಕರ್ನಾಟಕದ ರೈಲ್ವೇ ಯೋಜನೆಗಳ ಅಭಿವೃದ್ಧಿಗೆ ಕಳೆದ ವರ್ಷ 7 ಸಾವಿರ ಕೋಟಿ ರೂಪಾಯಿ ಮತ್ತು ಈ ವರ್ಷವೂ 7 ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದೆ. ರೈಲ್ವೇ ಲೈನ್‌ಗಳ ವಿದ್ಯುದೀಕರಣದಿಂದಾಗಿ ಅತಿ ವೇಗದ ವಂದೇ ಭಾರತ ರೈಲು ಕರ್ನಾಟಕದಲ್ಲಿ ಆರಂಭವಾಗಿದೆ. ಇದಕ್ಕೆ ಪ್ರಧಾನಮಂತ್ರಿ ಮೋದಿಯವರ ದೂರದೃಷ್ಟಿಯೇ ಕಾರಣ ಎಂದು ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ:ಸಿಎಂ 16ನೇ ಬಜೆಟ್, ಜನರ ಮೇಲೆ ಸಾಲ ಹೊರಿಸಿದ್ದೇ ಸಾಧನೆ, ಎಳೆಎಳೆಯಾಗಿ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ, ಇಲ್ಲಿದೆ ಸಂಪೂರ್ಣ ವಿವರ!

ವಂದೇ ಭಾರತ ರೈಲು: ಬೆಂಗಳೂರು-ಧಾರವಾಡ

ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ ರೈಲು ಕೇವಲ ಐದು ಗಂಟೆಗಳಲ್ಲಿ ತನ್ನ ಗಮ್ಯಸ್ಥಾನವನ್ನು ತಲುಪುತ್ತದೆ. ಈ ರೈಲು ಈ ಹಿಂದೆ ತುಮಕೂರು, ದಾವಣಗೆರೆ ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ಮಾತ್ರ ನಿಲುಗಡೆಯಾಗುತ್ತಿತ್ತು. ಆದರೆ, ಹಾವೇರಿ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ಈ ರೈಲು ಹಾವೇರಿಯಲ್ಲೂ ನಿಲುಗಡೆಯಾಗಬೇಕೆಂಬ ಒತ್ತಾಸೆಗೆ ಈಗ ಈಡೇರಿಕೆಯಾಗಿದೆ.

ಹಾವೇರಿಯ ಮಹತ್ವ

ಹಾವೇರಿ ಜಿಲ್ಲೆಯು ಶಿರ್ಸಿ, ಕಾರವಾರದ ಕಡಲ ಕರ್ನಾಟಕ ಹಾಗೂ ಬಳ್ಳಾರಿ ಸೇರಿದಂತೆ ಕಲ್ಯಾಣ ಕರ್ನಾಟಕದ ನಡುವೆ ಸಂಪರ್ಕ ಕೇಂದ್ರವಾಗಿದೆ. ಈ ಹಿನ್ನೆಲೆಯಲ್ಲಿ ಹಾವೇರಿ ಮಹಾಜನತೆ ಮತ್ತು ಚೇಂಬರ್ ಆಫ್ ಕಾಮರ್ಸ್‌ನಿಂದ ಈ ಬೇಡಿಕೆ ಇತ್ತು. ಜನರ ಒತ್ತಡದ ಮೇರೆಗೆ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮತ್ತು ರಾಜ್ಯ ರೈಲ್ವೇ ಸಚಿವ ವಿ. ಸೋಮಣ್ಣ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಹಾವೇರಿಯಲ್ಲಿ ರೈಲು ನಿಲುಗಡೆಗೆ ಆದೇಶಿಸಿದ್ದಾರೆ.

ಟ್ರಯಲ್ ಆಧಾರದಲ್ಲಿ ಆರಂಭ

ಪ್ರಸ್ತುತ ಈ ನಿಲುಗಡೆ ಟ್ರಯಲ್ ಆಧಾರದ ಮೇಲೆ ಆರಂಭವಾಗಲಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾದರೆ ಇದನ್ನು ಕಾಯಂಗೊಳಿಸಲಾಗುವುದು. ರೈಲು ನಿಲುಗಡೆಯ ಉದ್ಘಾಟನೆ ದಿನಾಂಕವನ್ನು ಶೀಘ್ರದಲ್ಲಿ ನಿಗದಿಪಡಿಸಲಾಗುವುದು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ರಾಹುಲ್ ಗಾಂಧಿ ಮುಂದಿನ ಪ್ರಧಾನಿ ಗ್ಯಾರಂಟಿ, ಬಿಜೆಪಿ ಸೋಲುತ್ತೆ, ಕಾಂಗ್ರೆಸ್ ಗೆಲ್ಲುತ್ತೆ, ಸಲೀಂ ಭವಿಷ್ಯ!

ಜನತೆಗೆ ಅಭಿನಂದನೆ

ಹಾವೇರಿಯಲ್ಲಿ ವಂದೇ ಭಾರತ ರೈಲು ನಿಲುಗಡೆಗೆ ಯಶಸ್ವಿಯಾದ ಜನತೆಗೆ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಜನರು ಈ ರೈಲನ್ನು ಹೆಚ್ಚಾಗಿ ಬಳಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಈ ಒಂದು ನಿರ್ಧಾರವು ಹಾವೇರಿ ಜಿಲ್ಲೆಯ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ನೀಡಲಿದೆ ಎಂಬ ನಿರೀಕ್ಷೆ ಇದೆ.