ಹೊಸ ವರ್ಷಾಚರಣೆಗೆ ಬ್ರೇಕ್‌!| ಸಾರ್ವಜನಿಕ ಸಂಭ್ರಮಕ್ಕೆ ನಿರ್ಬಂಧ| ಹೋಟೆಲ್‌ಗಳಲ್ಲಿ ಸರಳ ಆಚರಣೆ ಓಕೆ| ಸರ್ಕಾರದಿಂದ ಶೀಘ್ರ ಈ ಕುರಿತು ಮಾರ್ಗಸೂಚಿ: ಸಚಿವ ಆರ್‌.ಅಶೋಕ್‌

 ಬೆಳಗಾವಿ(ಡಿ.06): ಕೋವಿಡ್‌​​-19 ಎರಡನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯದಲ್ಲಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆಗೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಈ ವಿಚಾರವನ್ನು ಸ್ವತಃ ಕಂದಾಯ ಸಚಿವ ಆರ್‌.ಅಶೋಕ್‌ ಸ್ಪಷ್ಟಪಡಿಸಿದ್ದಾರೆ. ಜತೆಗೆ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಜೊತೆ ತಾವು ಚರ್ಚಿಸಿದ್ದು, ಸರ್ಕಾರ ಶೀಘ್ರ ಆದೇಶ ಹಾಗೂ ಮಾರ್ಗಸೂಚಿ ಹೊರಡಿಸಲಿದೆ ಎಂದೂ ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹೊಸ ವರ್ಷದ ಸಂಭ್ರಮಾಚರಣೆಗೆ ಸಂಪೂರ್ಣ ಕಡಿವಾಣ ಹಾಕುವುದಿಲ್ಲ. ಆದರೆ ಸಾರ್ವಜನಿಕವಾಗಿ ಹೊಸ ವರ್ಷಾಚರಣೆಗೆ ಅವಕಾಶ ಇಲ್ಲ. ಡಿ.31ರಂದು ಹೋಟೆಲ್‌ಗಳು ತೆರೆದಿರಲಿದ್ದು, ಅಲ್ಲಿ ಸರಳವಾಗಿ ಪಾರ್ಟಿ ಮಾಡುವುದಕ್ಕೆ ಅಭ್ಯಂತರ ಇಲ್ಲ. ಆದರೆ, ಈ ವೇಳೆ ಕೋವಿಡ್‌ ನಿಯಮಾವಳಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮಾಹಿತಿ ನೀಡಿದರು.

ಹೋಟೆಲ್‌ಗಳಲ್ಲಿ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಆಸನಗಳಲ್ಲಷ್ಟೇ ಗ್ರಾಹಕರಿಗೆ ಸೇವೆ ಒದಗಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದ ಅವರು, ಈ ಹಿಂದಿನಂತೆ ಸಾರ್ವಜನಿಕ ಸ್ಥಳಗಳಲ್ಲಿ ಅದ್ಧೂರಿಯಾಗಿ ಹೊಸ ವರ್ಚಾರಣೆ ಮಾಡುವುದನ್ನು ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ಸಹಕಾರ ಕೊಡಬೇಕು. ಎಲ್ಲರೂ ತಮ್ಮ ತಮ್ಮ ಮನೆಗಳಲ್ಲೇ ಹೊಸ ವರ್ಷದ ಸಂಭ್ರಮ ಆಚರಿಸಬೇಕು ಎಂದು ಮನವಿ ಮಾಡಿದರು.