ಸಾಕಷ್ಟು ಒಳಹರಿವು ಬರುತ್ತಿಲ್ಲ. ಸುಪ್ರೀಂ ಕೋರ್ಟ್‌ ಹೇಳಿದ ಪ್ರಮಾಣದಷ್ಟು ನೀರನ್ನು ಬಿಡಲು ಆಗುತ್ತಿಲ್ಲ. ಮಳೆಯ ನಿರೀಕ್ಷೆಯಲ್ಲಿದ್ದೇವೆ. ಬೆಂಗಳೂರು, ರಾಮನಗರ ಭಾಗಗಳಲ್ಲಿ ಮಳೆ ಬೀಳುತ್ತಿರುವ ಕಾರಣ ಸ್ವಲ್ಪ ಮಟ್ಟಿಗೆ ಪರಿಸ್ಥಿತಿ ನಿಭಾಯಿಸಲಾಗುತ್ತಿದೆ. ರೈತರ ಬೆಳೆ ಹಾಗೂ ಕುಡಿಯುವ ನೀರು ನಮ್ಮ ಆದ್ಯತೆ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ 

ಬೆಂಗಳೂರು(ಸೆ.09): ‘ಕಾವೇರಿ ವಿಚಾರದಲ್ಲಿ ತಮಿಳುನಾಡಿಗೆ ನೀರು ಬಿಡಬಾರದು ಎಂದು ಪ್ರತಿಭಟನೆಗಳು ನಡೆಯುತ್ತಿವೆ. ಸುಪ್ರೀಂ ಕೋರ್ಚ್‌ ಹೇಳಿದಷ್ಟುನೀರು ಬಿಡಲೂ ಸಹ ನಮಗೆ ಆಗುತ್ತಿಲ್ಲ. ಯಾಕೆಂದರೆ ನಮ್ಮಲ್ಲಿ ನೀರೇ ಲಭ್ಯವಿಲ್ಲ. ಒಟ್ಟಾರೆ ನಾವು ರಾಜ್ಯದ ರೈತರ ಹಿತ ಕಾಯಲು ಬದ್ಧವಾಗಿ ಕೆಲಸ ಮಾಡುತ್ತಿದ್ದೇವೆ’ ಎಂದು ಜಲಸಂಪನ್ಮೂಲ ಖಾತೆ ಹೊತ್ತಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಸಾಕಷ್ಟು ಒಳಹರಿವು ಬರುತ್ತಿಲ್ಲ. ಸುಪ್ರೀಂ ಕೋರ್ಟ್‌ ಹೇಳಿದ ಪ್ರಮಾಣದಷ್ಟು ನೀರನ್ನು ಬಿಡಲು ಆಗುತ್ತಿಲ್ಲ. ಮಳೆಯ ನಿರೀಕ್ಷೆಯಲ್ಲಿದ್ದೇವೆ. ಬೆಂಗಳೂರು, ರಾಮನಗರ ಭಾಗಗಳಲ್ಲಿ ಮಳೆ ಬೀಳುತ್ತಿರುವ ಕಾರಣ ಸ್ವಲ್ಪ ಮಟ್ಟಿಗೆ ಪರಿಸ್ಥಿತಿ ನಿಭಾಯಿಸಲಾಗುತ್ತಿದೆ. ರೈತರ ಬೆಳೆ ಹಾಗೂ ಕುಡಿಯುವ ನೀರು ನಮ್ಮ ಆದ್ಯತೆ ಎಂದು ಹೇಳಿದರು.

ಇನ್ನು ನಾನು ಮನೆಯಲ್ಲಿ ಕೂರಲ್ಲ, 3-4 ದಿನಗಳಲ್ಲಿ ರಾಜ್ಯ ಪ್ರವಾಸ: ಬಿಎಸ್‌ವೈ

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಯಡಿಯೂರಪ್ಪ ಅವರ ನೇತೃತ್ವದಲ್ಲಿ ಜನವಿರೋಧಿ ಸರ್ಕಾರ ಎಂದು ಪ್ರತಿಭಟನೆ ಮಾಡಲಾಗುತ್ತಿದೆ. ಮೊದಲು ಮೇಕೆದಾಟು ಮತ್ತು ಮಹದಾಯಿಗೆ ಬಿಜೆಪಿಯವರು ಕೇಂದ್ರದಿಂದ ಒಪ್ಪಿಗೆ ಕೊಡಿಸಲಿ’ ಎಂದು ತಿರುಗೇಟು ನೀಡಿದರು.

‘ಜನವಿರೋಧಿ ಎಂದರೆ ಏನು? ಜನ ಬಿಜೆಪಿಯವರನ್ನು ವಿರೋಧಿಸಿಯೇ ಮನೆಯಲ್ಲಿ ಕೂರಿಸಿದ್ದಾರೆ. ನಂತರ ಅವರಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳುವಷ್ಟು ಅರ್ಹತೆ ಸಹ ಇಲ್ಲದಂತಾಗಿದೆ. ಹೆಣ್ಣು ಮಕ್ಕಳು ಉಚಿತವಾಗಿ ಬಸ್‌ನಲ್ಲಿ ಓಡಾಡುತ್ತಿರುವುದು, .2 ಸಾವಿರ ಖಾತೆಗೆ ಬರುತ್ತಿರುವುದು ನೋಡಿ ಅವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಗ್ಯಾರಂಟಿ ಯೋಜನೆಗಳು ಅವರ ಹೊಟ್ಟೆಯನ್ನು ಉರಿಸುತ್ತಿದೆ’ ಎಂದು ಕಿಡಿ ಕಾರಿದರು.

ರಾಜಕೀಯ ಉಳಿವಿಗಾಗಿ ಬಿಎಸ್‌ವೈ ಹೋರಾಟ: ಡಿಕೆಶಿ ವ್ಯಂಗ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ರಾಜಕೀಯ ಉಳಿವಿಗಾಗಿ ಹೋರಾಟ ಮಾಡುತ್ತಿದ್ದಾರೆ. ಮಾಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವ್ಯಂಗ್ಯವಾಗಿ ಹೇಳಿದರು.