ಹಾಸನದ ಅತ್ಯಾ*ಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಕೋರಿದ್ದ ಅವರ ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, ಸದ್ಯಕ್ಕೆ ಜೈಲುವಾಸ ಮುಂದುವರಿಯಲಿದೆ.

ಬೆಂಗಳೂರು (ಡಿ.03): ಹಾಸನಲ್ಲಿ ನಡೆದ ಅತ್ಯಾ*ಚಾರ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ (ಸೆಷನ್ಸ್ ಕೋರ್ಟ್) ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್‌ನಿಂದ ಭಾರಿ ಹಿನ್ನಡೆಯಾಗಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠವು ವಜಾಗೊಳಿಸಿದೆ.

Add Asianetnews Kannada as a Preferred SourcegooglePreferred

ನ್ಯಾಯಮೂರ್ತಿಗಳಾದ ಕೆ.ಎಸ್. ಮುದಗಲ್ ಹಾಗೂ ಟಿ. ವೆಂಕಟೇಶ್ ನಾಯ್ಕ್ ಅವರಿದ್ದ ವಿಭಾಗೀಯ ಪೀಠವು ಡಿಸೆಂಬರ್ 3 ರಂದು ಈ ಮಹತ್ವದ ತೀರ್ಪನ್ನು ಪ್ರಕಟಿಸಿದ್ದು, ಪ್ರಜ್ವಲ್ ರೇವಣ್ಣ ಅವರಿಗೆ ಜೈಲು ವಾಸದಿಂದ ಸದ್ಯಕ್ಕೆ ಬಿಡುಗಡೆ ಭಾಗ್ಯ ದೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಜೀವಾವಧಿ ಶಿಕ್ಷೆಯ ಹಿನ್ನೆಲೆ

ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾ*ಚಾರ ಎಸಗಿದ ಗಂಭೀರ ಆರೋಪದ ಮೇಲೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಳೆದ ಆಗಸ್ಟ್ 2025ರಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಘೋಷಿಸಿತ್ತು. ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪರಾಧ ಸಾಬೀತಾದ ಕಾರಣ, ನ್ಯಾಯಾಲಯವು ಅವರಿಗೆ ಜೀವಿತಾವಧಿ ಕಠಿಣ ಜೈಲು ಶಿಕ್ಷೆ ಮತ್ತು ₹11 ಲಕ್ಷಕ್ಕೂ ಅಧಿಕ ದಂಡ ವಿಧಿಸಿ ಆದೇಶ ಹೊರಡಿಸಿತ್ತು. ವಿಧಿಸಲಾದ ದಂಡದ ಮೊತ್ತದಲ್ಲಿ ಬಹುಪಾಲನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಲು ಆದೇಶಿಸಲಾಗಿತ್ತು.

ವಿಶೇಷ ನ್ಯಾಯಾಲಯದ ಈ ತೀರ್ಪನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯ ವಿಚಾರಣೆ ಬಾಕಿ ಇರುವಾಗಲೇ, ತಮಗೆ ವಿಧಿಸಲಾದ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು, ಜಾಮೀನು ನೀಡುವಂತೆ ಪ್ರಜ್ವಲ್ ಪರ ಹಿರಿಯ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದ್ದರು.

ಪ್ರಬಲ ವಾದ ಮಂಡನೆಯ ನಡುವೆಯೂ ಶಾಕ್

ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ, ಪ್ರಜ್ವಲ್ ರೇವಣ್ಣ ಪರ ವಾದ ಮಂಡಿಸಿದ ಹಿರಿಯ ವಕೀಲರು, ಸಂತ್ರಸ್ತೆಯ ಹೇಳಿಕೆಗಳಲ್ಲಿನ ವಿರೋಧಾಭಾಸಗಳು, ಸಾಕ್ಷ್ಯಗಳ ಮೇಲಿನ ಸಂಶಯಗಳು ಮತ್ತು ಮೊಬೈಲ್ ಫೋನ್ ವಶಪಡಿಸಿಕೊಳ್ಳದಿರುವ ಕುರಿತ ಲೋಪಗಳನ್ನು ಎತ್ತಿ ಹಿಡಿದು ಶಿಕ್ಷೆಯನ್ನು ಅಮಾನತುಗೊಳಿಸಬೇಕು ಎಂದು ಪ್ರಬಲವಾಗಿ ಪ್ರತಿಪಾದಿಸಿದ್ದರು. ಆದರೆ, ಈ ಪ್ರಕರಣದ ಗಂಭೀರತೆ ಮತ್ತು ವಿಚಾರಣಾ ನ್ಯಾಯಾಲಯವು ಪ್ರಬಲ ಸಾಕ್ಷ್ಯಗಳ ಆಧಾರದ ಮೇಲೆ ನೀಡಿರುವ ಜೀವಾವಧಿ ಶಿಕ್ಷೆಯ ತೀರ್ಪನ್ನು ಪರಿಗಣಿಸಿದ ನ್ಯಾಯಮೂರ್ತಿಗಳ ವಿಭಾಗೀಯ ಪೀಠವು, ಶಿಕ್ಷೆಯನ್ನು ಅಮಾನತುಗೊಳಿಸಲು ನಿರಾಕರಿಸಿ, ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಈ ಆದೇಶದಿಂದಾಗಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸದ್ಯಕ್ಕೆ ಜೈಲಿನಲ್ಲಿಯೇ ಮುಂದುವರಿಯುವುದು ಅನಿವಾರ್ಯವಾಗಿದೆ. ವಿಶೇಷ ನ್ಯಾಯಾಲಯದ ತೀರ್ಪು ರದ್ದು ಕೋರಿ ಸಲ್ಲಿಸಿರುವ ಮೂಲ ಮೇಲ್ಮನವಿಯ ವಿಚಾರಣೆ ಮುಂದೆ ನಡೆಯಲಿದೆ. ಹೈಕೋರ್ಟ್‌ನ ಈ ನಿರ್ಧಾರವು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹೈಕೋರ್ಟ್‌ನಲ್ಲಿ ಪ್ರಜ್ವಲ್ ರೇವಣ್ಣ ಅವರ ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಲಿದೆ. ಒಂದೊಮ್ಮೆ ಹೈಕೋರ್ಟ್ ಕೂಡ ವಿಶೇಷ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದರೆ, ಅವರಿಗೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಅವಕಾಶ ಮಾತ್ರ ಉಳಿದಿರುತ್ತದೆ.