Asianet Suvarna News Asianet Suvarna News

ಬೆಂಗಳೂರು: 402 ಪಿಎಸ್‌ಐ ನೇಮಕ ವಿಳಂಬಕ್ಕೆ ಶೀಘ್ರ ಮೋಕ್ಷ? ಇಲಾಖೆಯಲ್ಲಿ 17 ಸಾವಿರ ಹುದ್ದೆ ಖಾಲಿ!

  ಕಳೆದ ನಾಲ್ಕು ವರ್ಷಗಳಿಂದ ನನೆಗುದಿಗೆ ಬಿದ್ದಿರುವ 402 ಪಿಎಸ್‌ಐ ಹುದ್ದೆಗಳ ನೇಮಕಾತಿ ಸಂಬಂಧ ಶೀಘ್ರವೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ (ಕೆಇಎ) ಲಿಖಿತ ಪರೀಕ್ಷೆ ನಡೆಸುವ ಸಾಧ್ಯತೆಯಿದೆ.

Quick solution to 402 PSI recruitment delay at bengaluru rav
Author
First Published Feb 19, 2024, 8:29 AM IST

ಮೋಹನ ಹಂಡ್ರಂಗಿ 

ಬೆಂಗಳೂರು (ಮಾ.19) :  ಕಳೆದ ನಾಲ್ಕು ವರ್ಷಗಳಿಂದ ನನೆಗುದಿಗೆ ಬಿದ್ದಿರುವ 402 ಪಿಎಸ್‌ಐ ಹುದ್ದೆಗಳ ನೇಮಕಾತಿ ಸಂಬಂಧ ಶೀಘ್ರವೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ (ಕೆಇಎ) ಲಿಖಿತ ಪರೀಕ್ಷೆ ನಡೆಸುವ ಸಾಧ್ಯತೆಯಿದೆ.

ಏಕೆಂದರೆ, 402 ಪಿಎಸ್‌ಐ ಹುದ್ದೆಗಳ ನೇಮಕಾತಿ ಸಂಬಂಧ ಮರು ಪರೀಕ್ಷೆ ನಡೆಸುವಂತೆ ರಾಜ್ಯ ಪೊಲೀಸ್‌ ನೇಮಕಾತಿ ವಿಭಾಗದ ಮುಖ್ಯಸ್ಥರಾದ ಡಿಜಿಪಿ ಕಮಲ್‌ ಪಂತ್‌ ಅವರೇ ಖುದ್ದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪತ್ರ ಬರೆದಿರುವ ಬಗ್ಗೆ ಪೊಲೀಸ್‌ ಇಲಾಖೆಯ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಪಿಎಸ್‌ಐ ನೇಮಕಾತಿ ಅಕ್ರಮ: ಆಯೋಗದಿಂದ ಸಿಎಂಗೆ ವರದಿ

ಈ ಹಿಂದೆ ರಾಜ್ಯ ಪೊಲೀಸ್‌ ನೇಮಕಾತಿ ವಿಭಾಗದಿಂದ ನಡೆಸಲಾಗಿದ್ದ 545ರ ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಅವ್ಯವಹಾರದ ಆರೋಪ ಕೇಳಿ ಬಂದಿತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿತ್ತು. ತನಿಖೆಯಲ್ಲಿ ಅವ್ಯವಹಾರ ಆರೋಪ ಸಾಬೀತಾಗಿ ರಾಜ್ಯ ಪೊಲೀಸ್‌ ನೇಮಕಾತಿ ವಿಭಾಗದ ಮುಖ್ಯಸ್ಥರೂ ಸೇರಿದಂತೆ ನೂರಕ್ಕೂ ಅಧಿಕ ಆರೋಪಿಗಳ ಬಂಧನವಾಗಿತ್ತು.

ನಂತರದ ಬೆಳವಣಿಗೆಗಳಲ್ಲಿ ರಾಜ್ಯ ಸರ್ಕಾರ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಅಧಿಸೂಚನೆ ರದ್ದುಗೊಳಿಸಿ ಮರುಪರೀಕ್ಷೆ ನಡೆಸುವುದಾಗಿ ಆದೇಶಿಸಿತ್ತು. ಇದರ ವಿರುದ್ಧ ಕೆಲ ಅಭ್ಯರ್ಥಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ವೇಳೆ ವಿಚಾರಣೆ ನಡೆಸಿದ ಹೈಕೋರ್ಟ್‌ ರಾಜ್ಯ ಸರ್ಕಾರದ ಮರುಪರೀಕ್ಷೆ ನಿರ್ಧಾರ ಎತ್ತಿ ಹಿಡಿದಿತ್ತು.

ಆದರೆ, ರಾಜ್ಯ ಪೊಲೀಸ್‌ ನೇಮಕಾತಿ ವಿಭಾಗ ಹೊರತುಪಡಿಸಿ ಸ್ವತಂತ್ರ ಸಂಸ್ಥೆಯಿಂದ ಮರು ಪರೀಕ್ಷೆ ನಡೆಸಲು ಸೂಚಿಸಿತ್ತು. ಅದರಂತೆ ರಾಜ್ಯ ಸರ್ಕಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮರು ಪರೀಕ್ಷೆ ಜವಾಬ್ದಾರಿ ನೀಡಿತ್ತು. ಇತ್ತೀಚೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಯಾವುದೇ ಗೊಂದಲ ಹಾಗೂ ಅಕ್ರಮಗಳಿಗೆ ಅವಕಾಶ ನೀಡದೆ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಸಂಬಂಧ ಮರು ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ.

