ವಿಧಾನ ಪರಿಷತ್ತಿನಲ್ಲಿ, ರಾಜ್ಯಪಾಲರ ಭಾಷಣದಲ್ಲಿ ತಪ್ಪು ಅಂಕಿ ಅಂಶಗಳಿವೆ ಎಂದು ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಆಡಳಿತ ಪಕ್ಷದ ಶಾಸಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಮತ್ತು ಅನುದಾನವನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂದು ಅವರು ಟೀಕಿಸಿದರು.

ವಿಧಾನ ಪರಿಷತ್ತು (ಮಾ.5): ರಾಜ್ಯ ಸರ್ಕಾರವು ರಾಜ್ಯಪಾಲರ ಮೂಲಕ ಅಸತ್ಯವಾದ ಭಾಷಣ ಮಾಡಿಸಿದೆ ಎಂದು ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

Add Asianetnews Kannada as a Preferred SourcegooglePreferred

ಮಂಗಳವಾರ ರಾಜ್ಯಪಾಲರ ಭಾಷಣ ಮೇಲೆ ವಂದನಾ ನಿರ್ಣಯ ಚರ್ಚೆಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರ ಭಾಷಣದಲ್ಲಿ ಸಾಕಷ್ಟು ಅಂಕಿ ಅಂಶಗಳು ತಪ್ಪಾಗಿವೆ. ಅಸತ್ಯ ವಿವರಗಳಿವೆ. ಮನಸ್ಸು ಇಲ್ಲದಿದ್ದರೂ ಅವರು ಭಾಷಣ ಮಾಡಿದ್ದಾರೆ. ಈ ಬಗ್ಗೆ ಅವರಿಗೂ ನೋವಿದೆ. ಇತ್ತ ಕಾಂಗ್ರೆಸ್ ಸರ್ಕಾರ, ರಾಜ್ಯಪಾಲರ ಅಧಿಕಾರವನ್ನು ಮೊಟುಕುಗೊಳಿಸುವ ಮೂಲಕ ಸಂವಿಧಾನಕ್ಕೆ ಅಗೌರವ ತರುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Karnataka Budget Session: ಬಜೆಟ್ ಅಧಿವೇಶನ: ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯಪಾಲರು ಮೆಚ್ಚುಗೆ!

ಆಡಳಿತ ಪಕ್ಷದ ಸಾಕಷ್ಟು ಶಾಸಕರೇ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದಾರೆ. ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿಗೆ ಮೀಸಲಿಟ್ಟಿದ್ದ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಂಡಿದ್ದಾರೆ. ಅವಶ್ಯಕತೆ ಇರುವವರಿಗೆ ಗ್ಯಾರಂಟಿ ಯೋಜನೆ ನೀಡಬೇಕು. ಅಭಿವೃದ್ಧಿ ಕಾಮಗಾರಿಗಳು ವೇಗವಾಗಿ ನಡೆಯುವಂತಾಗಬೇಕು. ಅನುದಾನವನ್ನು ಬೇಕಾಬಿಟ್ಟಿಯಾಗಿ ಖರ್ಚು ಮಾಡಲಾಗುತ್ತಿದೆ. ಗುತ್ತಿಗೆದಾರರಿಂದ ಶೇ.60 ಕಮಿಷನ್ ವಸೂಲಿ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದರು.

ಆರ್ಥಿಕ ನೆಪವೊಡ್ಡಿ ವಿಶ್ವವಿದ್ಯಾನಿಲಯಗಳನ್ನು ಮುಚ್ಚಬಾರದು. ಶಿಕ್ಷಣ ಎಂಬುದು ವ್ಯಾಪಾರವಲ್ಲ. ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ವಿವಿಗಳಾಗಿವೆ. ಆರ್ಥಿಕ ಕಾರಣದಿಂದ ವಿವಿಗಳನ್ನು ಮುಚ್ಚಿದರೆ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಸರ್ಕಾರ ತೆಗೆದುಕೊಳ್ಳುವ ಒಳ್ಳೆಯ ಕಾರ್ಯಕ್ರಮಗಳಿಗೆ ನಮ್ಮ ಸಹಕಾರ ಇರಲಿದೆ ಎಂದು ಹೇಳಿದರು.