ಮಂಗಳೂರಿನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ, ಪೋಕ್ಸೋ ನ್ಯಾಯಾಲಯವು ದಯಾನಂದ ಮೂಲ್ಯ ಎಂಬ ಅಪರಾಧಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 40 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಸಂತ್ರಸ್ತ ಬಾಲಕಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆಯೂ ಆದೇಶಿಸಿದೆ.
ಮಂಗಳೂರು (ಮೇ.3): ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ ಟಿಎಸ್ ಸಿ2) ಪೋಕ್ಸೋ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 40 ಸಾವಿರ ರು. ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
ದಯಾನಂದ ಮೂಲ್ಯ (44) ಶಿಕ್ಷೆಗೊಳಗಾದ ಅಪರಾಧಿ.
2025ರ ನ.16ರಂದು ಮಧ್ಯಾಹ್ನ 2 ಗಂಟೆ ವೇಳೆಗೆ ಘಟನೆ ನಡೆದಿತ್ತು. ಏಳು ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮನೆಯಲ್ಲಿ ಒಬ್ಬಳೇ ಓದುತ್ತಿದ್ದಾಗ ದಯಾನಂದ ಮೂಲ್ಯ ಮನೆಗೆ ಅಕ್ರಮ ಪ್ರವೇಶ ಮಾಡಿದ್ದಾನೆ. ಬಳಿಕ ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿ, ಆ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡಿ ಬಾವಿಗೆ ಎಸೆಯುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ. ನೊಂದ ಬಾಲಕಿ ಈ ವಿಚಾರನ್ನು ತನ್ನ ತಾಯಿಗೆ ಹೇಳಿದ್ದು, ಅವರು ನೀಡಿದ ದೂರಿನಂತೆ ನ.22ರಂದು ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್ ನಿರೀಕ್ಷಕ ಮಂಜುನಾಥ ಬಿ.ಎಸ್. ಅವರು ಪ್ರಕರಣದ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ. ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯದ ನ್ಯಾಯಾಧೀಶೆ ಮಾನು. ಕೆ.ಎಸ್. ಅವರು, ದಯಾನಂದ ಮೂಲ್ಯ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಮೇ 2 ರಂದು ಶಿಕ್ಷೆ ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ವಿಶೇಷ ಪೋಕ್ಸೋ ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ಸಾಕ್ಷಿ ವಿಚಾರಣೆ ನಡೆಸಿ ವಾದ ಮಂಡಿಸಿದ್ದಾರೆ.
ದಂಡದ ಮೊತ್ತ 40 ಸಾವಿರ ರು. ಜತೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 3.60 ಲಕ್ಷ ರು. ಸೇರಿಸಿ ಒಟ್ಟು 4 ಲಕ್ಷ ರು.ವನ್ನು ಸಂತ್ರಸ್ತ ಬಾಲಕಿಗೆ ಪರಿಹಾರವಾಗಿ ಪಾವತಿಸುವಂತೆ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.
ಅಪ್ರಾಪ್ತ ವಯಸ್ಸಿನ ಬಾಲಕಿಗೆ ದೌರ್ಜನ್ಯ ಎಸಗಿದ ಪ್ರಕರಣವನ್ನು ನ್ಯಾಯಾಧೀಶರು ಗಂಭೀರವಾಗಿ ಪರಿಗಣಿಸಿದ್ದರು. ಪ್ರಕರಣ ದಾಖಲಾದ ಐದು ತಿಂಗಳಲ್ಲೇ ಅಪರಾಧ ಸಾಬೀತಾಗಿ ಶಿಕ್ಷೆಯಾಗಿದೆ.


