ಬೆಂಗಳೂರಿನಲ್ಲಿ ನಡೆದ ವಿಜಯೋತ್ಸವದಲ್ಲಿ ಸಂಭವಿಸಿದ ದುರಂತದಲ್ಲಿ ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದ್ದಾರೆ.

ಬೆಂಗಳೂರು (ಜೂ.6) : ಸ್ವತಃ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ಮುಂದೆ ನಿಂತು ವಿಜಯೋತ್ಸವ ಆಚರಣೆಗೆ ಮುಂದಾಗಿ ಬಹುದೊಡ್ಡ ದುರಂತಕ್ಕೆ ಕಾರಣವಾಗಿರುವಾಗ ಐವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹರಿಹಾಯ್ದಿದ್ದಾರೆ.

Add Asianetnews Kannada as a Preferred SourcegooglePreferred

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಕನಿಷ್ಠ ನೈತಿಕತೆ ಇದ್ದರೆ ಈ ದುರಂತ ಘಟನೆಯ ಜವಾಬ್ದಾರಿ ಹೊತ್ತು ಈ ಕೂಡಲೇ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ತಮ್ಮ ನೈತಿಕ ಜವಾಬ್ದಾರಿ ಮರೆತು, ಜನರ ಆಕ್ರೋಶವನ್ನು ತಣ್ಣಗಾಗಿಸಬಹುದೆಂಬ ದುರಾಲೋಚನೆಯಿಂದ ಪೊಲೀಸ್ ಆಯುಕ್ತರೂ ಸೇರಿ ಐವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿ ಅಮಾನತು ಮಾಡಿರುವುದು ನಾಚಿಕೆಗೇಡಿನ ಕ್ರಮ. ಸಮಾರಂಭಕ್ಕೂ ಮುನ್ನವೇ ಕಾಲ್ತುಳಿತದಿಂದ ಸಾವು-ನೋವಾಗಿರುವ ಸುದ್ದಿ ತಲುಪಿದರೂ ಭಂಡತನದಿಂದ ಸನ್ಮಾನ ಕಾರ್ಯಕ್ರಮ ಮುಗಿಸಿ, ನಂತರ ಚಿನ್ನಸ್ವಾಮಿ ಸ್ಟೇಡಿಯಂನಲ್ಲೂ ಕಾರ್ಯಕ್ರಮ ಮುಂದುವರೆಸುವ ಮೂಲಕ ಕಾಂಗ್ರೆಸ್ ಸರ್ಕಾರ ಕರುನಾಡಿನಲ್ಲಿ ಕರಾಳ ಇತಿಹಾಸ ಸೃಷ್ಟಿಸಿದೆ ಎಂದು ಅವರು ಹೇಳಿದ್ದಾರೆ.

ಜನರ ಆಕ್ರೋಶವನ್ನು ತಣಿಸಲು ಹಾಗೂ ಉಚ್ಚ ನ್ಯಾಯಾಲಯದ ನ್ಯಾಯದಂಡದಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳನ್ನು ಅಮಾನತುಗೊಳಿಸಿರುವುದು ಕುರ್ಚಿಗೆ ಅಂಟಿ ಕೂರುವ ಸ್ವಾರ್ಥದ ಕ್ರಮ ಎಂದು ಹೇಳಿಕೆ ನೀಡಿದ್ದಾರೆ.