Asianet Suvarna News Asianet Suvarna News

ನಂದಿ ಗಿರಿಧಾಮ ರೋಪ್ ವೇ ಕಾಮಗಾರಿ ಶೀಘ್ರವೇ ಆರಂಭ: ಸಚಿವ ಎಂ.ಸಿ.ಸುಧಾಕರ್‌

ವಿಶ್ವ ವಿಖ್ಯಾತ ಪ್ರವಾಸಿತಾಣ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದಲ್ಲಿ ಮೂರು ಕಿ.ಮೀ ಉದ್ಧದ ರೋಪ್ ವೇ ಅಳವಡಿಸಲು ಅಗತ್ಯವಿರುವ ಕಾಮಗಾರಿಗಳನ್ನು ಶೀಘ್ರವೇ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. 

Nandi Hills Ropeway work will start soon Says Minister Dr MC Sudhakar gvd
Author
First Published Oct 28, 2023, 4:45 AM IST

ಚಿಕ್ಕಬಳ್ಳಾಪುರ (ಅ.28): ವಿಶ್ವ ವಿಖ್ಯಾತ ಪ್ರವಾಸಿತಾಣ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದಲ್ಲಿ ಮೂರು ಕಿ.ಮೀ ಉದ್ಧದ ರೋಪ್ ವೇ ಅಳವಡಿಸಲು ಅಗತ್ಯವಿರುವ ಕಾಮಗಾರಿಗಳನ್ನು ಶೀಘ್ರವೇ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ನಂದಿ ಗಿರಿದಾಮದ ತಟದಲ್ಲಿ ಶುಕ್ರವಾರ ಸ್ಥಳಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿಗಿರಿಧಾಮದಲ್ಲಿ ಮೂರು ಕಿ.ಮೀ ಉದ್ದದ ರೋಪ್ ವೇಯನ್ನು ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧರಿಸಿ ಹಲವು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದೆ ಎಂದರು.

18 ತಿಂಗಳಲ್ಲಿ ರೋಪ್‌ ವೇ ಸಿದ್ಧ: ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲಾಗಿದ್ದು, ನಂದಿ ಗಿರಿಧಾಮದಲ್ಲಿರುವ ಎಲ್ಲಾ ಆಸ್ತಿಗಳನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸುವ ಪ್ರಕ್ರಿಯೆಗಳು ನಡೆಯುತ್ತಿವೆ. ರೋಪ್ ವೇ ನಿರ್ಮಾಣಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ವ್ಯಾಪ್ತಿಯ 9 ಎಕರೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರಕ್ಕೆ ಸೇರಿದ 7 ಎಕರೆ ಜಮೀನನ್ನು ಹಸ್ತಾಂತರ ಮಾಡುವ ಪ್ರಕ್ರಿಯೆಯೂ ಪ್ರಗತಿಯಲ್ಲಿದೆ. 18 ತಿಂಗಳ ಅವಧಿಯಲ್ಲಿ ರೋಪ್ ವೇ ನಿರ್ಮಾಣವಾಗಲಿದೆ ಎಂದರು. ಬಂಡವಾಳ ಹೂಡುವ ರೋಪ್ ವೇ ನಿರ್ಮಾಣ ಸಂಸ್ಥೆಗೇ 30 ವರ್ಷಗಳ ಕಾಲ ನಿರ್ವಹಣೆ ಜವಾಬ್ದಾರಿಯನ್ನು ನೀಡಲಾಗಿದೆ. ಮೂರು ಕಿ.ಮೀ ಉದ್ದದ ರೋಪ್ ವೇ ನಲ್ಲಿ 50 ಕೇಬಲ್ ಕಾರ್ ಗಳು ಹೋಗುವ ಮತ್ತು 50 ಕೇಬಲ್ ಕಾರ್ ಗಳು ಬರುವ ವ್ಯವಸ್ಥೆಯಿದ್ದು, ಪ್ರತಿ ಕಾರ್ ನಲ್ಲಿ ಆರು ಜನರು ಕುಳಿತುಕೊಳ್ಳಲು ಅವಕಾಶವಿರುತ್ತದೆ ಎಂದರು.

