ಕಳೆದ ಆ.15ರಂದು ನಡೆದ 75ನೇ ಸ್ವಾತಂತ್ರ್ಯೋತ್ಸವದ ಸಮಾರಂಭದಲ್ಲಿ ಈ ಬಗ್ಗೆ ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

ಬೆಂಗಳೂರು(ಸೆ.16): ಕರ್ತವ್ಯನಿರತ ಸಮಯದಲ್ಲಿ ಹುತಾತ್ಮರಾದ ಯೋಧರ ಕುಟುಂಬದ ಅವಲಂಬಿತ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ಕಲ್ಪಿಸುವ ಸಂಬಂಧ ಸರ್ಕಾರವು ಆದೇಶ ಹೊರಡಿಸಿದೆ.
ಕಳೆದ ಆ.15ರಂದು ನಡೆದ 75ನೇ ಸ್ವಾತಂತ್ರ್ಯೋತ್ಸವದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಘೋಷಣೆ ಮಾಡಿದ್ದರು. ಬಳಿಕ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ತೀರ್ಮಾನ ಕೈಗೊಳ್ಳಲಾಗಿತ್ತು. ಅದರಂತೆ ಇದೀಗ ಸರ್ಕಾರದಿಂದ ಆದೇಶ ಹೊರಬಿದ್ದಿದೆ.

Add Asianetnews Kannada as a Preferred SourcegooglePreferred

ಕರ್ತವ್ಯದ ಸಮಯದಲ್ಲಿ ಯೋಧರು ಹುತಾತ್ಮರಾದರೆ ಅವರ ಕುಟುಂಬದ ಸದಸ್ಯರಿಗೆ ಜೀವನ ಭದ್ರತೆ ಕಲ್ಪಿಸುವ ಉದ್ದೇಶದಿಂದ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ಕಲ್ಪಿಸುವ ತೀರ್ಮಾನ ಮಾಡಲಾಗಿದೆ. ವೀರಮರಣವನ್ನಪ್ಪಿದ ಯೋಧರ ಕುಟುಂಬದ ಸದಸ್ಯರಿಗೆ ಆಸರೆಯಾಗಿ ನಿಲ್ಲುವ ಉದ್ದೇಶದಿಂದ ಅವರ ಅವಲಂಬಿತರಲ್ಲಿ ಒಬ್ಬರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಲು ಸರ್ಕಾರವು ಅನುಮೋದನೆ ನೀಡಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರಿ ಸೌಕರಿ

ರಾಜ್ಯದಲ್ಲಿ ಒಟ್ಟು 400 ಯೋಧರು ಕರ್ತವ್ಯದ ವೇಳೆ ಹುತಾತ್ಮರಾಗಿದ್ದು, ಈ ಪೈಕಿ 200 ಹುತಾತ್ಮ ಯೋಧರ ಕುಟುಂಬದ ಸದಸ್ಯರು ಸರ್ಕಾರಿ ನೌಕರಿಗೆ ಅರ್ಹ ಇದ್ದಾರೆ. ಅವರಿಗೆ ಸರ್ಕಾರಿ ಉದ್ಯೋಗ ನೀಡಲು ಕ್ರಮ ವಹಿಸಲಾಗುವುದು. ಇದೇ ವೇಳೆ ಮೃತ ಯೋಧರ ಕುಟುಂಬದವರಿಗೆ 25 ಲಕ್ಷ ರು. ಪರಿಹಾರ ಮತ್ತು ನಿವೇಶನ ನೀಡಲಾಗುತ್ತಿದ್ದು, ಇದೀಗ ಪರಿಹಾರ ಬದಲಿಗೆ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಲಾಗುವುದು.