ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕುರಿತು ಎಸ್‌ಐಟಿ ನಡೆಸುತ್ತಿರುವ ತನಿಖೆಯಲ್ಲಿ ಮಧ್ಯಪ್ರವೇಶಿಸುವ ಅವಶ್ಯಕತೆ ಇಲ್ಲ ಎಂದು ಹೈಕೋರ್ಟ್‌ ತಿಳಿಸಿದೆ.  

ಬೆಂಗಳೂರು (ಜೂ.13): ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕುರಿತು ಎಸ್‌ಐಟಿ ನಡೆಸುತ್ತಿರುವ ತನಿಖೆಯಲ್ಲಿ ಮಧ್ಯಪ್ರವೇಶಿಸುವ ಅವಶ್ಯಕತೆ ಇಲ್ಲ ಎಂದು ಹೈಕೋರ್ಟ್‌ ತಿಳಿಸಿದೆ. ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣವನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ವಹಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಉಪಾಧ್ಯಕ್ಷ ಎಸ್.ಎಚ್. ಲಿಂಗೇಗೌಡ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಮೂರ್ತಿ ಅವರ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

Add Asianetnews Kannada as a Preferred SourcegooglePreferred

ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಈಗಾಗಲೇ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ಹಂತದಲ್ಲಿ ನ್ಯಾಯಾಲಯವು ಮಧ್ಯಪ್ರವೇಶಿಸುವ ಯಾವುದೇ ಅವಶ್ಯಕತೆ ಇಲ್ಲ. ಅರ್ಜಿದಾರರಿಗೆ ಯಾವುದಾದರೂ ಕುಂದು-ಕೊರತೆಯಿದ್ದರೆ, ಆ ಕುರಿತು ಎಸ್‌ಐಟಿಗೆ ದಾಖಲೆ ಸಲ್ಲಿಸಿ, ಅಲ್ಲಿಯೇ ಪರಿಹಾರ ಪಡೆಯಬಹುದು ಎಂದು ತಿಳಿಸಿ ಅರ್ಜಿ ಇತ್ಯರ್ಥಪಡಿಸಿತು.

ಹೊಡೆದು ಕೊಂದ ದರ್ಶನ್‌ ಗ್ಯಾಂಗ್‌ನಲ್ಲಿ ಇನ್ನೂ ನಾಲ್ವರು ನಾಪತ್ತೆ: ತೀವ್ರ ತಲಾಶ್‌

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್. ಮೋಹನ್‌, ಪ್ರಜ್ವಲ್ ರೇವಣ್ಣ ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕುರಿತು ತನಿಖೆ ನಡೆಸಲು ಕೋರಿ ಅರ್ಜಿದಾರರು ಹೊಳೆನರಸೀಪುರ ಠಾಣೆಗೆ ದೂರು ನೀಡಿದ್ದರು. ಆದರೆ, ಇದೇ ಆರೋಪ ಸಂಬಂಧ ಮತ್ತೊಂದು ದೂರು ದಾಖಲಾಗಿದೆ. ಆದ್ದರಿಂದ ಅರ್ಜಿದಾರರ ದೂರು ಆಧರಿಸಿ ಎಫ್‌ಐಆರ್‌ ದಾಖಲಿಸಲಾಗದು ಎಂದು ತಿಳಿಸಿ ಹಿಂಬರಹ ನೀಡಿದ್ದಾರೆ. ಮತ್ತೊಂದಡೆ ಎಸ್‌ಐಟಿ ಸಮರ್ಪಕವಾಗಿ ತನಿಖೆ ನಡೆಸುವಲ್ಲಿ ಎಡವುತ್ತಿದೆ. ಆದ್ದರಿಂದ ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದರು. ಈ ಮನವಿ ಪುರಸ್ಕರಿಸಲು ನ್ಯಾಯಪೀಠ ನಿರಾಕರಿಸಿತು.