ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ವೇಳೆ ರಾಜ್ಯದ ಎಲ್ಲ ಧಾರ್ಮಿಕ ದತ್ತಿ ಇಲಾಖೆಗೊಳಪಡುವ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಸಲು ಸರ್ಕಾರದ ಆದೇಶ ಹೊರಡಿಸಿದೆ. 

ಬೆಂಗಳೂರು (ಜ.07): ದೇಶದ ಹಿಂದೂ ಧಾರ್ಮದ ಪವಿತ್ರ ಕ್ಷೇತ್ರವೆಂದೇ ಹೇಳಲಾಗುವ ರಾಮಜ ಜನ್ಮಭೂಮಿ ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿ ಜ.22ರಂದು ಉದ್ಘಾಟನೆ ಮಾಡಲಾಗುತ್ತಿದೆ. ಆದರೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉದ್ಘಾಟನಾ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ಈ ಹಿನ್ನೆಲೆಯಲ್ಲಿ ರಾಜಕೀಯ ಕೆಸರೆರಚಾಟ ಮಾಡಿದ್ದರೂ, ಕಾಂಗ್ರೆಸ್‌ ಸರ್ಕಾರದಿಂದ ಜ.22ರಂದು ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದ ವೇಳೆ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸುವಂತೆ ಆದೇಶ ಹೊರಡಿಸಿ ರಾಮನ ಮೇಲಿನ ಭಕ್ತಿ ಸಮರ್ಪಣೆ ಮಾಡಲಾಗುತ್ತಿದೆ.

Add Asianetnews Kannada as a Preferred SourcegooglePreferred

ಹೌದು, ರಾಜ್ಯದಲ್ಲಿ ರಾಮ ಮಂದಿರ ಉದ್ಘಾಟನೆಯನ್ನು ಕೇಂದ್ರದ ಬಿಜೆಪಿ ರಾಜಕೀಯಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಪ್ರಿಯಾಂಕ ಖರ್ಗೆ, ಹೆಚ್.ಸಿ. ಮಹದೇವಪ್ಪ ಹಾಗೂ ಮಾಜಿ ಸಚಿವ ಹೆಚ್. ಆಂಜನೇಯ ಕಿಡಿಕಾರಿದರು. ಜೊತೆಗೆ, ಒಂದು ರಾಜ್ಯದ ಮುಖ್ಯಮಂತ್ರಿಯಾಗಿದ್ದರೂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನಿಡಲಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದು ಪ್ರಧಾನಿ ನರೇಂದ್ರ ಮೋದಿ ಹಾಗೂ ಶ್ರೀರಾಮ ಮಂದಿರ ಟ್ರಸ್ಟ್‌ನಿಂದ ರಾಜಕೀಯ ಹಗೆ ಸಾಧಿಸಲಾಗುತ್ತಿದೆ ಎಂದು ಹೇಳಲಾಗುತ್ತಿತ್ತು. ಈಗ ಕಾಂಗ್ರೆಸ್‌ ಸರ್ಕಾರದಿಂದ ರಾಮ ಮಂದಿರ ಉದ್ಘಾಟನೆ ದಿನ ವಿಶೇಷ ಪೂಜೆಗೆ ಅವಕಾಶ ಮಾಡಿಕೊಡಲಾಗಿದೆ.

ರಾಮ ಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯಗೇ ಆಹ್ವಾನ ಸಿಗದಿದ್ದರೂ, ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಿಕ್ಕಿದ್ಹೇಗೆ?

ಇನ್ನು ರಾಜ್ಯದಲ್ಲಿನ ಅನೇಕ ಶಾಸಕರು ಹಾಗೂ ರಾಮಮಂದಿರ ಉದ್ಘಾಟನೆ ದಿನ ವಿಶೇಷ ಪೂಜೆ, ಪುನಸ್ಕಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಹಲವು ಶಾಸಕರು ಹಾಗೂ ದೇವಸ್ಥಾನದ ಅರ್ಚಕರು ಮನವಿ ಮಾಡಿದ್ದರು. ಇದಕ್ಕೆ ಮಣಿದಿರುವ ಕಾಂಗ್ರೆಸ್‌ ಸರ್ಕಾರದಿಂದ ಅಳೆದು, ತೂಗಿ ಆಲೋಚನೆಯನ್ನು ಮಾಡಿ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಂದು ಎಲ್ಲ ಮುಜರಾಯಿ ಇಲಾಖೆ ಆಡಳಿತಕ್ಕೆ ಒಳಪಡುವ ಎಲ್ಲ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪುನಸ್ಕಾರ ಹಾಗೂ ಪ್ರಾರ್ಥನೆ ಸಲ್ಲಿಕೆ ಮಾಡುವಂತೆ ಆದೇಶ ಹೊರಡಿಸಲಾಗಿದೆ.

ರಾಮ ಮಂದಿರ ಉದ್ಘಾಟನೆ ಆಹ್ವಾನದಲ್ಲಿ ತಾರತಮ್ಯ : ರಾಜಣ್ಣ

ಸುತ್ತೋಲೆಯಲ್ಲೇನಿದೆ? 
ಶ್ರೀ ರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಿರುವ ರಾಮ ಮಂದಿರದಲ್ಲಿ ದಿನಾಂಕ ಜ.22ರಂದು ನೂತನವಾಗಿ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವು ನಡೆಯುತ್ತಿದೆ. ಆದ್ದರಿಂದ ದೇಶದ/ರಾಜ್ಯದ ಎಲ್ಲ ಜನರ ಒಳಿತಿಗಾಗಿ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಶ್ರೀರಾಮನ ವಿಗ್ರಹನ ಪ್ರಾಣ ಪ್ರತಿಷ್ಠಾಪನಾ ಸಮಯದಲ್ಲಿ ವಿಶೇಷ ಪೂಜೆ/ಪ್ರಾರ್ಥನೆ/ಮಂಗಳಾರತಿ ಮಾಡುವಂತೆ ಸೂಚಿಸಲಾಗಿದೆ.