ಗ್ರೇಟರ್ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ) ವಿಧೇಯಕ 2024ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಈ ಮೂಲಕ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ, ಸಂಸದ ಡಾ.ಕೆ. ಸುಧಾಕರ್ ಸೇರಿ ಹಲವು ಜನಪ್ರತಿನಿಧಿ ಜಿಬಿಎ ಸದಸ್ಯರ ಪಟ್ಟಿಗೆ ಸೇರಿಸಲಾಗಿದೆ. ಹೊಸದಾಗಿ ಸೇರ್ಪಡೆಯಾದ ಪ್ರದೇಶಗಳ ಪುನರ್ ವಿಂಗಡಣೆಗೆ ಅವಕಾಶ
ವಿಧಾನಸಭೆ ಡಿ.(18): ರಾಜ್ಯಸಭೆ ಸದಸ್ಯ ಸುಧಾಮೂರ್ತಿ, ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್ ಸೇರಿ ಜಿಬಿಎ ವ್ಯಾಪ್ತಿಯನ್ನು ಪ್ರತಿನಿಧಿಸುವ ಹಾಗೂ ನಿವಾಸಿಯಾಗಿರುವ ಜನಪ್ರತಿನಿಧಿಗಳ ಹೆಸರನ್ನು ಜಿಬಿಎ ಸದಸ್ಯರ ಪಟ್ಟಿಯಲ್ಲಿ ಸೇರಿಸುವ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ (ಎರಡನೇ ತಿದ್ದುಪಡಿ) ಮಂಗಳವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.
ಇದೇ ವೇಳೆ ಜಿಬಿಎ ವ್ಯಾಪ್ತಿಗೆ ಈಗಾಗಲೇ ಹೊಸದಾಗಿ ಸೇರ್ಪಡೆಯಾಗಿರುವ ಪ್ರದೇಶಕ್ಕೆ ಮೂರು ತಿಂಗಳ ಒಳಗಾಗಿ ಪುನರ್ ವಿಂಗಡಣೆಯನ್ನು ಮಾಡಲು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.
ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧೇಯಕವನ್ನು ಪರ್ಯಾಲೋಚನೆಗೆ ಮಂಡಿಸಿ ಮಾತನಾಡಿದರು.
ಈ ವೇಳೆ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ, ಚಿಕ್ಕಬಳ್ಳಾಪುರದ ಸಂಸದ ಸುಧಾಕರ್ ಅವರ ಕ್ಷೇತ್ರದ ಕೆಲವು ಭಾಗ ಪಾಲಿಕೆ ವ್ಯಾಪ್ತಿಗೆ ಬರುತ್ತಿವೆ. ಆದರೆ ಅವರ ಹೆಸರನ್ನು ಜಿಬಿಎ ಸದಸ್ಯರಲ್ಲಿ ಸೇರಿಸಿರಲಿಲ್ಲ. ಜೊತೆಗೆ ಜಿಬಿಎ ಸದಸ್ಯರ ಪಟ್ಟಿಯಲ್ಲಿ ಪಾಲಿಕೆ ವ್ಯಾಪ್ತಿಯ ನಿವಾಸಿಯಾಗಿರುವ ಜನಪ್ರತಿನಿಧಿಗಳ ಹೆಸರು ಬಿಟ್ಟು ಹೋಗಿದ್ದು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಪರಿಷತ್ ಸದಸ್ಯರನ್ನು ಜಿಬಿಎ ಸದಸ್ಯರನ್ನಾಗಿ ಸೇರಿಸಲು ಈ ತಿದ್ದುಪಡಿ ತರಲಾಗಿದೆ.
ಇನ್ನು ಮುಖ್ಯಮಂತ್ರಿಗಳೇ ಜಿಬಿಎ ಮುಖ್ಯಸ್ಥರಾಗಿರುವ ಹಿನ್ನೆಲೆಯಲ್ಲಿ ಮುಖ್ಯಕಾರ್ಯದರ್ಶಿಗಳು ಹಾಗೂ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರ ಹೆಸರು ಸೇರಿಸಲಾಗಿದೆ. ಇನ್ನು ಹಣಕಾಸು ಇಲಾಖೆ ಕಾರ್ಯದರ್ಶಿಗಳನ್ನು ಈ ಸದಸ್ಯರ ಸಮಿತಿಯಲ್ಲಿ ಸೇರಿಸಲು ನಿರ್ಧರಿಸಲಾಗಿದೆ. ಇತ್ತೀಚೆಗೆ ನಡೆದ ಜಿಬಿಎ ಮೊದಲ ಸಭೆಯಲ್ಲಿ ನಾವು ಈ ವಿಚಾರವನ್ನು ಗಮನಿಸಿದೆವು. ವಿರೋಧ ಪಕ್ಷದ ಸದಸ್ಯರು ತಮ್ಮ ರಾಜಕೀಯ ನಿಲುವಿನಿಂದಾಗಿ ಈ ಸಭೆಯಲ್ಲಿ ಭಾಗವಹಿಸಿರಲಿಲ್ಲ. ಹೀಗಾಗಿ ನಾವು ಈ ತಿದ್ದುಪಡಿ ತಂದು ಇವರುಗಳನ್ನು ಜಿಬಿಎ ಸದಸ್ಯರನ್ನಾಗಿ ಸೇರಿಸುತ್ತಿದ್ದೇವೆ ಎಂದು ತಿಳಿಸಿದರು.
