ವಿಧಾನಸಭೆ ಅಧಿವೇಶನದ ಬಾಕಿ ಪ್ರಶ್ನೆಗಳಿಗೆ ಉತ್ತರ ಸಿದ್ಧಪಡಿಸುವ ಸಲುವಾಗಿ, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಯುಗಾದಿ ಹಬ್ಬದ ರಜೆಯನ್ನು ರದ್ದುಗೊಳಿಸಿ ಕಡ್ಡಾಯವಾಗಿ ಕಚೇರಿಗೆ ಹಾಜರಾಗುವಂತೆ ಸರ್ಕಾರ ಆದೇಶಿಸಿದೆ. ಈ ಕ್ರಮವು ಸಿಬ್ಬಂದಿ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಬೆಂಗಳೂರು: ಯುಗಾದಿ ಹಬ್ಬದ ಸಂಭ್ರಮದ ನಡುವೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಹಬ್ಬದ ರಜೆ ಇಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ವಿಧಾನಸಭೆ ಅಧಿವೇಶನಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಶ್ನೆಗಳಿಗೆ ಉತ್ತರ ಸಿದ್ಧಪಡಿಸುವ ಅಗತ್ಯದ ಹಿನ್ನೆಲೆಯಲ್ಲಿ, ಹಬ್ಬದ ದಿನವೂ ಕಡ್ಡಾಯವಾಗಿ ಕಚೇರಿಗೆ ಹಾಜರಾಗುವಂತೆ ಕಂದಾಯ ಇಲಾಖೆ ಸೂಚಿಸಿದೆ.
ಕಡ್ಡಾಯವಾಗಿ ಹಾಜರಾಗುವಂತೆ ಆದೇಶ
ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಅವರ ನಿರ್ದೇಶನದಂತೆ, ಮಾರ್ಚ್ 23, 2026ರಂದು ವಿಧಾನಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಪ್ರಶ್ನೆಗಳು ಚರ್ಚೆಗೆ ಬಾಕಿ ಇರುವುದರಿಂದ, ಅವುಗಳಿಗೆ ಸಮರ್ಪಕ ಉತ್ತರ ನೀಡಲು ಪೂರ್ವ ಸಿದ್ಧತೆ ಅಗತ್ಯವಿದೆ ಎಂದು ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 19ರಂದು ಯುಗಾದಿ ಹಬ್ಬದ ದಿನವೂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗುವಂತೆ ಆದೇಶಿಸಲಾಗಿದೆ.
ಈ ಸೂಚನೆಯು ಕಂದಾಯ ಇಲಾಖೆಯ ಒಂಬತ್ತು ಪ್ರಮುಖ ಶಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅನ್ವಯವಾಗುತ್ತದೆ. ಮುಜರಾಯಿ, ಭೂ ಮಂಜೂರಾತಿ-1, ಭೂ ಮಂಜೂರಾತಿ-2, ಭೂ ಮಂಜೂರಾತಿ-3, ಸೇವೆಗಳು-3, ಭೂ ಕಂದಾಯ, ಭೂ ಮಾಪನ, ಭೂಮಿ ಹಾಗೂ ಭೂಸುಧಾರಣಾ ಕೋಶ ಸೇರಿದಂತೆ ವಿವಿಧ ವಿಭಾಗಗಳಿಗೆ ಸೇರಿದ ಸಿಬ್ಬಂದಿಗಳು ಕಚೇರಿಗೆ ಹಾಜರಾಗಿ ವಿಧಾನಸಭೆಯ ಬಾಕಿ ಪ್ರಶ್ನೆಗಳಿಗೆ ಉತ್ತರ ಸಿದ್ಧಪಡಿಸುವಂತೆ ಸೂಚಿಸಲಾಗಿದೆ. ಈ ಸಂಬಂಧ ಕಂದಾಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ಕಲಾವತಿ ಎಸ್.ಎನ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಉತ್ತರ ಸಿಗದ ಹಿನ್ನೆಲೆ ಸ್ಪೀಕರ್ ಅಸಮಾಧಾನ
ಇತ್ತೀಚೆಗೆ ವಿಧಾನಸಭೆಯಲ್ಲಿ ಕೇಳಲಾದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಸಿಗದ ಹಿನ್ನೆಲೆ ಸ್ಪೀಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮುಖ್ಯ ಕಾರ್ಯದರ್ಶಿ ಐಎಎಸ್ ಅಧಿಕಾರಿಗಳಿಗೆ ನೋಟಿಸ್ ನೀಡಿದ ನಂತರ, ಇಲಾಖೆಯ ಹಿರಿಯ ಅಧಿಕಾರಿಗಳು ತ್ವರಿತ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
ಆದರೆ, ಹಬ್ಬದ ದಿನವೂ ಕಡ್ಡಾಯ ಹಾಜರಾತಿ ಸೂಚನೆ ನೀಡಿರುವ ಕ್ರಮಕ್ಕೆ ಸಿಬ್ಬಂದಿ ವಲಯದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ಹಬ್ಬದ ಸಂಭ್ರಮದಲ್ಲಿ ಕುಟುಂಬದೊಂದಿಗೆ ಸಮಯ ಕಳೆಯಬೇಕಾದ ಸಂದರ್ಭದಲ್ಲಿ ಈ ರೀತಿಯ ಆದೇಶ ಹೊರಡಿಸಿರುವುದು ‘ಅಮಾನವೀಯ’ ಕ್ರಮ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಒಟ್ಟಾರೆ, ವಿಧಾನಸಭೆಯ ಕಾರ್ಯಚಟುವಟಿಕೆಗಳಿಗೆ ಆದ್ಯತೆ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆಯಾದರೂ, ಹಬ್ಬದ ದಿನದಲ್ಲೇ ಕಚೇರಿ ಹಾಜರಾತಿ ಕಡ್ಡಾಯಗೊಳಿಸಿರುವುದು ಹಬ್ಬದ ಖುಷಿಯನ್ನು ಕಿತ್ತುಕೊಂಡಂತಾಗಿದೆ..


