ಚಂದ್ರಯಾನ ಯಶಸ್ಸಿನ ನಿಮಿತ್ತ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲು ಭಾರತೀಯ ಬಾಹ್ಯಾಕಾಶ ಸಂಶೋಧನಾ (ಇಸ್ರೋ) ಸಂಸ್ಥೆಗೆ ಶನಿವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭೇಟಿ ವೇಳೆ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಐದು ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಬೆಂಗಳೂರು (ಆ.26): ಚಂದ್ರಯಾನ ಯಶಸ್ಸಿನ ನಿಮಿತ್ತ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲು ಭಾರತೀಯ ಬಾಹ್ಯಾಕಾಶ ಸಂಶೋಧನಾ (ಇಸ್ರೋ) ಸಂಸ್ಥೆಗೆ ಶನಿವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭೇಟಿ ವೇಳೆ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಐದು ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಳಗ್ಗೆ 6ಕ್ಕೆ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನ ಮಂತ್ರಿಗಳು, ಬಳಿಕ ಅಲ್ಲಿಂದ ಸುಮಾರು 25 ಕಿ.ಮೀ. ರಸ್ತೆ ಮಾರ್ಗದಲ್ಲಿ ಪೀಣ್ಯ ಸಮೀಪದ ಇಸ್ರೋ ಕಚೇರಿಗೆ ತೆರಳಿ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. ಆನಂತರ ಬೆಳಗ್ಗೆ 8.45ಕ್ಕೆ ವಿಶೇಷ ವಿಮಾನದಲ್ಲಿ ನರೇಂದ್ರ ಮೋದಿ ತೆರಳಲಿದ್ದಾರೆ.

ಇಸ್ರೋ ವಿಜ್ಞಾನಿಗಳ ಭೇಟಿಗೆ ಶನಿವಾರ ಬೆಂಗಳೂರಿಗೆ ಪ್ರಧಾನಿ ಮೋದಿ: 1 ಕಿಮೀ ರೋಡ್​ ಶೋ

ಈ ವೇಳೆ ಪ್ರಧಾನ ಮಂತ್ರಿಗಳು ಸಾಗುವ ದಾರಿಯುದ್ದಕ್ಕೂ ಪೊಲೀಸರನ್ನು ನಿಯೋಜಿಸಲಾಗಿದೆ. ಎಚ್‌ಎಎಲ್‌ ವಿಮಾನ ನಿಲ್ದಾಣ ಬಳಿ ಪ್ರಧಾನಿಗಳ ಸ್ವಾಗತಕ್ಕೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಸಿದ್ದತೆ ನಡೆಸಿದ್ದು, ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚಿನ ಜನರು ಜಮಾಯಿಸುವ ಸಾಧ್ಯತೆಗಳಿವೆ. ಹೀಗಾಗಿ ಎಚ್‌ಎಎಲ್‌ ವಿಮಾನದ ಬಳಿ ಸುಮಾರು ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಆಯುಕ್ತ (ಪೂರ್ವ) ರಮಣಗುಪ್ತ ಸಾರಥ್ಯದಲ್ಲಿ ಮೂವರು ಡಿಸಿಪಿಗಳು ಸೇರಿದಂತೆ ಎರಡು ಸಾವಿರಕ್ಕೂ ಹೆಚ್ಚಿನ ಪೊಲೀಸರು ಬಂದೋಬಸ್‌್ತನಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ 10 ಕೆಎಸ್‌ಆರ್‌ಪಿ ತುಕಡಿಗಳು ಹಾಗೂ ನಗರ ಸಶಸ್ತ್ರ ಪಡೆಗಳನ್ನು ಕೂಡಾ ನಿಯೋಜಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಎಚ್‌ಎಎಲ್‌ ವಿಮಾನ ನಿಲ್ದಾಣ ಬಳಿಕ ಇಸ್ರೋ ಜಂಕ್ಷನ್‌ ಬಳಿ ಸಹ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಈ ಜಂಕ್ಷನ್‌ನಲ್ಲಿ ಕೂಡಾ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್‌.ಸತೀಶ್‌ ಮುಂದಾಳತ್ವದಲ್ಲಿ ಮೂವರು ಡಿಸಿಪಿಗಳು ಸೇರಿದಂತೆ 2 ಸಾವಿರಕ್ಕೂ ಹೆಚ್ಚಿನ ಪೊಲೀಸರು ಭದ್ರತೆಯಲ್ಲಿ ಭಾಗವಹಿಸಲಿದ್ದಾರೆ. ಇಸ್ರೋ ಸಂಸ್ಥೆಯ ಆವರಣದಲ್ಲಿ ಕೇಂದ್ರ ರಕ್ಷಣಾ ಪಡೆಗಳು ಭದ್ರತೆ ಒದಗಿಸಲಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಚಂದ್ರ​ಯಾನ ಯಶಸ್ಸಿನ ಹಿಂದೆ ಪ್ರಧಾನಿ ಮೋದಿ ಪ್ರಬ​ಲ ಸ್ಫೂರ್ತಿ: ಸಂಸದ ರಾಘವೆಂದ್ರ

ಪ್ರಧಾನಿ ಸಾಗುವ ಮಾರ್ಗ: ಎಚ್‌ಎಎಲ್‌ ವಿಮಾನ ನಿಲ್ದಾಣ, ದೊಮ್ಮಲೂರು, ಕಮಾಂಡ್‌ ಆಸ್ಪತ್ರೆ, ಟ್ರಿನಿಟಿ ಚರ್ಚ್‌ ರೋಡ್‌, ಟ್ರಿನಿಟಿ ಸರ್ಕಲ್‌, ಮಣಿಪಾಲ್‌ ಸೆಂಟರ್‌, ಮಾಣಿಕ್‌ ಷಾ ಮೈದಾನ, ಚಿನ್ನಸ್ವಾಮಿ ಕ್ರೀಡಾಂಗಣ, ರಾಜಭವನ ರಸ್ತೆ, ಚಾಲುಕ್ಯ ಸರ್ಕಲ್‌, ಬಳ್ಳಾರಿ ರಸ್ತೆ, ಮೇಖ್ರಿ ಸರ್ಕಲ್‌, ಯಶವಂತಪುರ, ಗೊರಗುಂಟೆಪಾಳ್ಯ, ಜಾಲಹಳ್ಳಿ ಕ್ರಾಸ್‌ ಹಾಗೂ ಇಸ್ರೋ ಸಂಸ್ಥೆ ಕಚೇರಿ.