ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಲ್ಪಸಂಖ್ಯಾತರು ವಾಸಿಸುವ ಕಾಲೋನಿಗಳ ಅಭಿವೃದ್ಧಿಗಾಗಿ 600 ಕೋಟಿ ರು. ವೆಚ್ಚದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಸಚಿವ ಎಚ್.ಕೆ. ಪಾಟೀಲ್ ಈ ಮಾಹಿತಿ ನೀಡಿದ್ದು, ಈ ನಿರ್ಧಾರಕ್ಕೂ ದಾವಣಗೆರೆ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು (ಮೇ.1}: ರಾಜ್ಯದಲ್ಲಿ ಅಲ್ಪಸಂಖ್ಯಾತರು ವಾಸಿಸುತ್ತಿರುವ ಕಾಲೋನಿಗಳ ಅಭಿವೃದ್ಧಿಗಾಗಿ 600 ಕೋಟಿ ರು. ವೆಚ್ಚದ ಕಾಮಗಾರಿಗಳ ಅನುಷ್ಠಾನಕ್ಕೆ ಸಿದ್ಧಪಡಿಸಿರುವ ಕ್ರಿಯಾ ಯೋಜನೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರು ವಾಸಿಸುತ್ತಿರುವ ಕಾಲೋನಿಗಳ ಅಭಿವೃದ್ಧಿಗೆ ಸಿದ್ಧಪಡಿಸಿರುವ ಕ್ರಿಯಾ ಯೋಜನೆಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ. 2026-27 ಹಾಗೂ 2027-28ನೇ ಸಾಲಿಗೆ 600 ಕೋಟಿ ರು. ವೆಚ್ಚದ ಕ್ರಿಯಾಯೋಜನೆ ರೂಪಿಸಿ ಕಾಮಗಾರಿ ಅನುಷ್ಠಾನಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.
ದಾವಣಗೆರೆ ದಕ್ಷಿಣ ಕ್ಷೇತ್ರದ ವಿವಾದದ ಬಳಿಕ ಅಲ್ಪಸಂಖ್ಯಾತರ ಓಲೈಕೆಗೆ ಈ ನಿರ್ಧಾರವೇ ಎಂಬ ಸುದ್ದಿಗಾರರ ಪ್ರಶ್ನೆಗೆ, ‘ಇದು ರಾಜಕೀಯ ಪ್ರಶ್ನೆ. ಸಂಪುಟದ ಈ ತೀರ್ಮಾನಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಈ ಹಿಂದೆ ಹಲವು ಬಾರಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿ ಯೋಜನೆಗೆ ಅಂಗೀಕಾರ ದೊರೆತಿದೆ. ಜತೆಗೆ ಇದು ತರಾತುರಿಯಲ್ಲಿ ಸಿದ್ಧಪಡಿಸಿದ ಕ್ರಿಯಾಯೋಜನೆ ಅಲ್ಲ. ಹೀಗಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆ ಬಳಿಕದ ಬೆಳವಣಿಗೆಗಳಿಗೂ ಇದಕ್ಕೂ ಸಂಬಂಧ ಕಲ್ಪಿಸುವುದು ಸರಿಯಲ್ಲ’ ಎಂದು ಎಚ್.ಕೆ. ಪಾಟೀಲ್ ಹೇಳಿದರು.
ದಾವಣಗೆರೆ ವಿವಾದಕ್ಕೂಇದಕ್ಕೂ ಸಂಬಂಧವಿಲ್ಲ
ಈ ಹಿಂದೆ ಹಲವು ಬಾರಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿ ಯೋಜನೆಗೆ ಅಂಗೀಕಾರ ದೊರೆತಿದೆ. ಜತೆಗೆ ಇದು ತರಾತುರಿಯಲ್ಲಿ ಸಿದ್ಧಪಡಿಸಿದ ಕ್ರಿಯಾಯೋಜನೆ ಅಲ್ಲ. ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆ ಬಳಿಕದ ಬೆಳವಣಿಗೆಗಳಿಗೂ ಇದಕ್ಕೂ ಸಂಬಂಧ ಕಲ್ಪಿಸುವುದು ಸರಿಯಲ್ಲ.
- ಎಚ್.ಕೆ. ಪಾಟೀಲ್, ಸಚಿವ

