ಹಳ್ಳಿ ಭೂಮಿ ಕಬಳಿಸಿದರೆ ಕ್ರಿಮಿನಲ್ ಪ್ರಕರಣ ಇಲ್ಲ: ಸಚಿವ ಸಂಪುಟ ನಿರ್ಧಾರ
ಕರ್ನಾಟಕ ಭೂಕಬಳಿಕೆ ಕಾಯ್ದೆ 2011ರ 2ಡಿಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ: ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ
ಬೆಂಗಳೂರು(ಆ.26): ಸರ್ಕಾರಿ ಭೂಮಿ ಕಬಳಿಕೆ ಆರೋಪದಡಿ ಗ್ರಾಮೀಣ ಪ್ರದೇಶದ ಜನತೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸದೆ ಕೇವಲ ನಗರ ಪ್ರದೇಶಕ್ಕೆ ಸೀಮಿತವಾಗುವಂತೆ ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ. ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಕರ್ನಾಟಕ ಭೂಕಬಳಿಕೆ ಕಾಯ್ದೆ 2011ರ 2ಡಿಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ. ಈ ಮೂಲಕ ಬಹುದಿನಗಳ ಜನತೆಯ ಬೇಡಿಕೆಗೆ ಸ್ಪಂದಿಸಿದಂತಾಗಿದೆ. ಕಾಯ್ದೆ ಅನ್ವಯ ಪ್ರಸ್ತುತ ಇಡೀ ರಾಜ್ಯದಲ್ಲಿ ಭೂಕಬಳಿಕೆಯಾದರೆ ವಿಶೇಷ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುತ್ತಿತ್ತು. ಇದರಿಂದ ಗ್ರಾಮೀಣ ಭಾಗದ ಜನರಿಗೆ, ರೈತರಿಗೆ ಸಮಸ್ಯೆಯಾಗುತ್ತಿತ್ತು. ಹೀಗಾಗಿ ನಗರ ಪ್ರದೇಶಕ್ಕೆ ಸೀಮಿತವಾಗುವಂತೆ ತಿದ್ದುಪಡಿ ಮಾಡಲಾಗುತ್ತದೆ ಎಂದು ಹೇಳಿದರು.
ವಿವಿ ಕಾಯ್ದೆ ತಿದ್ದುಪಡಿಗೆ ಸಂಪುಟ ಅಸ್ತು, 8 ನೂತನ ವಿವಿಗಳ ಸ್ಥಾಪನೆ ಇನ್ನು ಸುಲಭ
ತಿದ್ದುಪಡಿ ಮಾಡಲು ಉದ್ದೇಶಿಸಿರುವ ಕರಡು ತಿದ್ದುಪಡಿಯು ಯಾವುದೇ ರೀತಿಯಲ್ಲಿಯೂ ವಿಧೇಯಕದ ಮೂಲ ಕರಡಿಗೆ ವಿರುದ್ಧವಾಗಿರದೆ ಗ್ರಾಮೀಣ, ರೈತರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವುದರಿಂದ ಮಾತ್ರ ರಕ್ಷಣೆ ದೊರಕಿಸುತ್ತದೆ. ಸಣ್ಣ ಮತ್ತು ಅತಿ ಸಣ್ಣ ರೈತರು, ಜನಸಾಮಾನ್ಯರು, ಬಗರ್ಹುಕುಂ ಸಾಗುವಳಿ ಸಂಬಂಧ ಬೆಂಗಳೂರಿನಲ್ಲಿನ ವಿಶೇಷ ನ್ಯಾಯಾಲಯಕ್ಕೆ ಅಲೆಯುವುದನ್ನು ತಪ್ಪಿಸಿದಂತಾಗುತ್ತದೆ ಎಂದು ತಿಳಿಸಿದರು.