ರಮ್ಯಾ ಅವರ ಮೇಲಿನ ಟೀಕೆಗಳ ಬಗ್ಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿನ ಟೀಕೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ಜವಾಬ್ದಾರಿಯುತವಾಗಿ ಬಳಸುವಂತೆ ಸಲಹೆ ನೀಡಿದ್ದಾರೆ.

ಮಂಡ್ಯ (ಆ.2): ರಮ್ಯಾ ಮಾತ್ರವಲ್ಲ, ನಾನು ಸಂಸದೆಯಾಗಿದ್ದ ವೇಳೆ ಆರೇಳು ವರ್ಷ ಸಾಕಷ್ಟು ಟೀಕೆ- ಆರೋಪ, ಕಮೆಂಟ್‌ಗಳನ್ನು ಎದುರಿಸಿದ್ದೇನೆ. ಒಮ್ಮೆ ಕೆ.ಆರ್.ನಗರದಲ್ಲಿ ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆದಿತ್ತು. ಆ ಬಗ್ಗೆ ಪೊಲೀಸರಿಗೆ ದೂರನ್ನೂ ಕೊಟ್ಟಿದ್ದೆ. ಇದುವರೆಗೂ ಯಾರೊಬ್ಬರನ್ನೂ ಪೊಲೀಸರು ಬಂಧಿಸಿಲ್ಲ. ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಲಿಲ್ಲ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಮ್ಯಾ ಅಂತಲ್ಲ, ಹೆಣ್ಣುಮಕ್ಕಳ ವಿಷಯದಲ್ಲಿ ಯಾರೊಬ್ಬರ ವಿರುದ್ಧವೂ ಅಗೌರವವಾಗಿ ಕಮೆಂಟ್ ಮಾಡಬಾರದು ಎಂದರು. ದರ್ಶನ್ ಈ ವಿಚಾರದಲ್ಲಿ ಮೌನ ವಹಿಸಿರುವ ಬಗ್ಗೆ ಕೇಳಿದಾಗ, ಈ ಪ್ರಶ್ನೆಗೆ ಅವರೇ ಉತ್ತರಿಸಬೇಕು. ಸಾಮಾಜಿಕ ಜಾಲತಾಣದಲ್ಲಾದರೂ ಮಾತನಾಡಬಹುದಿತ್ತು ಎಂದಾಗ ಇದನ್ನೂ ಅವರನ್ನೇ ಕೇಳಬೇಕು. ನಾನು ದರ್ಶನ್ ಪರವಾಗಿ ಹೇಳಿದರೆ ತಪ್ಪಾಗುತ್ತದೆ. ನಾನು ಯಾವ ನಟನ ಅಭಿಮಾನಿಗೂ ವಿಶೇಷವಾಗಿ ಹೇಳೋಲ್ಲ. ಎಲ್ಲರಿಗೂ ಹೇಳುತ್ತೇನೆ. ಇನ್ನು ದರ್ಶನ್ ಅಭಿಮಾನಿಗಳೇ ಮಾಡಿದ್ದಾರೆ ಎನ್ನುವುದಕ್ಕೆ ಆಧಾರ ಇಲ್ಲ. ಒಮ್ಮೆ ಅವರೇ ಮಾಡಿದ್ದರೆ ಯಾರೂ ಆ ರೀತಿ ಮಾಡಬಾರದು. ನಿಮ್ಮ ಕುಟುಂಬ, ಭವಿಷ್ಯದ ಬಗ್ಗೆ ಗಮನಹರಿಸಿ ಎಂದು ಮನವಿ ಮಾಡುತ್ತೇನೆ ಎಂದಷ್ಟೇ ಹೇಳಿದರು.

ತಮ್ಮ ವಿರುದ್ಧ ಕಮೆಂಟ್ ಮಾಡಿದವರ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಾರೆ. ಯಾರು ತಪ್ಪು ಮಾಡಿದ್ದಾರೋ ಅವರ ವಿರುದ್ಧ ಕ್ರಮ ಆಗಲಿ. ಸಾಮಾನ್ಯ ಜನರಿಗೂ ಇಂತಹ ಟೀಕೆಗಳು ವ್ಯಕ್ತವಾದಾಗ ಸರ್ಕಾರದ ಸ್ಪಂದನೆ ಹೀಗೇ ಇದ್ದರೆ ಸಂತೋಷ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.

ಸಾಮಾಜಿಕ ಜಾಲತಾಣವನ್ನು ಯಾವುದಕ್ಕೆ, ಎಲ್ಲಿ ಬಳಸಬೇಕು ಎಂಬುದನ್ನು ಯುವಕರು ಯೋಚಿಸಬೇಕು. ಯಾರನ್ನೋ ಟಾರ್ಗೆಟ್ ಮಾಡುವುದಕ್ಕೇ ಹೆಚ್ಚು ಬಳಕೆಯಾಗುತ್ತಿದೆ. ಅನಾಮಿಕರ ಹೆಸರಿನಲ್ಲಿ ಪೋಸ್ಟ್ ಮಾಡಿ ಸಿಕ್ಕಿಹಾಕಿಕೊಳ್ಳುವುದಿಲ್ಲ ಎಂದು ತಿಳಿದುಕೊಂಡಿದ್ದರೆ ಅದು ತಪ್ಪು. ಈಗಿನ ತಂತ್ರಜ್ಞಾನದಲ್ಲಿ ಯಾರೇ ಪೋಸ್ಟ್ ಮಾಡಿದ್ದರೂ ಕಂಡುಹಿಡಿಯಬಹುದು. ಹಾಗಾಗಿ ಸಾಮಾಜಿಕ ಜಾಲತಾಣವನ್ನು ಒಬ್ಬರನ್ನು ಟಾರ್ಗೆಟ್ ಮಾಡುವುದಕ್ಕೆ ಬಳಸಬಾರದು. ಇದರಿಂದ ನಿಮ್ಮ ಜೀವನ ಹಾಳಾಗಲಿದೆ ಎಂದು ಎಚ್ಚರಿಕೆ ನೀಡಿದರು.