ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್‌ ಅವರ ಮುಂಬಡ್ತಿಗೆ ಲಂಚ ಪಡೆದ ಆರೋಪವನ್ನು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ತಳ್ಳಿಹಾಕಿದ್ದಾರೆ. ಆರೋಪಕ್ಕೆ ಯಾವುದೇ ದಾಖಲೆ ಸಲ್ಲಿಸಿಲ್ಲವೆಂದೂ, ನಿಯಮಾನುಸಾರವೇ ಬಡ್ತಿ ನೀಡಲಾಗಿದೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.  

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಿಂದಿನ ಆಯುಕ್ತ ಡಿ.ಬಿ.ನಟೇಶ್‌ ಅವರಿಗೆ ಮುಂಬಡ್ತಿ ನೀಡಲು ಕೋಟ್ಯಂತರ ರುಪಾಯಿ ಪಡೆದಿರುವ ಆರೋಪಕ್ಕೆ ಪೂರಕವಾಗಿ ಮೈಸೂರಿನ ಸ್ನೇಹಮಹಿ ಕೃಷ್ಣ ಅವರು ಯಾವುದೇ ದಾಖಲೆ ಸಲ್ಲಿಸಿಲ್ಲ. ಆಧಾರವಿಲ್ಲದ ಸುಳ್ಳು ಮತ್ತು ಕ್ಷುಲ್ಲಕ ಆರೋಪ ಮಾಡುವ ಮೂಲಕ ಅಧಿಕಾರಿಗಳ ಮಾನ ಹಾನಿ ಮಾಡಿದ್ದು, ಈ ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಉತ್ತರಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಗೆ ಮುಖ್ಯ ಕಾರ್ಯದರ್ಶಿ ಉತ್ತರ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ನಿಯಮ ಉಲ್ಲಂಘಿಸಿ 14 ನಿವೇಶನ ನೀಡಿಕೆಯಲ್ಲಿ ಅಕ್ರಮ ಲಾಭ ಮಾಡಿಕೊಟ್ಟ ಆರೋಪದ ಮೇಲೆ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ ಅಡಿ ಡಿ.ಬಿ. ನಟೇಶ್‌ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಮುಂಬಡ್ತಿ ನೀಡಿರುವುದಕ್ಕೆ ಆಕ್ಷೇಪಿಸಿ, ಸ್ಪಷ್ಟೀಕರಣ ಹಾಗೂ ದೃಢೀಕೃತ ದಾಖಲೆ ನೀಡುವಂತೆ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ಪರಿಶೀಲಿಸಿ ಮುಖ್ಯಕಾರ್ಯದರ್ಶಿಗಳು ಸುದೀರ್ಘ ಉತ್ತರ ನೀಡಿದ್ದಾರೆ.

ಪ್ರಮುಖವಾಗಿ ಕರ್ನಾಟಕ ನಾಗರೀಕ ಸೇವಾ ನಿಯಮ 1957ರ ನಿಯಮ 10 ಅಡಿ ಪ್ರಸ್ತಾಪಿಸಿರುವ ಯಾವುದೇ ಕಾರಣಗಳು ಕಂಡು ಬಾರದ ಕಾರಣ ಡಿ.ಬಿ.ನಟೇಶ್‌ ಅವರನ್ನು ಅಮಾನತುಗೊಳಿಸಿಲ್ಲ. ನಿಯಮಾವಳಿ ಪ್ರಕಾರ ಅವರಿಗೆ ಮುಂಬಡ್ತಿ ನೀಡಲಾಗಿದೆ. ಅಲ್ಲದೆ, ನಟೇಶ್‌ ಅವರ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತಕ್ಕೆ ಪೂರ್ವಾನುಮತಿ ನೀಡಿ ಆದೇಶಿಸಲಾಗಿದೆ. ನಿಯಮಾನುಸಾರ ಮುಂದಿನ ಕ್ರಮ ವಹಿಸಲಾಗುತ್ತಿದೆ ಎಂದು ಶಾಲಿನಿ ರಜನೀಶ್‌ ಉತ್ತರದಲ್ಲಿ ಸ್ಪಷ್ಟಪಡಿಸಿದ್ದಾರೆ.

ಡಿ.ಬಿ.ನಟೇಶ್‌ ಅವರಿಂದ ಕೋಟ್ಯಂತರ ರು. ಪಡೆದು ಸರ್ಕಾರ ಕ್ರಮ ಕೈಗೊಳ್ಳದಂತೆ ರಕ್ಷಣೆ ನೀಡಿದ್ದೀರಿ ಎಂಬ ಆರೋಪ ಸಂಬಂಧ ಸೂಕ್ತ ಸಾಕ್ಷ್ಯಧಾರ ಒದಗಿಸಿದ್ದಲ್ಲಿ ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಿನಿ ರಜನೀಶ್‌ ಉತ್ತರದಲ್ಲಿ ವಿವರಿಸಿದ್ದಾರೆ.

