ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 2026ರ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಮೈದಾನದ ಸುತ್ತಮುತ್ತಲಿನ ಪ್ರಮುಖ ರಸ್ತೆಗಳಲ್ಲಿ ಸಂಚಾರವನ್ನು ನಿರ್ಬಂಧ, ಪರ್ಯಾಯ ವ್ಯವಸ್ಥೆ

Republic day 2026 Bengaluru: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಾಳೆ ನಡೆಯಲಿರುವ ಗಣರಾಜ್ಯೋತ್ಸವ ಸಂಭ್ರಮಕ್ಕೆ ಸಿಲಿಕಾನ್ ಸಿಟಿ ಸಜ್ಜಾಗಿದ್ದು, ಬಿಗಿ ಭದ್ರತೆ ಹಾಗೂ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಾಣಿಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಸಿದ್ಧತೆ

ಬೆಂಗಳೂರಿನ ಹೃದಯಭಾಗದಲ್ಲಿರುವ ಮಾಣಿಕ್ ಷಾ ಪರೇಡ್ ಮೈದಾನವು 77ನೇ ಗಣರಾಜ್ಯೋತ್ಸವಕ್ಕೆ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರು ಮತ್ತು ಗಣ್ಯರಿಗಾಗಿ ಪಾಸ್‌ಗಳನ್ನು ವಿತರಿಸಲಾಗಿದ್ದು, ಸುಗಮ ಪ್ರವೇಶಕ್ಕಾಗಿ ವಿಶೇಷ 'ಕಲರ್ ಕೋಡ್' ವ್ಯವಸ್ಥೆಯನ್ನು ಮಾಡಲಾಗಿದೆ. ಪಾಸ್‌ನಲ್ಲಿರುವ ಬಣ್ಣಕ್ಕೆ ಅನುಗುಣವಾಗಿ ನಿಗದಿಪಡಿಸಿದ ಗೇಟ್‌ಗಳ ಮೂಲಕ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ವಿಶೇಷ ಪ್ರವೇಶ ಮತ್ತು ತುರ್ತು ವಾಹನಗಳ ವ್ಯವಸ್ಥೆ

ಮೈದಾನದ ಒಳಭಾಗಕ್ಕೆ ಸುಗಮ ಚಲನವಲನಕ್ಕಾಗಿ ಪ್ರತ್ಯೇಕ ಗೇಟ್‌ಗಳನ್ನು ನಿಗದಿಪಡಿಸಲಾಗಿದೆ. ಗೇಟ್ ಸಂಖ್ಯೆ 2 ಅನ್ನು ತುರ್ತು ಸೇವಾ ವಾಹನಗಳ ಸಂಚಾರಕ್ಕಾಗಿ ಕಾಯ್ದಿರಿಸಲಾಗಿದ್ದು, ಗೇಟ್ ಸಂಖ್ಯೆ 4ರ ಮೂಲಕ ಮಾಧ್ಯಮ ಪ್ರತಿನಿಧಿಗಳಿಗೆ ಪ್ರವೇಶ ಕಲ್ಪಿಸಲಾಗಿದೆ. ಭದ್ರತೆಯ ದೃಷ್ಟಿಯಿಂದ ಪ್ರತಿಯೊಬ್ಬರನ್ನು ತಪಾಸಣೆಗೊಳಪಡಿಸಿದ ನಂತರವೇ ಒಳಗೆ ಬಿಡಲು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಮಾಣಿಕ್ ಷಾ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಳಗ್ಗೆ 8.30 ರಿಂದ 10.30ರವರೆಗೆ ಮಾಣಿಕ್ ಷಾ ಮೈದಾನದ ಸುತ್ತಮುತ್ತಲ ರಸ್ತೆಗಳಲ್ಲಿ ಸಾಮಾನ್ಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಮುಖ್ಯವಾಗಿ ಕಬ್ಬನ್ ರಸ್ತೆ, ಕಾಮರಾಜ ರಸ್ತೆ ಹಾಗೂ ಬಿ.ಆರ್.ವಿ ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಳ್ಳಲಿದ್ದು, ಸಾರ್ವಜನಿಕರು ಪರ್ಯಾಯ ರಸ್ತೆಗಳನ್ನು ಬಳಸುವಂತೆ ನಗರ ಸಂಚಾರ ಪೊಲೀಸರು ಸೂಚಿಸಿದ್ದಾರೆ.

ಸಂಚಾರ ದಟ್ಟಣೆ ತಪ್ಪಿಸಲು ಪರ್ಯಾಯ ಮಾರ್ಗಗಳು

ಇನ್ಫೆಂಟ್ರಿ ರಸ್ತೆಯಿಂದ ಮಣಿಪಾಲ್ ಸೆಂಟರ್ ಕಡೆಗೆ ಸಾಗುವ ವಾಹನಗಳು ಸಫೀನಾ ಪ್ಲಾಜಾ ಬಳಿ ಎಡ ತಿರುವು ಪಡೆದು, ಮೈನ್ ಗಾರ್ಡ್ ರಸ್ತೆ, ಆಲೀಸ್ ಸರ್ಕಲ್ ಮತ್ತು ಡಿಸ್ಪೆನ್ಸರಿ ರಸ್ತೆ ಮಾರ್ಗವಾಗಿ ಕಾಮರಾಜ ರಸ್ತೆ ಜಂಕ್ಷನ್ ತಲುಪಬೇಕು. ಅಲ್ಲಿಂದ ಬಲಕ್ಕೆ ತಿರುವು ಪಡೆದು ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಲು ವ್ಯವಸ್ಥೆ ಮಾಡಲಾಗಿದೆ. ವಾಹನ ಸವಾರರು ಈ ಬದಲಾವಣೆಗಳನ್ನು ಗಮನಿಸಿ ಸಹಕರಿಸಲು ಕೋರಲಾಗಿದೆ.

ವಾಹನ ನಿಲುಗಡೆಗೆ ಕಟ್ಟುನಿಟ್ಟಿನ ನಿಷೇಧ

ಭದ್ರತಾ ಕಾರಣಗಳಿಗಾಗಿ ಮೈದಾನದ ಸುತ್ತಮುತ್ತಲ ಪ್ರಮುಖ ವೃತ್ತಗಳಲ್ಲಿ ಪಾರ್ಕಿಂಗ್ ಅನ್ನು ನಿಷೇಧಿಸಲಾಗಿದೆ. ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತ, ಶಿವಾಜಿನಗರ ಬಸ್ ನಿಲ್ದಾಣ, ಕಬ್ಬನ್ ರಸ್ತೆ ಹಾಗೂ ಎಂ.ಜಿ. ರಸ್ತೆಯ ಕ್ವೀನ್ಸ್ ವೃತ್ತದವರೆಗೆ ಯಾವುದೇ ವಾಹನಗಳನ್ನು ನಿಲ್ಲಿಸುವಂತಿಲ್ಲ. ನಿಯಮ ಉಲ್ಲಂಘಿಸುವ ವಾಹನಗಳನ್ನು ತೆರವುಗೊಳಿಸಲು ವಿಶೇಷ ಟೋಯಿಂಗ್ ವಾಹನಗಳನ್ನು ನಿಯೋಜಿಸಲಾಗಿದೆ.