ನಾಮನಿರ್ದೇಶಿತ ಸದಸ್ಯತ್ವ ಪ್ರಸ್ತಾಪ ಕೈಬಿಡುತ್ತೇವೆ:ಡಿಸಿಎಂ
ಈ ವೇಳೆ ಬಿಜೆಪಿ ಸದಸ್ಯ ಎಸ್. ಸುರೇಶ್ ಕುಮಾರ್, ಚುನಾವಣೆ ನಡೆದರೆ 369 ಮಂದಿ ಸದಸ್ಯರು ಆಯ್ಕೆಯಾಗುತ್ತಾರೆ. ಇದೀಗ ಸರ್ಕಾರ 20 ಸಾವಿರ ಜನರಿಗೆ ಒಬ್ಬ ನಾಮನಿರ್ದೇಶಿತ ಸದಸ್ಯರನ್ನಾಗಿ ಮಾಡಿದರೆ, ಮತ್ತೆ 369 ಮಂದಿ ಸದಸ್ಯರು ಬರುತ್ತಾರೆ. ಇದು ಯಾವ ರೀತಿ ಸೂಕ್ತ ಎಂಬ ಗೊಂದಲ ಜನರಲ್ಲಿದೆ ಎಂದು ಕೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್, ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಯಾವುದೇ ರೀತಿಯ ಚುನಾವಣೆ ನಡೆಯುವುದಿಲ್ಲ. ಇದು ರಾಜ್ಯಮಟ್ಟದ ಸಂಸ್ಥೆಯಾಗಿದೆ. ಮುಂದೆ ಹೊಸ ಪ್ರದೇಶವನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಂಡಾಗ ಆ ಭಾಗದಲ್ಲಿ 6 ತಿಂಗಳ ಒಳಗಾಗಿ ಚುನಾವಣೆ ನಡೆಸಬೇಕಾಗುತ್ತದೆ. ಈ ಪ್ರದೇಶದಲ್ಲಿ ಯಾರಾದರೂ ಪಂಚಾಯ್ತಿ ಸದಸ್ಯನಾಗಿದ್ದರೆ, ಅಂತಹವರನ್ನು ಆ ಸೀಮಿತ ಅವಧಿಗೆ ಆ ಪ್ರದೇಶವನ್ನು ಪ್ರತಿನಿಧಿಸಲು ಅವಕಾಶ ಕಲ್ಪಿಸಲು ಉದ್ದೇಶಿಸಲಾಗಿತ್ತು. ಈ ಬಗ್ಗೆ ನನಗೂ ಗೊಂದಲವಿದ್ದು, ನೀವು ಬೇಡ ಎಂದರೆ ಕೈಬಿಡಲು ಸಿದ್ಧವಿದ್ದೇವೆ ಎಂದು ಹೇಳಿ ನಾಮನಿರ್ದೇಶಿತ ಸದಸ್ಯರ ಸೇರ್ಪಡೆಯನ್ನು ಕೈಬಿಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಜನಪ್ರತಿನಿಧಿಗಳಿಗೆ ಒಂದೇ ಕಡೆ ಮತ ಹಕ್ಕು:ಅಶೋಕ್
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ರಾಜ್ಯಸಭೆ ಹಾಗೂ ವಿಧಾನ ಪರಿಷತ್ತಿನ ಚುನಾಯಿತ ಪ್ರತಿನಿಧಿಗಳು ಬೆಂಗಳೂರಿನ ಪಾಲಿಕೆ ಚುನಾವಣೆಯಲ್ಲೂ ಮತದಾನ ಮಾಡುತ್ತಾರೆ. ಬೇರೆಯ ಬಳ್ಳಾರಿ, ಬೀದರ್ನಂತಹ ಮೂಲಕ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಲ್ಲೂ ಮತ ಚಲಾಯಿಸುತ್ತಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದರು.
ಇದಕ್ಕೆ ಸ್ಪಷ್ಟನೆ ನೀಡಿದ ಶಿವಕುಮಾರ್ ಅವರು, ನಾನು ವಿರೋಧ ಪಕ್ಷದ ನಾಯಕರ ಸಲಹೆಯನ್ನು ಒಪ್ಪುತ್ತೇನೆ. ಯಾರೇ ಆದರೂ ಒಂದೇ ಕಡೆ ಮತ ಹಾಕುವಂತಾಗಬೇಕು. ಆದರೆ ಜಿಬಿಎ ಚುನಾಯಿತ ಸಂಸ್ಥೆಯಲ್ಲ. ಪಾಲಿಕೆ ಚುನಾವಣೆಯಲ್ಲಿ ಇದಕ್ಕೆ ಬದ್ಧವಾಗಿದ್ದೇವೆ ಎಂದು ತಿಳಿಸಿದರು.
ಕಾಂಗ್ರೆಸ್ ಸದಸ್ಯ ಬಸವರಾಜ ರಾಯರೆಡ್ಡಿ ಅವರು, ಜನಪ್ರತಿನಿಧಿಗಳ ಕಾಯ್ದೆಯಲ್ಲಿ ಆ ರೀತಿ ಕಡಿವಾಣ ಹಾಕಲು ಸಾಧ್ಯವಿಲ್ಲ. ಅವರು ವಿಳಾಸ ಬದಲಿಸಿಕೊಂಡು ಮತದಾನದಲ್ಲಿ ಭಾಗವಹಿಸಿದರೆ ನಿಯಮಗಳ ಪ್ರಕಾರ ಅಡ್ಡಿಪಡಿಸಲಾಗಲ್ಲ ಎಂದು ಸಲಹೆ ನೀಡಿದರು.ಇದಕ್ಕೆ ಶಿವಕುಮಾರ್ ಅವರು, ಹಾಗೆಂದು ಮತದಾನವನ್ನು ಟೂರಿಂಗ್ ಟಾಕೀಸ್ ಮಾಡಿಕೊಳ್ಳಲು ಆಗುವುದಿಲ್ಲ. ಅದಕ್ಕೆ ಕಡಿವಾಣ ಹಾಕುತ್ತೇವೆ ಎಂದರು.