ಮುಡಾ ಬಿ ರಿಪೋರ್ಟ್‌ಗೆ ₹4 ಕೋಟಿ ಲಂಚ: ಸ್ನೇಹಮಯಿ ಕೃಷ್ಣ ಆರೋಪ

ಬೆಂಗಳೂರು: ಮುಡಾ ಹಗರಣದಲ್ಲಿ ನಾಲ್ವರು ಆರೋಪಿಗಳ ವಿರುದ್ಧ ‘ಬಿ’ ರಿಪೋರ್ಟ್‌ ಸಲ್ಲಿಸಲು ಲೋಕಾಯುಕ್ತ ತನಿಖಾಧಿಕಾರಿಗಳು ಲಂಚ ಪಡೆದ ಗಂಭೀರ ಆರೋಪ ಕೇಳಿ ಬಂದಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಈ ಆರೋಪ ಮಾಡಿದ್ದು, ಈ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಕೋರಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಲೋಕಾಯುಕ್ತ ಪರ ವಿಶೇಷ ಅಭಿಯೋಜಕರು ಸಮಯ ಕೋರಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಫೆ.20ಕ್ಕೆ ಮುಂದೂಡಿತು. ಇದಕ್ಕೂ ಮುನ್ನ ದೂರುದಾರ ಸ್ನೇಹಮಯಿ ಕೃಷ್ಣ ಅವರು, ದೂರು ಅರ್ಜಿ ಜೊತೆಗೆ ತನಿಖಾಧಿಕಾರಿಗಳು ಲಂಚ ಪಡೆದಿರುವ ಬಗ್ಗೆ ಕೆಲ ದಾಖಲೆಗಳು ಹಾಗೂ ಸಿ.ಡಿ.ಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಇದೇ ವೇಳೆ ಮುಡಾ ಹಗರಣ ಸಂಬಂಧ ಅಂತಿಮ ತನಿಖಾ ವರದಿಯನ್ನು ಜ.20 ಅಥವಾ ಅದಕ್ಕೂ ಮೊದಲು ಸಲ್ಲಿಸುವಂತೆ ನ್ಯಾಯಾಯಲವು ಲೋಕಾಯುಕ್ತ ತನಿಖಾಧಿಕಾರಿಗೆ ಸೂಚಿಸಿತು.

4.35 ಕೋಟಿ ರು. ಲಂಚ ಪಡೆದ ಆರೋಪ:

ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, ಮುಡಾ ಹಗರಣದಲ್ಲಿ ಲೋಕಾಯುಕ್ತ ತನಿಖಾಧಿಕಾರಿಗಳು ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್‌ ಅವರಿಂದ 4.35 ಕೋಟಿ ರು. ಲಂಚ ಪಡೆದು ನಾಲ್ವರು ಆರೋಪಿಗಳ ವಿರುದ್ಧ ಬಿ ರಿಪೋರ್ಟ್‌ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ನಟೇಶ್‌ ಅವರ ವಿರುದ್ಧ ಲೋಕಾಯುಕ್ತ ತನಿಖಾಧಿಕಾರಿಗಳು ಈವರೆಗೂ ಯಾವುದೇ ಕ್ರಮ ಜರುಗಿಸದೆ ಆತನ ರಕ್ಷಣೆಗೆ ನಿಂತಿದ್ದಾರೆ ಎಂದು ಆರೋಪಿಸಿದರು.

ಮೈಸೂರಿನ ಸ್ಪೋರ್ಟ್ಸ್‌ ಕ್ಲಬ್‌ವೊಂದರಲ್ಲಿ ನಟೇಶ್‌ ಅವರು ಲೋಕಾಯುಕ್ತ ಅಧಿಕಾರಿಗೆ ಲಂಚ ನೀಡಿರುವ ಮಾಹಿತಿ ಇದೆ. 4.35 ಕೋಟಿ ರು. ಲಂಚ ನೀಡಿರುವ ಬಗ್ಗೆ ನಟೇಶ್‌ ಅವರ ಕೈ ಬರಹದಲ್ಲಿ ಬರೆದಿರುವ ದಾಖಲೆ ಸಿಕ್ಕಿದೆ. ಈ ದಾಖಲೆ ಹಾಗೂ ಪೂರಕ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದೇನೆ. ಈ ಸಂಬಂಧ ತನಿಖೆ ನಡೆಸುವಂತೆ ಮನವಿ ಮಾಡಿದ್ದೇನೆ. ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಜ.20ಕ್ಕೆ ವಿಚಾರಣೆ ಮುಂದೂಡಿದೆ ಎಂದು ಹೇಳಿದರು.