ಸಿದ್ದು Vs ಎಚ್​ಡಿಕೆ: ನಾನೇನು ಸಿಎಂ ವಕ್ತಾರನಲ್ಲ ಎಂದ ಬಿ.ಕೆ.ಹರಿಪ್ರಸಾದ್‌

ಯೋಜನೆ ವೆಚ್ಚ ₹115 ಕೋಟಿಗೆ ಏರಿಕೆ: ರೋಪ್ ವೇ ಕಾಮಗಾರಿ ಅಭಿವೃದ್ಧಿಗೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ಡೈನಾಮಿಕ್ಸ್ ರೋಪ್‌ವೇ ಪ್ರೈವೇಟ್ ಲಿಮಿಟೆಡ್ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಮಾದರಿಯಲ್ಲಿ ನಂದಿ ಬೆಟ್ಟದಲ್ಲಿ ರೋಪ್‌ವೇ ಅಭಿವೃದ್ಧಿಪಡಿಸುವ ಈ ಯೋಜನೆಗೆ 93.40 ಕೋಟಿ ರು. ವೆಚ್ಚ ಅಂದಾಜಿಸಲಾಗಿತ್ತು, ಪ್ರಸ್ತುತ ಈ ವೆಚ್ಚ 115 ಕೋಟಿಗೆ ಏರಲಿದೆ ಎಂದರು. ನಿರ್ಮಿತ ರೋಪ್ ವೇ ಗೆ ಕೆಳಗಿನ ನಿಲ್ದಾಣದಿಂದ ಮೇಲಿನ ನಿಲ್ದಾಣ ತಲುಪಲು ಅಂದಾಜು 13ರಿಂದ 15 ನಿಮಿಷಗಳು ಬೇಕಾಗುತ್ತದೆ. ಪ್ರತಿ ಗಂಟೆಗೆ ಅಂದಾಜು 1000 ಜನರನ್ನು ಕೆಳಗಿನ ನಿಲ್ದಾಣದಿಂದ ಮೇಲಿನ ನಿಲ್ದಾಣಕ್ಕೆ ಕರೆದೊಯ್ಯಬಹುದು.

ರಾಮನಗರದ ಕುರಿತು ಎಚ್‌ಡಿಕೆಗೆ ಪರಿಜ್ಞಾನ ಇಲ್ಲ: ಡಿ.ಕೆ.ಶಿವಕುಮಾರ್‌

ಪ್ರವಾಸಿ ತಾಣಗಳ ಅಭಿವೃದ್ಧಿ: ದೇವನಹಳ್ಳಿ ಕೋಟೆ, ನಂದಿ, ಭೋಗನಂದೀಶ್ವರ, ಘಾಟಿ ಸುಬ್ರಹ್ಮಣ್ಯ, ವಿದುರಾಶ್ವತ್ಥ, ಮುದ್ದೇನಹಳ್ಳಿ ಮುಂತಾದ ಪ್ರವಾಸಿ ತಾಣಗಳು ಅಭಿವೃದ್ಧಿಯಾಗಲಿವೆ.ಈ ನಿಟ್ಟಿನಲ್ಲಿ ಟ್ಯೂರಿಸ್ಟ್ ಸರ್ಕಿಟ್ ನಿರ್ಮಾಣಕ್ಕೆ ಯೋಜಿಸಲಾಗಿದೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಹಳ ಹತ್ತಿರವಿರುವ ಕಾರಣ ದೇಶಿಯ ಹಾಗೂ ವಿದೇಶಿ ಪ್ರವಾಸಿಗರನ್ನು ಸೆಳೆಯಲಿದೆ ಎಂದು ಮಾಹಿತಿ ನೀಡಿದರು. ಈ ವೇಳೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಮ್ ಪ್ರಶಾಂತ್ ಮನೋಹರ್, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, ಶಾಸಕ ಪ್ರದೀಪ್ ಈಶ್ವರ್, ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಜಿಪಂ ಸಿಇಒ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಪಂ ಸಿಇಒ ಡಾ. ಅನುರಾಧ, ಎಸ್ಪಿ ಡಿ.ಎಲ್.ನಾಗೇಶ್, ಅರಣ್ಯ ಸಂರಕ್ಷಣಾಧಿಕಾರಿ ರಮೇಶ್‌, ಮತ್ತಿತರರು ಇದ್ದರು.

Follow Us:
Download App:
  • android
  • ios