\Bಇದರ ಬೆನ್ನಲ್ಲೇ ಪಿಎಸ್‌ಐ ಹುದ್ದೆ ಆಕಾಂಕ್ಷಿಗಳು 402 ಪಿಎಸ್‌ಐ ಹುದ್ದೆಗಳ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕವೇ ಲಿಖಿತ ಪರೀಕ್ಷೆ ನಡೆಸುವಂತೆ ಆಗ್ರಹಿಸಿದ್ದಾರೆ.\B

ಕೆಇಎಗೆ ನೀಡಲು ಆಕಾಂಕ್ಷಿಗಳ ಆಗ್ರಹ:

ರಾಜ್ಯ ಪೊಲೀಸ್‌ ನೇಮಕಾತಿ ವಿಭಾಗದಿಂದ ಲಿಖಿತ ಪರೀಕ್ಷೆ ಮಾಡಿದರೆ, ಗೊಂದಲಗಳು ಉಂಟಾಗುವ ಸಾಧ್ಯತೆಯಿದೆ. ಅಲ್ಲದೆ, ಮತ್ತೊಮ್ಮೆ ಅಕ್ರಮಗಳೂ ಆಗಬಹುದು. ಹೀಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಲಿಖಿತ ಪರೀಕ್ಷೆಯ ಜವಾಬ್ದಾರಿ ನೀಡಬೇಕು ಎಂಬುದು ಪಿಎಸ್‌ಐ ಹುದ್ದೆ ಆಕಾಂಕ್ಷಿಗಳ ಒಕ್ಕೋರಲ ಒತ್ತಾಯವಾಗಿದೆ.

ನೇಮಕಾತಿ ವಿಭಾಗಕ್ಕೆ ಅಪಕೀರ್ತಿ:

545 ಪಿಎಸ್‌ಐ ಹುದ್ದೆಗಳ ನೇಮಕಾತಿ ಅಕ್ರಮದಲ್ಲಿ ರಾಜ್ಯ ಪೊಲೀಸ್‌ ನೇಮಕಾತಿ ವಿಭಾಗದ ಅಂದಿನ ಮುಖ್ಯಸ್ಥ ಸೇರಿದಂತೆ ಹಲವು ಪೊಲೀಸ್‌ ಅಧಿಕಾರಿ-ಸಿಬ್ಬಂದಿಗಳೇ ನೇರವಾಗಿ ಭಾಗಿಯಾಗಿ ಬಂಧನಕ್ಕೆ ಒಳಗಾಗಿದ್ದಾರೆ. ಇದರಿಂದ ನೇಮಕಾತಿ ವಿಭಾಗಕ್ಕೆ ಅಪಕೀರ್ತಿ ಬಂದಿದೆ. ಹೀಗಾಗಿ 402 ಪಿಎಸ್‌ಐ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆ ಜವಾಬ್ದಾರಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೀಡುವುದು ಒಳಿತು ಎಂಬ ಚರ್ಚೆಗಳು ಪೊಲೀಸ್‌ ಇಲಾಖೆಯಲ್ಲೇ ಶುರುವಾಗಿವೆ. ಇದರ ಬೆನ್ನಲ್ಲೇ ರಾಜ್ಯ ಪೊಲೀಸ್‌ ನೇಮಕಾತಿ ವಿಭಾಗದ ಮುಖ್ಯಸ್ಥರು ಲಿಖಿತ ಪರೀಕ್ಷೆ ನಡೆಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದಾರೆ

 

 

ಪಿಎಸ್‌ಐ ನೇಮಕಾತಿ ಅಕ್ರಮ: ಅಶ್ವತ್ಥ್‌, ಎಚ್ಡಿಕೆಗೆ ಆಯೋಗದ ನೋಟಿಸ್‌

ವರ್ಷದಿಂದ ನನೆಗುದಿಗೆ ಏಕೆ?

ರಾಜ್ಯ ಸರ್ಕಾರ 2021ನೇ ಸಾಲಿನಲ್ಲಿ 402 ಪಿಎಸ್‌ಐ ಹುದ್ದೆಗಳ ನೇಮಕಾತಿ ಸಂಬಂಧ ಅಧಿಸೂಚನೆ ಹೊರಡಿಸಿತ್ತು. ಅದರಂತೆ ರಾಜ್ಯ ಪೊಲೀಸ್‌ ನೇಮಕಾತಿ ವಿಭಾಗವು ಅರ್ಜಿ ಆಹ್ವಾನಿಸಿತ್ತು. ಬಳಿಕ ಅರ್ಜಿ ಸ್ವೀಕರಿಸಿ ಅಕ್ಟೋಬರ್ ತಿಂಗಳಲ್ಲಿ ಅಭ್ಯರ್ಥಿಗಳ ದೈಹಿಕ ಸಾಮರ್ಥ್ಯದ ಪರೀಕ್ಷೆ ನಡೆಸಿತ್ತು. 2022ರ ಜ.30ರಂದು ಲಿಖಿತ ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಿತ್ತು. ಈ ನಡುವೆ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಅವ್ಯವಹಾರ ಹೊರಬಿದ್ದ ಬೆನ್ನಲ್ಲೇ 402 ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ಅರ್ಹ ಅಭ್ಯರ್ಥಿಗಳು ಚಾತಕ ಪಕ್ಷಿಗಳಂತೆ ಲಿಖಿತ ಪರೀಕ್ಷೆಗೆ ಕಾಯುತ್ತಿದ್ದಾರೆ.

Follow Us:
Download App:
  • android
  • ios