ಕಾಡುಪ್ರಾಣಿಗಳ ಸಂಖ್ಯೆ ಹೆಚ್ಚಳದಿಂದಾಗಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ತಿಳಿಸಿದ್ದಾರೆ. ರೈಲ್ವೇ ಬ್ಯಾರಿಕೇಡ್ ಅಳವಡಿಕೆಯ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಅವರು ಹೇಳಿದರು.
ಎಚ್.ಡಿ.ಕೋಟೆ (ಸೆ.1): ಕಾಡಿನ ಸುರಕ್ಷೆತೆಯತ್ತ ಹೆಚ್ಚು ಒತ್ತು ಕೊಟ್ಟಿರುವ ಹಿನ್ನೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡುಪ್ರಾಣಿಗಳು ಹೆಚ್ಚಿನ ಪ್ರಮಾಣದಲ್ಲಿರುವ ಕಾರಣ ಮಾನವ ಮತ್ತು ಪ್ರಾಣಿ ಸಂಘರ್ಷ ಹೆಚ್ಚಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ತಿಳಿಸಿದರು.
ತಾಲೂಕಿನ ಮಾನಿಮೂಲೆ ಹಾಡಿಯಲ್ಲಿ ಆಯೋಜಿಸಿದ್ದ 125ನೇ ಮನ್ ಕಿ ಬಾತ್ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ರಾಜ್ಯದ ಅರಣ್ಯದ ಗಡಿ ಭಾಗಗಳಲ್ಲಿ ಸಾವಿರಾರು ಕಿ.ಮೀ. ರೈಲ್ವೇ ಬ್ಯಾರಿಕೇಡ್ ಅಳವಡಿಸಲು ಯೋಜನೆ ರೂಪಿಸಲಾಗುತ್ತಿದೆ. ಯೋಜನೆ ರೂಪುಗೊಂಡ ಬಳಿಕ ಅನುಷ್ಠಾನದ ಬಗ್ಗೆ ವಿಶೇಷ ಕಾಳಜಿ ವಹಿಸಲಾಗುವುದು ಎಂದರು.
ಪ್ರಧಾನಿಯವರ ಕಾರ್ಯಕ್ರಮಗಳು ಮತ್ತು ಅವರ ಅಭಿವೃದ್ಧಿ ಕೆಲಸಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೂ ಕೂಡ ತಲುಪುತ್ತಿವೆ. ಅದಕ್ಕೆ ನಿದರ್ಶನ ಎಂಬಂತೆ ಇಂದು ನಡೆದ ಕಾರ್ಯಕ್ರಮವೇ ಸಾಕ್ಷಿ ಎಂದರು.
ನಾಗರಹೊಳೆ ಅರಣ್ಯದಲ್ಲಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ ವಿಚಾರ. ದೇಶದ ಕಟ್ಟ ಕಡೆಯ ವ್ಯಕ್ತಿಗೂ ಮೋದಿ ಅವರ ಅಭಿವೃದ್ಧಿ ಸಂದೇಶ ರವಾನಿಸುವ ದೃಷ್ಟಿಯಿಂದ ಈ ಕಾರ್ಯಕ್ರಮ ಆಯೋಜನೆಗೊಂಡಿದ್ದು ಅದರಂತೆ ಸಾಕಾರಗೊಂಡಿದೆ ಎಂದು ಅವರು ಹೇಳಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕಂಬ್ರಳ್ಳಿ ಸುಬ್ಬಣ್ಣ ಮಾತನಾಡಿ, ಎಚ್.ಡಿ. ಕೋಟೆ ತಾಲ್ಲೂಕಿನ ಮಾನಿಮೂಲೆ ಹಾಡಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ನಮಗೆ ಹಲವು ಸಮಸ್ಯೆಗಳು ಎದುರಾದವು, ಆ ಸಮಸ್ಯೆಗಳಿಗೆ ಪರಿಹಾರಕಂಡುಕೊಂಡು ಕಾರ್ಯಕ್ರಮವನ್ನು ಹಾಡಿಯಲ್ಲಿ ಆಯೋಜನೆ ಮಾಡಿದ್ದೇವೆ. ಜೊತೆಗೆ ಇಲ್ಲಿನ ಸಮಸ್ಯೆ ಗುರುತಿಸಿ ಸಂಸದರಿಗೆ ಮಾಹಿತಿ ನೀಡಲಾಗಿದ್ದು, ಕೇಂದ್ರ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಲಾಗುವುದು ಎಂದರು.
