ರಾಜ್ಯದ ಬಹುತೇಕ ಕಡೆ ತಗ್ಗಿದ ವರುಣನ ಅಬ್ಬರ
* ಬೆಂಗಳೂರು, ಕೊಪ್ಪಳ, ಗದಗದಲ್ಲಿ ಉತ್ತಮ ಮಳೆ
* ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬಿಟ್ಟುಬಿಟ್ಟು ಮಳೆ
* ನರಗುಂದದಲ್ಲಿ ಧಾರಾಕಾರ ಮಳೆ, ಜನ ಜೀವನ ಅಸ್ತವ್ಯಸ್ತ
ಬೆಂಗಳೂರು(ಜು.18): ಕೆಲವು ದಿನಗಳಿಂದ ರಾಜ್ಯಾದ್ಯಂತ ಅಬ್ಬರಿಸುತ್ತಿದ್ದ ಮಳೆಯಾರ್ಭಟ ತಗ್ಗಿದ್ದು, ಕೊಡಗು, ದಕ್ಷಿಣ ಕನ್ನಡ, ಉತ್ತರಕನ್ನಡ, ಶಿವಮೊಗ್ಗ ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಶನಿವಾರ ಇಳಿಮುಖವಾಗಿದೆ. ಆದರೆ, ಬೆಂಗಳೂರು, ಕೊಪ್ಪಳ, ಗದಗ ಜಿಲ್ಲೆಯಲ್ಲಿ ಭರ್ಜರಿ ಮಳೆಯಾಗಿದೆ.
ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದು, ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಿದೆ. ಜಿಲ್ಲೆಯಲ್ಲಿ ಮಳೆಯ ಪ್ರಮಾಣ ತಗ್ಗಿರುವ ಹಿನ್ನೆಲೆಯಲ್ಲಿ ತುಂಬಿ ಹರಿಯುತ್ತಿದ್ದ ನದಿ ತೊರೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಇದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬಿಟ್ಟುಬಿಟ್ಟು ಮಳೆಯಾಗಿದೆ.
4 ದಿನ ವ್ಯಾಪಕ ಮಳೆ ಸಾಧ್ಯತೆ : ಮಲೆನಾಡಿಗೆ ಆರೆಂಜ್ ಅಲರ್ಟ್
ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಮೈಸೂರು, ಬೆಳಗಾವಿ, ಹುಬ್ಬಳ್ಳಿ ಸೇರಿದಂತೆ ಇನ್ನಿತರ ಜಿಲ್ಲೆಯಲ್ಲಿ ಮಳೆ ದುರ್ಬಲಗೊಂಡಿದ್ದು, ಜಿಟಿ ಜಿಟಿ ಮಳೆಯಾದರೆ, ಆದರೆ, ರಾಜಧಾನಿ ಬೆಂಗಳೂರಿನಲ್ಲಿ ಉತ್ತಮ ಮಳೆಯಾದರೆ, ಕೊಪ್ಪಳ, ಗದಗಿನ ನರಗುಂದದಲ್ಲಿ ಧಾರಾಕಾರ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.