ಕಬ್ಬು ಬೆಲೆ ನಿಗದಿ ಮತ್ತು ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚಿಸುವ ಸಂಬಂಧ ವಿಧಾನಸೌಧದಲ್ಲಿ ನಡೆದ ರೈತ ಮುಖಂಡರ ಸಭೆಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಆಗಮಿಸಿದ್ದಕ್ಕೆ ಇತರೆ ಕೆಲ ರೈತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಬೆಂಗಳೂರು (ಅ.16): ಕಬ್ಬು ಬೆಲೆ ನಿಗದಿ ಮತ್ತು ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚಿಸುವ ಸಂಬಂಧ ವಿಧಾನಸೌಧದಲ್ಲಿ ನಡೆದ ರೈತ ಮುಖಂಡರ ಸಭೆಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಆಗಮಿಸಿದ್ದಕ್ಕೆ ಇತರೆ ಕೆಲ ರೈತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕೋಡಿಹಳ್ಳಿ ಚಂದ್ರಶೇಖರ್‌ ವಿರುದ್ಧ ಭ್ರಷ್ಟಾಚಾರ ಆರೋಪಗಳು ಇರುವ ಹಿನ್ನೆಲೆಯಲ್ಲಿ ಅವರನ್ನು ಸಭೆಯಿಂದ ಹೊರಗೆ ಕಳುಹಿಸಬೇಕು ಎಂದು ಆಗ್ರಹಿಸಿದರು. ಪರಿಣಾಮ ಸಭೆಯಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಪರಿಸ್ಥಿತಿ ನಿರ್ಮಾಣಗೊಂಡ ಪ್ರಸಂಗ ನಡೆಯಿತು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ನಡುವೆ, ಕೋಡಿಹಳ್ಳಿ ಚಂದ್ರಶೇಖರ್‌ ಬೆಂಬಲಿಗರು ಮತ್ತು ಇತರೆ ಮುಖಂಡರ ನಡುವೆ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸಮ್ಮುಖದಲ್ಲಿಯೇ ಮಾತಿನ ಚಕಮಕಿ ನಡೆದ ಘಟನೆಯೂ ಜರುಗಿತು. ಸಭೆಯು ಗೊಂದಲಕ್ಕೀಡಾದ ಕಾರಣ ಸಕ್ಕರೆ ಸಚಿವರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿ ಸಭೆಯನ್ನು ಮುಂದುವರಿಸಿದರು. ಶನಿವಾರ ವಿಧಾನಸೌಧದಲ್ಲಿ ಕಬ್ಬು ಬೆಲೆ ನಿಗದಿ ಮತ್ತು ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚಿಸುವ ಸಂಬಂಧ ಸಚಿವ ಶಂಕರ ಪಾಟೀಲ್‌ ಮುನೇನಕೊಪ್ಪ ಅವರು ರೈತ ಮುಖಂಡರ ಸಭೆ ನಡೆಸಿದರು. ಸಭೆಗೆ ಕೋಡಿಹಳ್ಳಿ ಚಂದ್ರಶೇಖರ್‌ ಆಗಮಿಸಿದ್ದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದರು. 

