ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ನವೋದಯ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಕೋಚಿಂಗ್ ನಡೆಸುವ ಶಿಕ್ಷಕರೇ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿ, ಪೋಷಕರು ಬಿಇಒಗೆ ತರಾಟೆ.
ಬೀದರ್(ಡಿ.13): ರಾಜ್ಯದಲ್ಲಿ ನಡೆಯುತ್ತಿರುವ ಪರೀಕ್ಷೆಗಳಲ್ಲಿ ಅಕ್ರಮಗಳ ಸರಣಿ ಮುಂದುವರೆದಿದ್ದು, ಇದೀಗ ನವೋದಯ ಶಾಲೆಗೆ 6ನೇ ತರಗತಿ ಪ್ರವೇಶಕ್ಕಾಗಿ ನಡೆದ ಅರ್ಹತಾ ಪರೀಕ್ಷೆಯಲ್ಲಿಯೂ ಅಕ್ರಮಗಳು ನಡೆದಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಕುರಿತು ಆಕ್ರೋಶಗೊಂಡ ವಿದ್ಯಾರ್ಥಿಗಳ ಪೋಷಕರು, ಪರೀಕ್ಷಾ ಕೇಂದ್ರದ ಮುಂದೆಯೇ ಬಸವಕಲ್ಯಾಣದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಓ) ಸಿದ್ದವೀರಯ್ಯ ರುದ್ನೂರ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಬಸವಕಲ್ಯಾಣದ ಪರೀಕ್ಷಾ ಕೇಂದ್ರದ ಮುಂದೆ ಹೈಡ್ರಾಮಾ
ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ಖೂಬಾ ಕಾಲೇಜ್ ಪರೀಕ್ಷಾ ಕೇಂದ್ರದ ಎದುರು ಈ ಹೈಡ್ರಾಮಾ ನಡೆದಿದೆ. ಪರೀಕ್ಷೆಯ ವ್ಯವಸ್ಥೆಯಲ್ಲಿ ಲೋಪ ಕಂಡುಬಂದಿದ್ದು, ಕೆಲ ಶಿಕ್ಷಕರು ವ್ಯವಸ್ಥಿತವಾಗಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕಾರ ನೀಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಕೋಚಿಂಗ್ ನಡೆಸುವ ಶಿಕ್ಷಕರು ಪರೀಕ್ಷಾ ಸೆಂಟರ್ನಲ್ಲಿ ಯಾಕೆ?
ಕೋಚಿಂಗ್ ಸೆಂಟರ್ಗಳಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಕೆಲವು ಶಿಕ್ಷಕರು ಸಹಾಯ ಮಾಡುತ್ತಿದ್ದಾರೆ. ಕೋಚಿಂಗ್ ನಡೆಸುವ ಶಿಕ್ಷಕರನ್ನು ಪರೀಕ್ಷಾ ಕೇಂದ್ರದೊಳಗೆ ಏಕೆ ಬಿಡಲಾಗಿದೆ ಎಂದು ಪೋಷಕರು ಬಿಇಓ ಅವರನ್ನು ನೇರವಾಗಿ ಪ್ರಶ್ನಿಸಿದ್ದಾರೆ. ಕೋಚಿಂಗ್ ಪಡೆದ ವಿದ್ಯಾರ್ಥಿಗಳಿಗೆ ಈ ರೀತಿ ಸಹಕಾರ ನೀಡುವುದರಿಂದ ಸಾಮಾನ್ಯ, ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೋಷಕರ ತೀವ್ರ ವಿರೋಧ, ಆರೋಪಗಳ ನಡುವೆಯೂ ಬಿಇಓ ಸಿದ್ದವೀರಯ್ಯ ರುದ್ನೂರ ಅವರು ಯಾವುದೇ ಅಕ್ರಮ ನಡೆದಿಲ್ಲ ಎಂದು ಆರೋಪಗಳನ್ನು ಅಲ್ಲಗಳೆದಿದ್ದಾರೆ. ಆದರೆ, ಈ ಘಟನೆಯು ಪರೀಕ್ಷಾ ಪಾರದರ್ಶಕತೆ ಬಗ್ಗೆ ಮತ್ತೊಮ್ಮೆ ಸಾರ್ವಜನಿಕ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

