ಕೊರೋನಾ ಹೆಚ್ಚಳಕ್ಕೆ ಕಾರಣವೇ ಇದು : ರೇಣುಕಾಚಾರ್ಯ
ಕೊರೋನಾ ಸೋಂಕು ಹೆಚ್ಚಳಕ್ಕೆ ಕಾರಣವೆ ಇದು. ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.
ಬೆಂಗಳೂರು (ಅ.17): ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗಲು ಜನರ ನಿರ್ಲಕ್ಷ್ಯ ಕಾರಣವೇ ಹೊರತು ಸರ್ಕಾರವಲ್ಲ. ಸರ್ಕಾರ ನಿಯಂತ್ರಣಕ್ಕೆ ಸಾಕಷ್ಟುಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಜನರು ಮಾತ್ರ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕಳವಳ ವ್ಯಕ್ತಪಡಿಸಿದ್ದಾರೆ.
ವಿಕಾಸಸೌಧದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಸೂಚನೆ, ಮಾರ್ಗಸೂಚಿಗಳನ್ನು ನಾವು ಪಾಲಿಸುತ್ತಿದ್ದೇವೆಯೇ ಎಂಬುದನ್ನು ಜನರು ಆತ್ಮಾವಲೋಕನ ಮಾಡಿಕೊಳ್ಳಬೇಕು. ನನ್ನ ಮತ ಕ್ಷೇತ್ರದಲ್ಲಿ ಪ್ರತಿ ಬೂತ್ನ ಪ್ರತಿ ಮನೆಗೂ ಹೋಗಿ ಔಷಧಿ, ಮಾಸ್ಕ್ ಸೇರಿ ಇತರೆ ನೆರವುಗಳನ್ನು ನೀಡಿದ್ದೇನೆ. ಆದರೆ ಹೆಚ್ಚಿನ ಜನರು ಮಾಸ್ಕ್ ಧರಿಸುತ್ತಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ. ಮಾಸ್ಕ್ ಧರಿಸಿ ಎಂದರೆ ಏನೂ ಆಗಲ್ಲ ಬಿಡಣ್ಣ ಅಂತಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಶುಭ ಶುಕ್ರವಾರ ಕೊರೋನಾ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚು ..
ಹಳ್ಳಿಗಳಲ್ಲಿ ಕೋವಿಡ್ ಪರೀಕ್ಷೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ಕೋವಿಡ್-19 ಎಂಬುದು ಕಾಯಿಲೆಯೇ ಇಲ್ಲ. ಪರೀಕ್ಷೆ ಮಾಡಿಸಿ ಪಾಸಿಟಿವ್ ಎಂದು ಹೇಳಿ ಆಸ್ಪತ್ರೆಗೆ ದಾಖಲಿಸಿ ಲಕ್ಷಾಂತರ ರು. ಹಣ ವಸೂಲಿ ಮಾಡುತ್ತಾರೆ ಎಂದೆಲ್ಲ ಅಪಪ್ರಚಾರ ಮಾಡುತ್ತಿದ್ದಾರೆ. ಅದೆಲ್ಲ ಸುಳ್ಳು. ಯಾವುದೇ ಲಕ್ಷಣಗಳಿದ್ದರೂ ಪರೀಕ್ಷೆ ಮಾಡಿಸಿ. ಸೋಂಕು ತಡೆಗೆ ಕಡ್ಡಾಯವಾಗಿ ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಿ ಎಂದು ಮನವಿ ಮಾಡಿದರು.