ತೆಲುಗು ನಟ ನಾಗಚೈತನ್ಯ ಸಿನಿಮಾ ಚಿತ್ರೀಕರಣ ವೇಳೆ ಜೇನುಹುಳು ಕಡಿತ, ಪ್ರಾಣಾಪಾಯದಿಂದ ಪಾರು

ಕೋಡಿಹಳ್ಳಿ ಚಂದ್ರಶೇಖರ್‌ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಅವರನ್ನು ಸಭೆಗೆ ಕರೆಯದಿದ್ದರೂ ಬಂದಿದ್ದಾರೆ. ಅವರನ್ನು ಸಭೆಯಿಂದ ಹೊರಗೆ ಕಳುಹಿಸಬೇಕು. ಅವರ ಸಮ್ಮುಖದಲ್ಲಿ ಸಭೆ ನಡೆಸುವುದು ಸೂಕ್ತವಲ್ಲ. ಅವರ ಉಪಸ್ಥಿತಿಯಲ್ಲಿ ಸಭೆ ನಡೆಸುವುದು ಬೇಡ. ಹೋರಾಟ ನಡೆಸಲು ಹಣ ಪಡೆದಿದ್ದಾರೆ ಎಂಬ ಆರೋಪ ಇದೆ. ಅಂತಹವರು ಸಭೆಗೆ ಬರುವುದು ಶೋಭೆಯಲ್ಲ. ದಯವಿಟ್ಟು ಅವರನ್ನು ಹೊರಗೆ ಕಳುಹಿಸಬೇಕು ಎಂದು ರೈತರು ಒತ್ತಾಯಿಸಿದರು. ಇದರಿಂದ ಸಿಡಿಮಿಡಿಗೊಂಡ ಕೋಡಿಹಳ್ಳಿ ಚಂದ್ರಶೇಖರ್‌, ಆರೋಪ ಯಾರು ಬೇಕಾದರೂ ಮಾಡಬಹುದು. 

ನನ್ನ ವಿರುದ್ಧ ಆರೋಪದ ಬಗ್ಗೆ ತನಿಖೆಯಾಗಲಿ, ಅದು ಸಾಬೀತಾದರೆ ಶಿಕ್ಷೆಗೊಳಗಾಗುತ್ತೇನೆ. ಆರೋಪ ಇದೆ ಎಂದು ಸಭೆಯಲ್ಲಿ ಗದ್ದಲ ಎಬ್ಬಿಸುವುದು ಸಮಂಜಸವಲ್ಲ. ಸಭೆಯಲ್ಲಿ ವಿಷಯಾಂತರವಾಗುವುದು ಬೇಡ. ಮೊದಲು ರೈತರ ಸಮಸ್ಯೆಗಳ ಕುರಿತು ಚರ್ಚೆ ನಡೆದು ಇತ್ಯರ್ಥವಾಗಲಿ. ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಸಭೆಯಲ್ಲಿ ತರುವುದು ಸೂಕ್ತವಲ್ಲ ಎಂದು ಹೇಳಿದರು. ಈ ವೇಳೆ ಕೋಡಿಹಳ್ಳಿ ಚಂದ್ರಶೇಖರ್‌ ಬೆಂಬಲಿಗರು ಮತ್ತು ಇತರೆ ರೈತರ ನಡುವೆ ಮಾತಿನ ಚಕಮಕಿ ನಡೆಯಿತು. ಆರೋಪ ಕೇಳಿಬಂದ ತಕ್ಷಣ ಅಪರಾಧಿಯಾಗುವುದಿಲ್ಲ. 

Yadgir: ಅ.19ಕ್ಕೆ ಜನಸಂಕಲ್ಪ ಯಾತ್ರೆ ಸಮಾವೇಶ: ಶಾಸಕ ರಾಜೂಗೌಡ

ಅವರನ್ನು ಸಭೆಯಿಂದ ಹೊರಗೆ ಹೋಗುವಂತೆ ಹೇಳುವುದು ಸರಿಯಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್‌ ಬೆಂಬಲಿಗರು ಕಿಡಿಕಾರಿದರು. ಇದಕ್ಕೆ ಇತರೆ ರೈತರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಸಭೆಯಲ್ಲಿ ಗೊಂದಲದ ಪರಿಸ್ಥಿತಿ ನಿರ್ಮಾಣವಾಯಿತು. ಪರಿಸ್ಥಿತಿ ಕೈ ಮೀರುತ್ತಿರುವ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಸಚಿವರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಸಭೆಯಲ್ಲಿ ಗೊಂದಲವಾಗುವುದು ಬೇಡ. ನಿಗದಿಪಡಿಸಿದ ವಿಚಾರವನ್ನು ಚರ್ಚೆ ಮಾಡೋಣ ಎಂದರು. ಸಭೆಯಲ್ಲಿ ರೈತ ಮುಖಂಡರಾದ ಕುರುಬೂರು ಶಾಂತಕುಮಾರ್‌, ಬಡಗಲಪುರ ನಾಗೇಂದ್ರ ಸೇರಿದಂತೆ ಇತರರು ಭಾಗಿಯಾಗಿದ್ದರು.