ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡುವಿಕೆ ನಿಯಂತ್ರಿಸಲು ಏಳು ದಿನಗಳ ಕಾಲ ಲಾಕ್‌ಡೌನ್‌ ಜಾರಿ ಮಾಡಲಿರುವ ಹಿನ್ನೆಲೆಯಲ್ಲಿ ವಿವಿಧ ತುರ್ತು ಕಾರ್ಯ ನಿಮಿತ್ತ ಬಂದವರು ಸೋಮವಾರ ಮತ್ತು ಮಂಗಳವಾರ ಸಂಜೆಯೊಳಗಾಗಿ ತಮ್ಮ ಊರುಗಳಿಗೆ ವಾಪಸ್‌ ಹೋಗಬಹುದಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

ಬೆಂಗಳೂರು(ಜು.13): ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡುವಿಕೆ ನಿಯಂತ್ರಿಸಲು ಏಳು ದಿನಗಳ ಕಾಲ ಲಾಕ್‌ಡೌನ್‌ ಜಾರಿ ಮಾಡಲಿರುವ ಹಿನ್ನೆಲೆಯಲ್ಲಿ ವಿವಿಧ ತುರ್ತು ಕಾರ್ಯ ನಿಮಿತ್ತ ಬಂದವರು ಸೋಮವಾರ ಮತ್ತು ಮಂಗಳವಾರ ಸಂಜೆಯೊಳಗಾಗಿ ತಮ್ಮ ಊರುಗಳಿಗೆ ವಾಪಸ್‌ ಹೋಗಬಹುದಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

"

ಸುದ್ದಿಗಾರರ ಜೊತೆ ಮಾತನಾಡಿದ ಅವರು, ತರಾತುರಿಯಲ್ಲಿ ಲಾಕ್‌ಡೌನ್‌ ಮಾಡಿದರೆ ಜನ ಆತಂಕಕ್ಕೆ ಒಳಗಾಗುತ್ತಾರೆ. ಹೀಗಾಗಿ 2 ದಿನ ಮೊದಲೇ ಘೋಷಣೆ ಮಾಡಲಾಗಿದೆ. ಮಂಗಳವಾರ ರಾತ್ರಿಯಿಂದ ಏಳು ದಿನಗಳ ಕಾಲ ಲಾಕ್‌ಡೌನ್‌ ಜಾರಿ ತರಲಾಗುವುದು. ಸೋಂಕು ನಿಯಂತ್ರಣಕ್ಕೆ ಬಾರದಿದ್ದರೆ ಲಾಕ್‌ಡೌನ್‌ ವಿಸ್ತರಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಬೆಂಗಳೂರು ಮಾತ್ರವಲ್ಲ ಇತರೆ 10 ಜಿಲ್ಲೆಗಳಲ್ಲೂ ಲಾಕ್‌ಡೌನ್..? 

ಬೆಂಗಳೂರಿನಲ್ಲಿ ಜಾರಿಯಾಗಲಿರುವ ಒಂದು ವಾರದ ಲಾಕ್‌ಡೌನ್‌ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇವೆ. ಪಿಪಿಇ ಕಿಟ್‌ ತಯಾರಿಸುವ ಕಂಪೆನಿ ಸೇರಿದಂತೆ ವೈದ್ಯಕೀಯ ಪರಿಕರಗಳ ಉತ್ಪಾದಿಸುವ ಕಂಪೆನಿಗಳಿಗೆ ವಿನಾಯಿತಿ ನೀಡುವಂತೆ ಮನವಿ ಮಾಡುತ್ತೇವೆ. ಲಾಕ್‌ಡೌನ್‌ ಕುರಿತು ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ಅವರೊಂದಿಗೆ ಚರ್ಚಿಸಿ ಸೋಮವಾರ ಅಂತಿಮ ಮಾರ್ಗಸೂಚಿ ಪ್ರಕಟಿಸಲಿದ್ದಾರೆ.

ಕೊರೋನಾ ನಿಯಂತ್ರಣಕ್ಕೆ ಸೋಂಕಿನ ಸರಪಳಿ ಮುರಿಯಬೇಕಿದೆ. ಹೀಗಾಗಿ ಅಗತ್ಯ ಸೇವೆ ಹೊರತುಪಡಿಸಿ ಉಳಿದವರು ಮನೆಯಲ್ಲೇ ಇರಿ ಎಂದು ಸರ್ಕಾರದ ಪರವಾಗಿ ಕೈ ಮುಗಿದು ಕೇಳುತ್ತೇನೆ ಎಂದು ಮನವಿ ಮಾಡಿಕೊಂಡರು.

ಲಾಕ್‌ಡೌನ್‌ ವಿಸ್ತರಣೆ ಬಗ್ಗೆ ಬಳಿಕ ನಿರ್ಧಾರ:

ಸದ್ಯಕ್ಕೆ ಬೆಂಗಳೂರು ಲಾಕ್‌ಡೌನ್‌ ಏಳು ದಿನ ಮಾತ್ರ. ಈ ಹಂತದಲ್ಲಿ ಕೊರೋನಾ ಸೋಂಕು ಯಾವ ರೀತಿಯಲ್ಲಿ ನಿಯಂತ್ರಣವಾಗುತ್ತದೆ ಎಂಬುದನ್ನು ನೋಡುತ್ತೇವೆ. ನಂತರ ವಿಸ್ತರಣೆ ಮಾಡಬೇಕೆ ಅಥವಾ ಬೇಡವೇ ಎಂಬ ಬಗ್ಗೆ ತಜ್ಞರ ವರದಿ ಕೂಡ ಪಡೆದು ಎರಡು ದಿನ ಮೊದಲೇ ತಿಳಿಸುತ್ತೇವೆ.ಹೀಗಾಗಿ ಯಾರೂ ಸಹ ಆತಂಕ ಪಡುವ ಅಗತ್ಯವಿಲ್ಲ ಎಂದರು.

ಖಾಸಗಿ ಆಸ್ಪತ್ರೆಗಳು ಮಾನವೀಯತೆ ಮೆರೆಯಲಿ:

ರಾಜ್ಯ ಹಾಗೂ ವಿಶೇಷವಾಗಿ ಬೆಂಗಳೂರಿನಲ್ಲಿ ಕೊರೋನಾ ಆರೈಕೆ ಕೇಂದ್ರಗಳಲ್ಲಿ ಹಾಸಿಗೆಗಳ ಸಮಸ್ಯೆ ಇಲ್ಲ. ಖಾಸಗಿ ಆಸ್ಪತ್ರೆಗಳ ಹಾಸಿಗೆಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡಿದರೆ ಬೆಂಗಳೂರಿನಲ್ಲಿ ಹಾಸಿಗೆ ಸಮಸ್ಯೆ ನೀಗುತ್ತದೆ. ಮಾನವೀಯತೆಯಿಂದ ಸಹಾಯ ಮಾಡಿ ಎಂದು ಖಾಸಗಿ ಆಸ್ಪತ್ರೆಗಳಿಗೆ ಮನವಿ ಮಾಡಿದ್ದೇವೆ. ಅವರೂ ಸಹ ಸರ್ಕಾರ ದೊಂದಿಗೆ ಸಹಕರಿಸುವ ವಿಶ್ವಾಸವಿದೆ ಎಂದರು.