ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವರುಣ ಕ್ಷೇತ್ರದ ಕುಪ್ಯಾ ಗ್ರಾಮದಲ್ಲಿ 323 ಕೋಟಿ ರೂಪಾಯಿ ವೆಚ್ಚದ ಬೃಹತ್ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ಸರ್ಕಾರದ ಅಭಿವೃದ್ಧಿ ಕಾರ್ಯಗಳು ಟೀಕಾಕಾರರಿಗೆ ತಕ್ಕ ಉತ್ತರ ಎಂದರು.
ಮೈಸೂರು (ಜ.18): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಸ್ವಕ್ಷೇತ್ರವಾದ ವರುಣದ ಕುಪ್ಯಾ ಗ್ರಾಮದಲ್ಲಿ ಸುಮಾರು 323 ಕೋಟಿ ರೂಪಾಯಿಗಳ ಬೃಹತ್ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ ಸಿಎಂ, ಬಳಿಕ ರಿಮೋಟ್ ಬಟನ್ ಒತ್ತುವ ಮೂಲಕ ಅಧಿಕೃತವಾಗಿ ಶಂಕುಸ್ಥಾಪನೆ ನೆರವೇರಿಸಿದರು. ಕ್ಷೇತ್ರದಲ್ಲಿ ನಡೆಯುತ್ತಿರುವ ಈ ಬೃಹತ್ ಕಾಮಗಾರಿಗಳು ವರುಣದ ಚಿತ್ರಣವನ್ನೇ ಬದಲಿಸಲಿವೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.
ಟೀಕಾಕಾರರಿಗೆ ಅಭಿವೃದ್ಧಿಯ ಮೂಲಕವೇ ಉತ್ತರ: ಯತೀಂದ್ರ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಮಾತನಾಡಿದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಅವರು ವಿರೋಧ ಪಕ್ಷಗಳ ಟೀಕೆಗಳಿಗೆ ತಕ್ಕ ಪ್ರತ್ಯುತ್ತರ ನೀಡಿದರು. ಸರ್ಕಾರದಲ್ಲಿ ಹಣವಿಲ್ಲ ಎಂದು ಟೀಕಿಸುವವರಿಗೆ ನಾವು ಹಮ್ಮಿಕೊಂಡಿರುವ ಈ ಸಾಲು ಸಾಲು ಅಭಿವೃದ್ಧಿ ಕಾಮಗಾರಿಗಳೇ ಉತ್ತರ. ವರುಣ ಕ್ಷೇತ್ರ ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ಇಂದು ಅಭಿವೃದ್ಧಿ ಕೆಲಸಗಳು ವೇಗವಾಗಿ ನಡೆಯುತ್ತಿವೆ ಎಂದರು.
ವರುಣ ಜನರ ಋಣ ತೀರಿಸಲು ಸಾಧ್ಯವಿಲ್ಲ
ಕ್ಷೇತ್ರದ ಜನರೊಂದಿಗಿನ ಭಾವನಾತ್ಮಕ ಸಂಬಂಧವನ್ನು ಸ್ಮರಿಸಿದ ಯತೀಂದ್ರ ಅವರು, ಸಿದ್ದರಾಮಯ್ಯ ಅವರು ವರುಣ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಬಳಿಕ ವಿಪಕ್ಷ ನಾಯಕರಾದರು, ಇಂದು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಅವರು ಇಷ್ಟು ದೀರ್ಘಾವಧಿ ಸಿಎಂ ಆಗಲು ವರುಣ ಕ್ಷೇತ್ರದ ಜನತೆಯ ಆಶೀರ್ವಾದವೇ ಕಾರಣ. ನಿಮ್ಮ ಪ್ರೀತಿ ಮತ್ತು ಅಭಿಮಾನಕ್ಕೆ ನಾವು ಸದಾ ಚಿರಋಣಿ, ನಿಮ್ಮ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ ಎಂದು ಭಾವುಕರಾಗಿ ನುಡಿದರು.
ಸಂವಿಧಾನ ರಕ್ಷಿಸುವವರಿಗೆ ಬೆಂಬಲ ನೀಡಿ
ಇದೇ ವೇಳೆ ಸಂವಿಧಾನದ ಮಹತ್ವದ ಬಗ್ಗೆ ಮಾತನಾಡಿದ ಅವರು, ಸಂವಿಧಾನಕ್ಕೆ ಅಪಾಯ ಬಂದಾಗ ನಾವೆಲ್ಲರೂ ಒಟ್ಟಾಗಬೇಕು. ಸಂವಿಧಾನದ ಮೌಲ್ಯಗಳನ್ನು ಗೌರವಿಸುವ ಮತ್ತು ರಕ್ಷಿಸುವವರನ್ನು ನಾವು ಬೆಂಬಲಿಸಬೇಕು ಹಾಗೂ ಅಂತವರನ್ನು ಅಧಿಕಾರಕ್ಕೆ ತರಬೇಕು. ನಿಮ್ಮೆಲ್ಲರ ಆಶೀರ್ವಾದ ನಮ್ಮ ಮೇಲೆ ಸದಾ ಹೀಗೆಯೇ ಇರಲಿ ಎಂದು ಮನವಿ ಮಾಡಿದರು.


